ADVERTISEMENT

ವಿಜ್ಞಾನ ಬಗ್ಗೆ ಆಸಕ್ತಿ ಇರಲಿ

​ಪ್ರಜಾವಾಣಿ ವಾರ್ತೆ
Published 12 ಜನವರಿ 2012, 6:00 IST
Last Updated 12 ಜನವರಿ 2012, 6:00 IST

ಗದಗ: ಹೊಸ ಹೊಸ ಆವಿಷ್ಕಾರಗಳು ಹೆಚ್ಚುತ್ತಿರುವ ಇಂದಿನ ದಿನದಲ್ಲಿ ವಿದ್ಯಾರ್ಥಿಗಳು ವಿಜ್ಞಾನ ವಿಷಯ ಕುರಿತು ಹೆಚ್ಚಿನ ಆಸಕ್ತಿ ತೋರಬೇಕು ಎಂದು ಶಾಸಕ ಶ್ರೀಶೈಲಪ್ಪ ಬಿದರೂರ ಸಲಹೆ ನೀಡಿದರು.

ನಗರದ ಪಂಚಾಚಾರ್ಯ ಮಾಂಗಲ್ಯ ಮಂದಿರದಲ್ಲಿ  ವಿಜ್ಞಾನ ಮತ್ತು ತಂತ್ರಜ್ಞಾನ ದಾರ್ಶನಿಕ ಸಮೂಹ ಮಾಹಿತಿ ತಂತ್ರಜ್ಞಾನ ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಏರ್ಪಡಿಸಿದ್ದ `ಕರ್ನಾಟಕ ವಿಜ್ಞಾನಿ ವಿದ್ಯಾ ಜಾಗೃತಿ 2011-12~ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿದ್ಯಾರ್ಥಿಗಳಲ್ಲಿ ವಿಜ್ಞಾನ ವಿಷಯ ಕಠಿಣವಾದದ್ದು ಎಂಬ ಭಾವನೆ ಇದೆ. ಅಚಲವಾದ ಮನಸ್ಸಿನಿಂದ ಕಲಿತಲ್ಲಿ ಯಾವುದೂ ಅಸಾಧ್ಯವಲ್ಲ. ಆತ್ಮ ವಿಶ್ವಾಸ ಬೆಳೆಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ವಹಿಸಿ ಅಧ್ಯಯನ ಮಾಡುವ ಸಂಕಲ್ಪ ಮಾಡಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬಸವರಾಜೇಶ್ವರಿ ಪಾಟೀಲ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ವಿಜ್ಞಾನದ ಬಗ್ಗೆ ಹೆಚ್ಚಿನ ತಿಳಿವಳಿಕೆ ಮುಖ್ಯ. ಅದರಲ್ಲೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಇದರಿಂದ ವಿದ್ಯಾರ್ಥಿಗಳ ವಿಕಾಸಕ್ಕೆ ಸಹಕಾರಿಯಾಗಲಿದೆ ಎಂದರು. 

ಹೆಸರಾಂತ ವಿಜ್ಞಾನಿಗಳೇ ವಿದ್ಯಾರ್ಥಿಗಳ ಬಳಿ ತೆರಳಿ ನೇರ ಸಂವಾದ ನಡೆಸಲು ಅನುಕೂಲ ವಾಗುವಂತೆ ಸರ್ಕಾರ ರೂಪಿಸಿರುವ ಕಾರ್ಯಕ್ರಮ ಇದಾಗಿದೆ. ಎಲ್ಲ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಟಿ. ರುದ್ರೇಗೌಡ ಮಾತನಾಡಿ, ಶ್ರವ್ಯ ಮಾಧ್ಯಮದಿಂದ ಕಲಿತಿದ್ದು ವಿದ್ಯಾರ್ಥಿಗಳ ಮನಸ್ಸಿನ ಮೇಲೆ ಅಷ್ಟೊಂದು ಪರಿಣಾಮ ಬೀರುವುದಿಲ್ಲ. ದೃಶ್ಯ ಮಾಧ್ಯಮದಿಂದ ಬೇಗನೆ ಹಾಗೂ ಬಹುಕಾಲದ ವರೆಗೆ ನೆನಪಿನಲ್ಲಿಡಬಹುದು. ವಿಜ್ಞಾನಕ್ಕೆ ತಂತ್ರಜ್ಞಾನ ತಳಪಾಯ ಇದ್ದ ಹಾಗೆ. ಆದ್ದರಿಂದ ವಿದ್ಯಾರ್ಥಿಗಳು ವಿಜ್ಞಾನದ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಿ ವ್ಯಾಸಂಗ ಮಾಡಬೇಕು ಎಂದರು.

ಎಮಿರಿಟಸ್ ಸೈಂಟಿಸ್ಟ್ ಡಿಆರ್‌ಡಿಓನ ಡಾ. ಪಿ. ರಘೋತ್ತಮರಾವ್ `ಲೋಹದ ಹಕ್ಕಿಗಳು~ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. 

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಉದಯಕುಮಾರ ನಾಯಕ  ಮತ್ತಿತರರು ಹಾಜರಿದ್ದರು. ಕರ್ನಾಟಕ ವಿಜ್ಞಾನ ವಿದ್ಯಾ ಜಾಗೃತಿ ಸಂಚಾಲಕ ಎಸ್.ವಿ. ಸಂಕನೂರ ಸ್ವಾಗತಿಸಿದರು. ಸಹ ಸಂಚಾಲಕ ಎ.ವಿ. ಹಿರೇಮಠ ಕಾರ್ಯಕ್ರಮ ನಿರೂಪಿಸಿದರು. ಹಳ್ಳಿಕೇರಿ ವಂದಿಸಿದರು. ನಂತರ ವಿದ್ಯಾರ್ಥಿ ಮತ್ತು ವಿಜ್ಞಾನಿಗಳ ನೇರ ಸಂವಾದ ಪ್ರಶ್ನೋತ್ತರ ಕಾರ್ಯಕ್ರಮ ಜರುಗಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.