ADVERTISEMENT

ಬಾಲಕ ಸಾವು: ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2011, 6:20 IST
Last Updated 9 ಅಕ್ಟೋಬರ್ 2011, 6:20 IST

ಗದಗ: ವೈದ್ಯರ ನಿರ್ಲಕ್ಷ್ಯತನದಿಂದಾಗಿ ಬಾಲಕ ಮೃತಪಟ್ಟಿದ್ದಾನೆ ಎಂದು ಆರೋಪಿಸಿ ಪಾಲಕರು ಹಾಗೂ ಗ್ರಾಮಸ್ಥರು ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ಶವ ಇಟ್ಟು ಪ್ರತಿಭಟನೆ ನಡೆಸಿದ ಘಟನೆ ತಾಲ್ಲೂಕಿನ ಲಕ್ಕುಂಡಿಯಲ್ಲಿ ಶನಿವಾರ ಜರುಗಿದೆ.

ಹಿನ್ನೆಲೆ: ಗ್ರಾಮದ ಹಾಲಗೊಂಡ ಕೆರೆ ಬಳಿ ಆಟವಾಡುತ್ತಿದ್ದಾಗ ಕಾಲು ಜಾರಿ ಕೆರೆಗೆ ಬಿದ್ದು ಮಹಾಂತೇಶ ಗಡಗಿ (8) ಎಂಬ ಬಾಲಕ ಕೆರೆಯಲ್ಲಿ ಬಿದ್ದು ತೀವ್ರ ಅಸ್ವಸ್ಥನಾಗಿದ್ದ, ಕೂಡಲೇ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತರಲಾಗಿತ್ತು. ಆದರೆ ಅಲ್ಲಿನ ಸಿಬ್ಬಂದಿ ಬಾಲಕನಿಗೆ ಯಾವುದೇ ಪ್ರಾಥಮಿಕ ಚಿಕಿತ್ಸೆ ನೀಡದೆ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸೂಚಿಸಿ ದರು. ಪಾಲಕರು ಬಾಲಕನನ್ನು ಜಿಲ್ಲಾ ಆಸ್ಪತ್ರೆಗೆ ತರುವಾಗ ದಾರಿ ಮಧ್ಯದಲ್ಲಿಯೇ ಮೃತಪಟ್ಟಿದ್ದಾನೆ.

ಇದರಿಂದ ಆಕ್ರೋಶಗೊಂಡ ಪಾಲ ಕರು ಹಾಗೂ ಗ್ರಾಮಸ್ಥರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿಯೇ ಚಿಕಿತ್ಸೆ ನೀಡಿದ್ದರೆ ಇಂತಹ ಘಟನೆ ನಡೆಯುತ್ತಿರಲಿಲ್ಲ ಎಂದು ಆರೋಪಿಸಿ ದರು. ಆಸ್ಪತ್ರೆಯ ಅವ್ಯವಸ್ಥೆಯ ವಿರುದ್ಧ ಅಕ್ರೋಶಗೊಂಡು ಆಸ್ಪತ್ರೆಯ ಸಿಬ್ಬಂದಿಯನ್ನು ಹೊರ ಹಾಕಿ ಬೀಗ ಜಡಿದು ಆರೋಗ್ಯ ಕೇಂದ್ರದ ಮುಂದೆ ಕೆಲಕಾಲ ಬಾಲಕನ ಶವ ಇಟ್ಟು ಪ್ರತಿಭಟನೆ ನಡೆಸಿದರು.

ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಡಿ.ಬಿ. ಚನ್ನಶೆಟ್ಟಿ ಪರಿಸ್ಥಿತಿ ತಿಳಿಗೊಳಿಸಲು ಹರ ಸಾಹಸ ಪಡಬೇಕಾಯಿತು. ಕೂಡಲೇ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಾಯಂ ವೈದ್ಯರನ್ನು ನೇಮಕ ಮಾಡು ವಂತೆ ಸಾರ್ವಜನಿಕರು ಒತ್ತಾಯಿಸಿ ದರು. ಒತ್ತಾಯಕ್ಕೆ ಮಣಿದ ಆರೋಗ್ಯ ಅಧಿಕಾರಿಗಳು ಆಸ್ಪತ್ರೆಗೆ ವೈದ್ಯಾಧಿಕಾರಿ ನೇಮಕ ಮಾಡಿದ ಪತ್ರ ನೀಡಿದಾಗ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿ ತು. ಪ್ರತಿಭಟನೆಯಲ್ಲಿ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಲ್ಲಿ ಕಾರ್ಜುನ ಉಮಚಗಿ, ಕೆಂಚಪ್ಪ ಪೂಜಾರ, ಶರಣಪ್ಪ ಕಮತರ, ಅಶೋಕ ಮೇಟಿ, ಹೊನ್ನಪ್ಪ ಹಾರೋಗೇರಿ, ಸಲೀಂ ಬೂದಿಹಾಳ, ನಾಗರಾಜ ಕಲ್ಲೂರ, ವಾಸಿಮ್ ಮೂಲಿ ಮನಿ ಮತ್ತಿತರರು ಹಾಜರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.