ADVERTISEMENT

`ಪರಿಸರ ಸಂರಕ್ಷಣೆಗೆ ಮುಂದಾಗಿ'

​ಪ್ರಜಾವಾಣಿ ವಾರ್ತೆ
Published 8 ಜುಲೈ 2013, 5:11 IST
Last Updated 8 ಜುಲೈ 2013, 5:11 IST

ಗಜೇಂದ್ರಗಡ: ಮನುಷ್ಯನ ಆರೋಗ್ಯಯುತ ಬದುಕಿಗೆ ಸುಂದರ ಪರಿಸರ ಅವಶ್ಯ. ಈ ಹಿನ್ನೆಲೆಯಲ್ಲಿ ಮನುಷ್ಯ ಪರಿಸರ ಸಂರಕ್ಷಣೆಗೆ ಮುಂದಾಗುವುದು ಅಗತ್ಯ ಎಂದು ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಮುಖಂಡ ಆರ್.ನಾರಾಯಣರಾವ್ ಅಭಿಪ್ರಾಯಪಟ್ಟರು.

ಸಮೀಪದ ಕೊಡಗಾನೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಆಂಜನೇಯ ಸ್ವ-ಸಹಾಯ ಸಂಘದ ಸಂಯುಕ್ತಾಶ್ರಯದಲ್ಲಿ ಈಚೆಗೆ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅಭಿವೃದ್ಧಿ ಹೆಸರಿನಲ್ಲಿ ಪರಿಸರ ಸಂಪತ್ತನ್ನು ನಾಶಪಡಿಸಲಾಗುತ್ತಿದೆ. ಹೀಗಾಗಿ ಒಂದೆಡೆ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದ್ದರೆ ಮತ್ತೊಂದೆಡೆ ಪ್ರಕೃತಿ ವಿಕೋಪಗಳು ಹೆಚ್ಚುತ್ತಿವೆ ಎಂದರು.

ಅರಣ್ಯ ಸಂಪತ್ತಿನ ರಕ್ಷಣೆಗೆ ಕೇವಲ ಇಲಾಖೆಗಳು ಮಾತ್ರವಲ್ಲದೆ ನಾಗರಿಕರು ಮುಂದಾಗಬೇಕು. ಪರಿಸರ ಸಂರಕ್ಷಣೆಗೆ ಸಂಬಂಧಿಸಿಂತೆ ಸರ್ಕಾರ ರೂಪಿಸಿರುವ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಕೇವಲ ಕಾಟಾಚಾರಕ್ಕಾಗಿ ಅನುಷ್ಠಾನಗೊಳಿಸದೇ, ಯೋಜನೆಯ ಸಾರ್ಥಕತೆಗಾಗಿ ಎಲ್ಲರೂ ಶ್ರಮಿಸಬೇಕು ಎಂದು ಹೇಳಿದರು.

ಪ್ರತಿಭಾವಂತ ವಿದ್ಯಾರ್ಥಿ ಪ್ರಕಾಶ ನಡಕಟ್ಟಿನ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಶಿಕ್ಷಕರಾದ ಎ.ಜಿ.ಬೂದಿಹಾಳ, ಎಂ.ಎಸ್.ಬಣ್ಣದ, ಎಂ.ಟಿ.ಕೆಂಪಣ್ಣವರ, ಗಿರೀಶ ಸಂಕನೂರ, ಎಂ.ಡಿ.ಸರಕಾವಸ್ ಸ್ವ ಸಹಾಯ ಸಂಘದ ಸದಸ್ಯರು ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.