ಗದಗ: ಖಾಸಗಿ ವಿಶ್ವವಿದ್ಯಾನಿಲಯಗಳ ಸ್ಥಾಪನೆಗೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ರೂಪಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ನಗರದ ಗಾಂಧೀ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ರಾಜ್ಯ ಸರ್ಕಾರ ಮತ್ತಷ್ಟು ಖಾಸಗಿ ವಿವಿ ಸ್ಥಾಪನೆಗೆ ಹಸಿರು ನಿಶಾನೆ ತೋರಿದೆ. ಆದರೆ ಸ್ಪಷ್ಟ ಮಾರ್ಗ ಸೂಚಿಗಳಿಲ್ಲದೇ ವಿವಿ ಪ್ರಾರಂಭಕ್ಕೆ ಅನುಮತಿ ನೀಡಲು ಹೊರಟಿರುವ ಸರ್ಕಾರದ ಕ್ರಮ ಅನುಮಾನಗಳಿಗೆ ಕಾರಣವಾಗಿದೆ.
ಈಗಾಗಲೇ ಯುಜಿಸಿಯ ಕಪ್ಪು ಪಟ್ಟಿಯಲ್ಲಿ ಸೇರಿರುವ ಹಲವು ಡೀಮ್ಡ ವಿವಿಗಳು ಬೇರೆ ಬೇರೆ ಹೆಸರಿನಲ್ಲಿ ಖಾಸಗಿ ವಿವಿಗಳ ಸ್ಥಾಪನೆಗೆ ಮುಂದಾಗಿರುವ ಮಾಹಿತಿದೆ. ಸರ್ಕಾರದ ಇದನ್ನು ಲಘುವಾಗಿ ಪರಿಗಣಿಸಬಾರದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ವಿವಿಗಳು ಸಾಮಾಜಿಕ ನ್ಯಾಯಕ್ಕೆ ಅನುಗುಣವಾಗಿ ಎಲ್ಲ ವಿದ್ಯಾರ್ಥಿಗಳು ಭರಿಸುವಂತಹ ಶುಲ್ಕ ನೀತಿ, ಮೀಸಲಾತಿ, ರೋಸ್ಟರ್ ಪದ್ಧತಿ ಅಳವಡಿಸುವಂತೆ ಹಾಗೂ ಸರ್ಕಾರದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಕಾರ್ಯ ನಿರ್ವಹಣೆ ಮಾಡುವ ವ್ಯವಸ್ಥೆ ರೂಪಿಸಬೇಕು ಎಂದು ಒತ್ತಾಯಿಸಿದರು.
ಖಾಸಗಿ ವಿವಿಗಳಲ್ಲಿ ಶೇ. 50ರಷ್ಟು ಸೀಟುಗಳನ್ನು ರಾಜ್ಯದವರಿಗೆ ಮತ್ತು ಪ್ರತಿಭಾವಂತ ಬಡ, ದಲಿತ ವಿದ್ಯಾರ್ಥಿ ಗಳಿಗೆ ಮೀಸಲಿಡಬೇಕು. ಶೇ. 50ರಷ್ಟು ವಿದ್ಯಾರ್ಥಿಗಳ ಶುಲ್ಕವನ್ನು ಸರ್ಕಾರವೇ ನಿಗದಿಪಡಿಸಬೇಕು. ವಿವಿಗಳ ಶುಲ್ಕ ನೀತಿ ಸರಂಚನಾ ಸಮಿತಿಯಲ್ಲಿ ವಿಧಾನಸಭೆ ಮತ್ತು ವಿಧಾನಪರಿಷತ್ತಿನಿಂದ ಇಬ್ಬರು ಜನಪ್ರತಿನಿಧಿಗಳನ್ನು ನಾಮ ನಿರ್ದೇಶನ ಮಾಡಬೇಕು ಹಾಗೂ ವಿಶ್ರಾಂತ ಕುಲಪತಿ ನೇತೃತ್ವದಲ್ಲಿ ಸಮಿತಿ ರಚಿಸ ಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ನಗರ ಅಧ್ಯಕ್ಷೆ ಬಿ.ಎನ್.ತಾರಾ, ಜಿಲ್ಲಾ ಸಂಚಾಲಕ ಸುರೇಶ ಬಾಳಿಕಾಯಿ, ಶರಣು ಚೌಧರಿ, ಅರುಣ ಗುಳಬಾಳ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.