ಹುಬ್ಬಳ್ಳಿ: ‘ಕಟ್ಟಡ ಕಾರ್ಮಿಕರು ಹಾಗೂ ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಸರ್ಕಾರದ ಯೋಜನೆಗಳು ಸಮರ್ಪಕವಾಗಿ ತಲುಪುತ್ತಿಲ್ಲ. ಈ ಹಿನ್ನೆಲೆಯಲ್ಲಿ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಏಪ್ರಿಲ್ 12ಕ್ಕೆ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಒಕ್ಕೂಟದಿಂದ ಕಾರ್ಮಿಕ ಭವನ ಚಲೋ ಹಮ್ಮಿಕೊಳ್ಳಲಾಗಿದೆ’ ಎಂದು ಸಂಘಟನೆಯ ಅಧ್ಯಕ್ಷ ದುರ್ಗಪ್ಪ ಚಿಕ್ಕತುಂಬಳ ಹೇಳಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಏಪ್ರಿಲ್ 12ರ ಬೆಳಿಗ್ಗೆ 11ಕ್ಕೆ ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣದಿಂದ ಕಾರ್ಮಿಕ ಭವನದ ವರೆಗೆ ಜಾಥಾ ನಡೆಸಲಾಗುವುದು. ಇದರಲ್ಲಿ ನೂರಾರು ಜನ ಕಾರ್ಮಿಕರು ಪಾಲ್ಗೊಳ್ಳಲಿದ್ದಾರೆ’ ಎಂದರು.
‘ಹಿರಿಯ ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ ನೀಡುವುದಕ್ಕೆ ದ್ವಂದ್ವ ಅನುಸರಿಸಲಾಗುತ್ತಿದೆ. ಶೈಕ್ಷಣಿಕ ಧನ ಸಹಾಯದ ಎಸ್ಎಸ್ಪಿ ತಂತ್ರಾಂಶದಲ್ಲಿ ಹಲವು ತಾಂತ್ರಿಕ ದೋಷಗಳಿದ್ದು, ಇವುಗಳನ್ನು ಸರಿಪಡಿಸಬೇಕು. ಸೇವಾ ಸಿಂಧು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿ, ಅದರ ಅವಧಿಯನ್ನು ಜೂನ್ 30ರ ವರೆಗೆ ವಿಸ್ತರಿಸಬೇಕು’ ಎಂದು ಆಗ್ರಹಿಸಿದರು.
‘ಹುಬ್ಬಳ್ಳಿ ಕಾರ್ಮಿಕ ಭವನವು ಸಮಸ್ಯೆಯ ಆಗರವಾಗಿದೆ. ಕಾರ್ಮಿಕರು ಕುಳಿತುಕೊಳ್ಳಲು ಸೂಕ್ತ ಆಸನ ವ್ಯವಸ್ಥೆ ಇಲ್ಲ. ಕುಡಿಯುವ ನೀರಿನ ಸೌಲಭ್ಯ ಇಲ್ಲ. ಈ ಎಲ್ಲ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುವುದು’ ಎಂದು ಹೇಳಿದರು.
ವಾಸು ಲಮಾಣಿ, ರಫೀಕ ಅಹ್ಮದ್ ಬಡೇಮಿಯಾ, ಮಾಬುಸಾಬ್ ಸುಂಕದ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.