ADVERTISEMENT

ರೈತರ ಮೇಲಿನ ಪ್ರಕರಣ ವಾಪಸ್‌ ಪಡೆಯಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2017, 7:18 IST
Last Updated 27 ನವೆಂಬರ್ 2017, 7:18 IST

ನರಗುಂದ: ‘ಮಹದಾಯಿ ಯೋಜನೆ ಜಾರಿಗಾಗಿ ಹೋರಾಟ ನಡೆಸಿದವರು ಹಾಗೂ ಪ್ರತಿಭಟನೆ ಮಾಡದೇ ಇರುವ ಅಮಾಯಕರ ಮೇಲೆ ಸರ್ಕಾರ ಪ್ರಕರಣಗಳನ್ನು ದಾಖಲಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ರೈತರ ಮೇಲಿನ ಪ್ರಕರಣಗಳನ್ನು ವಾಪಸ್‌ ಪಡೆಯುತ್ತೇನೆಂದು ಹೇಳಿದ್ದರು. ಆದರೆ, ಈವರೆಗೂ ಪ್ರಕರಣಗಳನ್ನು ವಾಸಪ್‌ ಪಡೆದಿಲ್ಲ. ರೈತರು ಪೊಲೀಸ್‌ ಠಾಣೆಗೆ ಅಲೆಯುವಂತಾಗಿದೆ’ ಎಂದು ಮಹದಾಯಿ ಹೋರಾಟ ಸಮಿತಿ ಸದಸ್ಯ ರಮೇಶ ನಾಯ್ಕರ ಹೇಳಿದರು.

ಪಟ್ಟಣದಲ್ಲಿ ನಡೆಯುತ್ತಿರುವ ಮಹದಾಯಿ ಧರಣಿಯ 865ನೇ ದಿನವಾದ ಭಾನುವಾರ ಅವರು ಮಾತನಾಡಿದರು. ‘ಹೋರಾಟದಲ್ಲಿ ಭಾಗವಹಿಸಿದ 252 ರೈತರ ಮೇಲೆ ಪ್ರಕರಣಗಳನ್ನು ದಾಖಲಿಸಲಾಗಿದೆ. ಅವರು ನಿತ್ಯ ಮಾನಸಿಕ ಹಿಂಸೆ ಅನುಭವಿಸುತ್ತಿದ್ದಾರೆ. ಈ ಕುರಿತು ಸಿ.ಎಂ. ಸ್ಪಷ್ಟನೆ ನೀಡಬೇಕು. ಇಲ್ಲದಿದ್ದರೆ, ಅವರಿಗೆ ಮುತ್ತಿಗೆ ಹಾಕಲಾಗುವುದು’ ಎಂದರು.

‘ನಾವು ಯಾರ ಮನೆಯನ್ನೂ ದರೋಡೆ ಮಾಡಿಲ್ಲ. ಯಾರಿಗೂ ವಂಚನೆ ಮಾಡಿಲ್ಲ. ನಮ್ಮ ಪಾಲಿನ ಹಕ್ಕನ್ನು ಕೇಳುತ್ತಿದ್ದೇವೆ. ಆದರೆ, ನಮ್ಮನ್ನು ಅಪರಾಧಿಗಳಂತೆ ಕಾಣುತ್ತಿರುವುದು ಯಾವ ನ್ಯಾಯ? ರೈತರ ಮೇಲಿನ ಪ್ರಕರಣಗಳನ್ನು ವಾಪಸ್‌ ಪಡೆದು, ಮಹದಾಯಿ ಯೋಜನೆ ಅನುಷ್ಠಾನಕ್ಕೆ ಪ್ರಾಮಾಣಿಕವಾಗಿ ಶ್ರಮಿಸಬೇಕು. ಜತೆಗೆ ಫಸಲ್‌ ಬಿಮಾ ಯೋಜನೆಯಡಿ ಬೆಳೆ ವಿಮೆ ಹಣ ಮಂಜೂರು ಮಾಡಬೇಕು’ ಎಂದು ಅವರು ಒತ್ತಾಯಿಸಿದರು.

ADVERTISEMENT

ಪಟ್ಟಣಕ್ಕೆ ಸೋಮವಾರ ಪಟ್ಟಣಕ್ಕೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಹದಾಯಿ ಹೋರಾಟ ಸಮಿತಿ ಸದಸ್ಯರು ಮನವಿ ಸಲ್ಲಿಸಲಿದ್ದಾರೆ ಎಂದು ಅವರು ಹೇಳಿದರು.

ಧರಣಿಯಲ್ಲಿ ಹೋರಾಟ ಸಮಿತಿ ಸದಸ್ಯ ಚನ್ನಪ್ಪಗೌಡ ಪಾಟೀಲ, ವೀರಬಸಪ್ಪ ಹೂಗಾರ, ಎಸ್‌.ಬಿ.ಜೋಗಣ್ಣವರ, ವೆಂಕಪ್ಪ ಹುಜರತ್ತಿ, ಹನಮಂತ ಪಡೆಸೂರು, ಎಸ್‌.ಕೆ.ಗಿರಿಯಣ್ಣವರ, ವಾಸು ಚವ್ಹಾಣ ಹಾಗೂ ಈರಣ್ಣ ಗಡಗಿಶೆಟ್ಟರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.