ಗಜೇಂದ್ರಗಡ: ಮೌಲ್ಯಾಧಾರಿತ ರಾಜಕಾರಣಕ್ಕೆ ಹೆಸರಾಗಿದ್ದ ರಾಷ್ಟ್ರ ರಾಜಕಾರಣ ಭ್ರಷ್ಟ್ರಗೊಳ್ಳಲು ಕಾಂಗ್ರೆಸ್ ಕಾರಣ. ಈ ಹಿನ್ನೆಲೆಯಲ್ಲಿ ಮಿತಿ- ಮೀರಿದ ಭ್ರಷ್ಟಾಚಾರದಲ್ಲಿ ತೊಡಗಿರುವ ಕಾಂಗ್ರೆಸ್ ಭ್ರಷ್ಟರ ತವರು ಮನೆಯಂತಾಗಿದೆ. ಹೀಗಾಗಿ ಪ್ರಸ್ತುತ ಚುನಾವಣೆಯಲ್ಲಿ ಭ್ರಷ್ಟ ಕಾಂಗ್ರೆಸ್ನ್ನು ಬೇರು ಸಹಿತ ಕಿತ್ತು ಹಾಕಬೇಕು ಎಂದು ಬಿಜೆಪಿ ನಾಯಕಿ ಸಂಯುಕ್ತಾ ಬಂಡಿ ಸಲಹೆ ನೀಡಿದರು.
ರೋಣ ಮತ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ಕಳಕಪ್ಪ ಬಂಡಿ ಪರ ಗಜೇಂದ್ರಗಡ ನಗರದ ವಿವಿಧ ಬಡಾವಣೆಗಳಲ್ಲಿ ಮನೆ-ಮನೆಗೆ ತೆರಳಿ ಮತ ಯಾಚಿಸಿ ಮಾತನಾಡಿದ ಅವರು, ರಾಷ್ಟ್ರದಲ್ಲಿನ ಭ್ರಷ್ಟಾಚಾರಕ್ಕೆ ಕಾಂಗ್ರೆಸ್ ಕುಮ್ಮಕ್ಕು ನೀಡುತ್ತಿದೆ. ಇದಕ್ಕೆ ಪುಷ್ಠಿ ಎನ್ನುವಂತೆ ಸದ್ಯದ ಕೇಂದ್ರ ಸರ್ಕಾರದಲ್ಲಿ ಸಾಕಷ್ಟು ಭ್ರಷ್ಟಾಚಾರಿಗಳು ತುಂಬಿದ್ದು ಕಾಂಗ್ರೆಸ್ ಭ್ರಷ್ಟಾಚಾರಿಗಳ ತವರು ಮನೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಚಿವ ಕಳಕಪ್ಪ ಬಂಡಿ ಅವರು ರೋಣ ಕ್ಷೇತ್ರದಲ್ಲಿ ಯಾವೊಬ್ಬ ಚುನಾಯಿತ ಪ್ರತಿನಿಧಿಯೂ ಕೈಗೊಳ್ಳದಷ್ಟು ಅಭಿವೃದ್ಧಿ ಕಾರ್ಯ ಗಳನ್ನು ಕೈಗೊಂಡು ಅಭಿವೃದ್ಧಿ ಪರ ಕಾಳಜಿ ಮೆರೆದಿದ್ದಾರೆ. ಕಳಕಪ್ಪ ಬಂಡಿ ಅವರ ಹ್ಯಾಟ್ರಿಕ್ ಗೆಲುವಿಗೆ ಮತದಾರರು ಶ್ರಮಿಸಬೇಕು ಎಂದು ಮನವಿ ಮಾಡಿದರು.
ಕಾಂಗ್ರೆಸ್ನ ಸುದೀರ್ಘ ಅಧಿಕಾ ರಾವಧಿಯಲ್ಲಿ ನಡೆಯದ ಅಭಿವೃದ್ಧಿ ಕಾರ್ಯಗಳನ್ನು ಬಿಜೆಪಿ ಕೇವಲ ಐದು ವರ್ಷಗಳಲ್ಲಿ ಸಾಧಿಸಿದೆ. ಅಭಿವೃದ್ಧಿ ಪರ ಚಿಂತನೆ ಹೊಂದಿರುವ ಬಿಜೆಪಿ ಅಭ್ಯರ್ಥಿ ಗಳನ್ನು ಗೆಲ್ಲಿಸಬೇಕು ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು.
ಅಭಿವೃದ್ಧಿ ವಿರೋಧಿ ಮನೋಭಾವ ಹೊಂದಿರುವ ಕಾಂಗ್ರೆಸ್ನ ಅಭ್ಯರ್ಥಿಗಳನ್ನು ಸೋಲಿಸುವ ಮೂಲಕ ಮತದಾರರು ಸಹ ಅಭಿವೃದ್ಧಿ ಪರ ಕಾಳಜಿ ಮೆರೆಯಬೇಕಿದೆ ಎಂದು ಎಂದರು.
ಪ್ರಸ್ತುತ ಚುನಾವಣೆಯಲ್ಲಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲೇ ಬೇಕು ಎಂಬ ನಿರ್ಧಾರಕ್ಕೆ ಮೂಲ ಕಾಂಗ್ರೆಸ್ಸಿಗರು ಬಂದಿದ್ದಾರೆ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿಗೆ ಹೀನಾಯ ಸೋಲುಕಟ್ಟಿಟ್ಟ ಬುತ್ತಿ ಎಂದು ಅವರು ಭವಿಷ್ಯ ನುಡಿದರು.
ಪುರಸಭೆ ಸದಸ್ಯರಾದ ವಿಜಯಲಕ್ಷ್ಮೀ ಚಟ್ಟೇರ್, ಸುಮಿತ್ರಾ ತೊಂಡಿಹಾಳ, ಕವಿತಾ ಜಾಲಿಹಾಳ, ವಿಜಯಕುಮಾರ ರಾಯಬಾಗಿ, ಬಿಜೆಪಿ ನಾಯಕಿಯರಾದ ಬಸಮ್ಮ ಸಾಲಿಮಠ, ಕೀರ್ತಿ ಕೊಟಗಿ, ಸಂಗೀತಾ ಗಾಣಗೇರ,ದೇವಕ್ಕಬೆಳವಣಿಕಿ ಮತ್ತಿತರರು ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.