ADVERTISEMENT

ರೈತರ ಹಿತ ಕಡೆಗಣಿಸಿದ ಕಾಂಗ್ರೆಸ್, ಬಿಜೆಪಿ: ಆರೋಪ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2017, 8:52 IST
Last Updated 29 ನವೆಂಬರ್ 2017, 8:52 IST

ರೋಣ: ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರಗಳು ಆರೋಪ– ಪ್ರತ್ಯಾರೋಪ ಮಾಡುತ್ತ ಜನರು ಹಾಗೂ ರೈತ ಸಮುದಾಯವನ್ನು ನಿರ್ಲಕ್ಷಿಸಿವೆ ಎಂದು ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಮಕ್ತುಂಸಾಬ್ ಸಾಗರ ಆರೋಪಿಸಿದರು. ಪಟ್ಟಣದ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ರಾಜ್ಯದ ಕಟ್ಟ ಕಡೆಯ ವ್ಯಕ್ತಿಗೂ ಮೂಲಭೂತ ಸೌಲಭ್ಯ ಸಿಗುವಂತೆ ಮಾಡುವ ಉದ್ದೇಶವನ್ನು ಜೆಡಿಎಸ್ ಹೊಂದಿದೆ. ಕೇವಲ 20 ತಿಂಗಳು ಅಧಿಕಾರದಲ್ಲಿದ್ದಾಗ ಹಲವು ಜನಪರ ಯೋಜನೆಗಳನ್ನು ಕುಮಾರಸ್ವಾಮಿ ಜಾರಿಗೊಳಿಸಿ ಜನಮೆಚ್ಚುಗೆಗೆ ಪಾತ್ರರಾಗಿದ್ದರು. ಈ ಬಾರಿ ಪಕ್ಷ ಅಧಿಕಾರಕ್ಕೆ ಬಂದರೆ ರೈತರ, ಬಡವರ, ದೀನ– ದಲಿತರ ಅಭಿವೃದ್ಧಿಗಾಗಿ ಶ್ರಮಿಸಲಿದೆ ಎಂದರು.

ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಬಡವರು, ದೀನದಲಿತರು ಹಾಗೂ ರೈತ ಸಮುದಾಯವನ್ನು ಕಡೆಗಣಿಸಿವೆ. ಮಹದಾಯಿ ಯೋಜನೆ ಜಾರಿಗಾಗಿ ರೈತರು ಎರಡು ವರ್ಷಗಳಿಂದ ಹೋರಾಟ ಮಾಡುತ್ತಿದ್ದರೂ ಯಾವುದೇ ಸರ್ಕಾರ ಸ್ಪಂದಿಸಿಲ್ಲ. ಇದೆಲ್ಲವನ್ನೂ ಗಮನಿಸಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತಂದು ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದೇ ನಮ್ಮ ಗುರಿಯಾಗಿದೆ ಎಂದು ಹೇಳಿದರು.

ADVERTISEMENT

ಗುರುರಾಜ ಕುಲಕರ್ಣಿ, ಉಮೇಶ ಮಲ್ಲಾಪುರ, ವೆಂಕಣ್ಣ ಬಂಗಾರಿ, ಮೈಲಾರಪ್ಪ ದೇಸಣ್ಣವರ, ಬಸವರಾಜ ಮಾಳೋತ್ತರ, ಸಂಜೀವ ಹೂಗಾರ, ಬಾಬು ಮುಜಾವರ, ಈರನಗೌಡ ಪೊಲೀಸಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.