ನರೇಗಲ್: ಸಮಾಜದಲ್ಲಿ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಬಡವರ ಆರ್ಥಿಕ ಹೊರೆಯನ್ನು ಕಡಿಮೆಗೊಳಿಸಲು ಸಂಘ ಸಂಸ್ಥೆಗಳು ಮುಂದಾಗಬೇಕು ಎಂದು ಕೊತಬಾಳದ ಅಡವಿಸಿದ್ಧೇಶ್ವರ ಮಠದ ಗಂಗಾಧರ ಸ್ವಾಮೀಜಿ ಹೇಳಿದರು.
ಸ್ಥಳೀಯ ತ್ರಿಪುರಾಂತಕೇಶ್ವರ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ಮಹಾಶಿವರಾತ್ರಿ ಹಾಗೂ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮಾತನಾಡಿದ ಅವರು, ಜಾತಿ, ಮತ, ಬೇಧ-ಭಾವ ತೊರೆದು ಎಲ್ಲರೂ ಐಕ್ಯತಾ ಸಮನ್ವಯತೆಯನ್ನು ಜೀವನ ನಡೆಸಲು ಸಾಮೂಹಿಕ ವಿವಾಹಗಳು ಸಹಕಾರಿಯಾಗಿವೆ ಎಂದು ಹೇಳಿದರು.
ಕಪ್ಪತಗುಡ್ಡದ ಶಿವಕುಮಾರ ಸ್ವಾಮೀಜಿ ಆಶೀರ್ವಚನ ನೀಡಿ, ದಾಂಪತ್ಯ ಜೀವನಕ್ಕೆ ಕಾಲಿರಿಸಿದ ದಂಪತಿಗಳು ಕಷ್ಟ, ಸುಖಗಳನ್ನು ಸಮನಾಗಿ ಹಂಚಿಕೊಂಡು ಜೀವನ ನಡೆಸಬೇಕು ಎಂದು ಹೇಳಿದರು.
ನಿಡಗುಂದಿಕೊಪ್ಪದ ಶಿವಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯರು ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ವಾಸಂತೆವ್ವ ಹುಲಕೋಟಿ, ಉಪಾಧ್ಯಕ್ಷೆ ಬಸವಣ್ಣೆವ್ವ ಕಣವಿ, ಪಿಎಸ್ಐ ಎಂ. ಪ್ರವೀಣ, ಡಾ. ಬಿ.ಎಸ್. ಭಜಂತ್ರಿ, ಬಸವರಾಜ ಹಂಜಿ, ಬಿ.ಡಿ. ನಾಶಿಪುಡಿ, ಎಸ್.ಜಿ. ಹಿರೇಮಠ, ಅಶೋಕ ಬೇವಿನಕಟ್ಟಿ, ವಿ.ಎಸ್. ಇಲ್ಲೂರ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ 11 ನವ ವಧು-ವರರು ದಾಂಪತ್ಯ ಜೀವನಕ್ಕೆ ಕಾಲಿರಿಸಿದರು.ರೋಣದ ಗುಲಗಂಜಿಮಠದ ಗುರುಪಾದ ಸ್ವಾಮೀಜಿ, ಶ್ರೀಧರ ಮರಡಿಮಠ, ಬಸವಲಿಂಗೇಶ್ವರ ಶಿವಾಚಾರ್ಯರು, ದರ್ಗಾದ ಖಲೀಫ್ ರೈಮಾಶಾವಲಿ ಅಜ್ಜನವರು ಹಾಜರಿದ್ದರು. ಶಾಂತಪ್ಪ ಚಿಕ್ಕೊಪ್ಪದ ಸ್ವಾಗತಿಸಿದರು. ಶಿಕ್ಷಕ ಸುರೇಶ ಹಳ್ಳಿಕೇರಿ ಕಾರ್ಯಕ್ರಮ ನಿರೂಪಿಸಿದರು. ನಿಂಗಪ್ಪ ಕಣವಿ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.