ADVERTISEMENT

ಮುಂಗಾರು ಪೂರ್ವ ಕೃಷಿ ಚಟುವಟಿಕೆ ಜೋರು

ಹೆಸರು ಬಿತ್ತನೆ ಬೀಜಕ್ಕೆ ಹೆಚ್ಚಿದ ಬೇಡಿಕೆ; ಕೃಷಿ ಇಲಾಖೆಯಿಂದ ಅಗತ್ಯ ದಾಸ್ತಾನು

ಜೋಮನ್ ವರ್ಗಿಸ್
Published 22 ಮೇ 2018, 11:15 IST
Last Updated 22 ಮೇ 2018, 11:15 IST
ಮುಂಗಾರು ಪೂರ್ವ ಕೃಷಿ ಚಟುವಟಿಕೆ ಜೋರು
ಮುಂಗಾರು ಪೂರ್ವ ಕೃಷಿ ಚಟುವಟಿಕೆ ಜೋರು   

ಗದಗ: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಒಟ್ಟು 2.40 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿಯನ್ನು ಕೃಷಿ ಇಲಾಖೆ ಹಾಕಿಕೊಂಡಿದೆ. ಇದಕ್ಕೆ ಬೇಕಾದ ಅಗತ್ಯ ಬಿತ್ತನೆ ಬೀಜ, ರಸಗೊಬ್ಬರದ ದಾಸ್ತಾನನ್ನೂ ಮಾಡಿಕೊಂಡಿದೆ.

ಹೆಸರು, ತೊಗರಿ, ಮೆಕ್ಕೆಜೋಳ, ಶೇಂಗಾ, ಬಿಟಿ ಹತ್ತಿ ಜಿಲ್ಲೆಯ ಪ್ರಮುಖ ಮುಂಗಾರು ಬೆಳೆಗಳು. ಈಗಾಗಲೇ ಕೆಲವೆಡೆ ಹೆಸರು ಮತ್ತು ಹೈಬ್ರಿಡ್‌ ಜೋಳದ ಬಿತ್ತನೆ ಬೀಜದ ಮಾರಾಟ ಪ್ರಾರಂಭವಾಗಿದೆ. ಸಮೀಪದ ಸಹಕಾರಿ ಸಂಘ, ರೈತ ಸಂಪರ್ಕ ಕೇಂದ್ರಗಳಲ್ಲಿ ರೈತರು ಬೀಜ, ಗೊಬ್ಬರ ಖರೀದಿಗೆ ವಿಚಾರಿಸುತ್ತಿದ್ದಾರೆ. ಜೂನ್‌ ಮೊದಲ ವಾರದಿಂದ ಬಿತ್ತನೆ ಆರಂಭವಾಗುವ ನಿರೀಕ್ಷೆ ಇದೆ.

ಹೆಸರು ಬೀಜಕ್ಕೆ ಹೆಚ್ಚಿದ ಬೇಡಿಕೆ: ಈ ಬಾರಿ ಮುಂಗಾರು ಪೂರ್ವ ಉತ್ತಮ ಮಳೆಯಾಗಿದೆ. ಹೀಗಾಗಿ ದ್ವಿದಳ ಧಾನ್ಯ ಬಿತ್ತನೆ ಪ್ರದೇಶದ ವಿಸ್ತೀರ್ಣ ಹೆಚ್ಚಾಗುವ ನಿರೀಕ್ಷೆ ಇದೆ. ಈ ಬಾರಿ ಒಟ್ಟು 80 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಹೆಸರು ಬಿತ್ತನೆ ಗುರಿಯನ್ನು ಕೃಷಿ ಇಲಾಖೆ ನಿಗದಿಪಡಿಸಿದೆ.

ADVERTISEMENT

ಕಳೆದ ವರ್ಷ 78 ಹೆಕ್ಟೇರ್‌ ಪ್ರದೇಶದಲ್ಲಿ ಹೆಸರು ಬಿತ್ತನೆ ಗುರಿ ನಿಗದಿಪಡಿಸಲಾಗಿತ್ತು. ಆದರೆ, ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಮಾಣದ ಮಳೆ ಸುರಿದಿರಲಿಲ್ಲ. ಜೊತೆಗೆ ಮಳೆ ಕೊರತೆಯಿಂದ ಬಿತ್ತನೆ ತಡವಾಗಿ ಇಳುವರಿ ಪ್ರಮಾಣ ಗಣನೀಯವಾಗಿ ಕುಸಿದು ರೈತರಿಗೆ ತೀವ್ರ ನಷ್ಟವಾಗಿತ್ತು.

ಈ ಬಾರಿ ಒಟ್ಟು 2 ಸಾವಿರ ಕ್ವಿಂಟಲ್‌ ಹೆಸರು ಬಿತ್ತನೆ ಬೀಜದ ಬೇಡಿಕೆ ಇದೆ. ಒಟ್ಟು 50 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಗೋವಿನ ಜೋಳ ಬಿತ್ತನೆ ಗುರಿ ಇದ್ದು ಇದಕ್ಕೆ 700 ಕ್ವಿಂಟಲ್‌ ಬೀಜದ ಬೇಡಿಕೆ ಇದೆ.

ನಾಲ್ಕು ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ತೊಗರಿ ಬಿತ್ತನೆಯಾಗುವ ನಿರೀಕ್ಷೆ ಇದ್ದು, ಇದಕ್ಕೆ 100 ಕ್ವಿಂಟಲ್‌ ಬೀಜದ ಬೇಡಿಕೆ ಇದೆ. 42 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಶೇಂಗಾ ಬಿತ್ತನೆ ಗುರಿ ನಿಗದಿಪಡಿಸಲಾಗಿದೆ. ಕಳೆದ ಬಾರಿ ಮುಂಗಾರಿನಲ್ಲಿ ಬಳ್ಳಿ ಶೇಂಗಾ ರೈತರ ಕೈ ಹಿಡಿದಿತ್ತು.

ಹೆಸರು ಬಿತ್ತನೆ ಬೀಜಕ್ಕೆ ಹೆಚ್ಚಿದ ಬೇಡಿಕೆ; ಕೃಷಿ ಇಲಾಖೆಯಿಂದ ಅಗತ್ಯ ದಾಸ್ತಾನು

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಗದಗ ಜಿಲ್ಲೆಯಲ್ಲಿ ಒಟ್ಟು 2.40 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ

ಬೀಜ, ಗೊಬ್ಬರ ಸೇರಿದಂತೆ ಯಾವುದೇ ಸಮಸ್ಯೆ ಆಗದಂತೆ ಅಗತ್ಯ ದಾಸ್ತಾನು ಮಾಡಿದ್ದೇವೆ
ಸಿ.ಬಿ ಬಾಲರೆಡ್ಡಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ

ಮುಂಗಾರು ಹಂಗಾಮಿನ ಬಿತ್ತನೆ ಬೀಜಕ್ಕೆ ಕೊರತೆಯಾಗದಂತೆ ದಾಸ್ತಾನು ಮಾಡಿಕೊಂಡಿದ್ದೇವೆ. ಬೀಜ ನಿಗಮವು, ನೇರವಾಗಿ ರೈತ ಸಂಪರ್ಕ ಕೇಂದ್ರಗಳಿಗೆ ಬೀಜ ಪೂರೈಸಲಿದೆ. ಪಿಕೆಪಿಎಸ್ ಸಂಘಗಳಲ್ಲೂ ಬೀಜ ಸಿಗಲಿದೆ’ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಸಿ.ಬಿ ಬಾಲರೆಡ್ಡಿ ತಿಳಿಸಿದರು.

ಜಿಲ್ಲೆಯಲ್ಲಿ ಯೂರಿಯಾ, ಡಿಎಪಿ, ಪೊಟ್ಯಾಶ್, ಕಾಂಪ್ಲೆಕ್ಸ್ ಗೊಬ್ಬರಕ್ಕೆ ಹೆಚ್ಚಿನ ಬೇಡಿಕೆ ಇದೆ. ಬಿತ್ತನೆ ಸಂದರ್ಭದಲ್ಲಿ ಡಿಎಪಿ ಗೊಬ್ಬರ, ನಂತರ ಯೂರಿಯಾ ಬಳಸುತ್ತಾರೆ. ಪ್ರಸಕ್ತ ಮುಂಗಾರು ಹಂಗಾಮಿಗೆ ಒಟ್ಟು 36,172 ಟನ್‌ ಗೊಬ್ಬರದ ಬೇಡಿಕೆ ಪಟ್ಟಿಯನ್ನು ಕೃಷಿ ಇಲಾಖೆ ಸರ್ಕಾರಕ್ಕೆ ಸಲ್ಲಿಸಿದೆ. ಸದ್ಯ 2018ರ ಮಾರ್ಚ್‌ ಅಂತ್ಯದ ವರೆಗೆ ಮಾರಾಟವಾಗದೇ ಬಾಕಿ ಉಳಿದ 6,906 ಟನ್‌ ಗೊಬ್ಬರದ ದಾಸ್ತಾನು ಇದೆ. ರಾಜ್ಯ ಸಹಕಾರಿ ಮಾರಾಟ ಮಂಡಳ, ಖಾಸಗಿ ಪೂರೈಕೆದಾರರಿಂದ ಇನ್ನುಳಿದ ಗೊಬ್ಬರ ಪೂರೈಕೆ ಆಗಬೇಕಿದೆ. ಉಳಿದಿರುವ ದಾಸ್ತಾನಿನಲ್ಲಿ 2,030 ಟನ್ ಯೂರಿಯಾ, 2,098ಟನ್ ಡಿಎಪಿ, 374 ಟನ್ ಎಂಒಪಿ ಹಾಗೂ 2,403 ಟನ್ ಕಾಂಪ್ಲೆಕ್ಸ್‌ ಸೇರಿದೆ.

**
ಜೂನ್‌ ಮೊದಲ ವಾರದಲ್ಲಿ ಮುಂಗಾರು ಬಿತ್ತನೆ ಪ್ರಾರಂಭವಾಗುವ ನಿರೀಕ್ಷೆ ಇದೆ. ಬೀಜ, ಗೊಬ್ಬರ ಸೇರಿದಂತೆ ರೈತರಿಗೆ ಯಾವುದೇ ಸಮಸ್ಯೆಯಾಗದಂತೆ ಅಗತ್ಯ ದಾಸ್ತಾನು ಮಾಡಿಕೊಂಡಿದ್ದೇವೆ
– ಸಿ.ಬಿ ಬಾಲರೆಡ್ಡಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.