ಗದಗ: ಶೈಕ್ಷಣಿಕ ವರ್ಷದ ಪ್ರಾರಂಭದಲ್ಲಿ ಶಾಲೆಯಲ್ಲಿ ಹಬ್ಬದ ವಾತಾವರಣ ನಿರ್ಮಿಸುವುದರ ಜತೆಗೆ ಶಿಕ್ಷಕರು ಪಠ್ಯ ವಿಷಯಗಳಲ್ಲಿ ಪೂರ್ವ ತಯಾರಿ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯ್ತಿ ಸಿಇಒ ವಿ.ಜಿ. ತುರಮರಿ ಸಲಹೆ ನೀಡಿದರು.
ಸ್ಥಳೀಯ ಲೋಯೋಲಾ ಪ್ರೌಢಶಾಲೆಯಲ್ಲಿ ಗದಗ ಶಹರ ಹಾಗೂ ಗ್ರಾಮೀಣ ವಲಯದ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರಿಗೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕ ಆಯೋಜಿಸಿದ್ದ ಸೇತುಬಂಧ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಮಗುವಿಗೆ ಹೇಳಿದ ವಿಷಯ ನೆನಪಿನಲ್ಲಿ ಉಳಿಯುವಂತಾಗಬೇಕು. ಅದಕ್ಕಾಗಿ ಶಿಕ್ಷಕರು ಪೂರ್ವ ಸಿದ್ಧತೆ ಮಾಡಿಕೊಂಡಿರಬೇಕು. ಮಗುವಿನಲ್ಲಿ ಶಕ್ತಿ ಮತ್ತು ಸಾಮರ್ಥ್ಯ ಇದ್ದು, ಸೂಕ್ತ ಪ್ರೋತ್ಸಾಹದ ಅಗತ್ಯತೆ ಇದೆ ಎಂದು ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಜೀವ ನಾಯಕ ಮಾತನಾಡಿ, ಸೇತುಬಂಧ ಕಾರ್ಯಾಗಾರ ಪ್ರಾರಂಭಿಕ ಹಂತದಲ್ಲಿ ವಿದ್ಯಾರ್ಥಿಗಳಿಗೆ ಮಾಡಬೇಕಾದ ಕಾರ್ಯವಾಗಿದೆ. ಇದರ ನಂತರವೂ ಪೂರಕ ಬೋಧನೆ ಕಾರ್ಯ ಮುಂದುವರೆಯಬೇಕು ಎಂದರು.
ಗದಗ ಶಹರ ಹಾಗೂ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಐ.ಬಿ. ಬೆನಕೊಪ್ಪ, ಎಸ್. ಎಸ್. ಗುಡ್ಲಾನೂರ, ಬಿ.ಆರ್.ಸಿ. ಸಮನ್ವಯಾಧಿಕಾರಿ ವಿ.ವಿ. ನಡುವಿನಮನಿ, ಎಂ.ಪಿ. ಚಿಂಚೇವಾಡಿ, ಶಹರ ಅಧ್ಯಕ್ಷ ಬಿ.ಬಿ. ಕುಂದಗೋಳ ಹಾಜರಿದ್ದರು. ಜಿಲ್ಲಾ ಪಂಚಾಯ್ತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಎಸ್. ದೊಡ್ಡಗೌಡ್ರ ಅಧ್ಯಕ್ಷತೆ ವಹಿಸಿದ್ದರು.
ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಎನ್. ಬಳ್ಳಾರಿ ಮಾತನಾಡಿದರು. ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ಬಿ.ಎಫ್. ಪೂಜಾರ ಸ್ವಾಗತಿಸಿದರು, ಎಸ್.ಎಸ್. ಗೌಡರ ಪ್ರಾರ್ಥಿಸಿದರು. ಸಿಆರ್ಪಿ ಶಿವಾನಂದ ಗಿಡ್ನಂದಿ ನಿರೂಪಿಸಿದರು, ಎಸ್.ಎಸ್. ಉಣ್ಣಿಮಠ ವಂದಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.