ADVERTISEMENT

ಕಾಮಗಾರಿ ವಿಳಂಬಕ್ಕೆ ಜಿಲ್ಲಾಧಿಕಾರಿ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2012, 7:03 IST
Last Updated 7 ಡಿಸೆಂಬರ್ 2012, 7:03 IST

ಗಜೇಂದ್ರಗಡ: ಪಟ್ಟಣದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಗುರುವಾರ ಜಿಲ್ಲಾಧಿಕಾರಿ ಪಾಂಡುರಂಗ ನಾಯಕ್ ಪರಿಶೀಲಿಸಿದರು.

ಪುರಸಭೆ ವತಿಯಿಂದ ಇಲ್ಲಿಯ ಹೊರವಲಯದಲ್ಲಿ ನಿರ್ಮಾಣ ಗೊಳ್ಳುತ್ತಿರುವ ನೂತನ ಉದ್ಯಾನಕ್ಕೆ ಭೇಟಿ ನೀಡಿದ ಅವರು, ಉದ್ಯಾನಗಳು ನಮ್ಮ ಆರೋಗ್ಯಯುತ ಬದುಕಿಗೆ ಪೂರಕ ವಾತಾವರಣವನ್ನು ಒದಗಿಸುತ್ತವೆ. ಇದಕ್ಕಾಗಿ ಉದ್ಯಾನಗಳ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಬಳಿಕ ಕುಷ್ಟಗಿ ರಸ್ತೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ವಸತಿ ನಿಲಯ ಕಾಮಗಾರಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಕಾಮಗಾರಿ ವಿಳಂಬಕ್ಕೆ ನಿರ್ಮಿತಿ ಕೇಂದ್ರದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಕಳೆದ 2-3 ವರ್ಷಗಳಿಂದ ಕಾಮಗಾರಿ ನಡೆಯುತ್ತಿದೆ. ಹೀಗಿದ್ದರೂ ಕಾಮಗಾರಿ ಪೂರ್ಣಗೊಳಿಸಲು ಏಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದ ಅವರು, ಸಂಬಂಧಿಸಿದ ಎಂಜಿನಿಯರ್ ಹಾಗೂ ಗುತ್ತಿಗೆದಾರರಿಗೆ ನೋಟಿಸ್ ಜಾರಿಗೊಳಿಸುವಂತೆ ನಿರ್ಮಿತಿ ಕೇಂದ್ರಕ್ಕೆ ಸೂಚಿಸಿದರು.

ಸರ್ಕಾರಿ ಕಾಮಗಾರಿಗಳಲ್ಲಿ ವಿಳಂಬ ನೀತಿ ಹಾಗೂ ಕಳಪೆ ಕಾಮಗಾರಿಗಳನ್ನು ನಡೆಸಿದ ಬಗ್ಗೆ ದೂರುಗಳು ಕೇಳಿ ಬಂದರೆ, ಸಂಬಂಧಿಸಿದ ಎಂಜಿನಿಯರ್ ಹಾಗೂ ಗುತ್ತಿಗೆದಾರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.

ಗಜೇಂದ್ರಗಡ ವಿಶೇಷ ತಹಶೀಲ್ದಾರ ಸಿ.ಎಂ. ಕಲಹಾಳ, ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಬೀಳಗಿ, ಸಹಾಯಕ ಎಂಜಿನಿಯರ್ ಪಿ.ಎನ್. ದೊಡ್ಡಮನಿ, ಹಿರಿಯ ಆರೋಗ್ಯ ನಿರೀಕ್ಷಕ ಎಂ.ಬಿ. ನಿಡಶೇಸಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.