ಗಜೇಂದ್ರಗಡ: ವಿದ್ಯಾರ್ಥಿಗಳ ಆರೋಗ್ಯಕ್ಕೆ ಕ್ರೀಡೆ ಅವಶ್ಯ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಆರೋಗ್ಯಯುತ ಕ್ರೀಡೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳುವುದು ಸೂಕ್ತ ಎಂದು ಮುಖ್ಯೋಪಾಧ್ಯಾಯಿನಿ ಎಂ.ಟಿ.ಕುಲಕರ್ಣಿ ಅಭಿಪ್ರಾಯಪಟ್ಟರು. ಎಸ್.ಎಂ.ಭೂಮರಡ್ಡಿ ಸಂಯುಕ್ತ ಪ್ರೌಢ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಬ್ಯಾಡ್ಮಿಂಟನ್ ಕ್ರೀಡಾಕೂಟಕ್ಕೆ ಆಯ್ಕೆಯಾದ ಹಿನ್ನೆಲೆಯಲ್ಲಿ ಗಜೇಂದ್ರಗಡ ಪುರಸಭೆ ವಿದ್ಯಾರ್ಥಿಗಳಿಗೆ ನೀಡಿದ ಉಚಿತ ಕ್ರೀಡಾ ಸಮವಸ್ತ್ರಗಳನ್ನು ವಿತರಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ಅದ್ಭುತ ಪ್ರತಿಭೆಗಳಿವೆ.
ಆದರೆ, ಸೂಕ್ತ ವೇದಿಕೆ, ಪ್ರೋತ್ಸಾಹ ದೊರೆಯದಿರುವುದರಿಂದ ಅಸಂಖ್ಯಾತ ಪ್ರತಿಭೆಗಳು ಕಮರಿ ಹೋಗುತ್ತಿವೆ. ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಾತ್ರಾ ಮಹೋತ್ಸವ, ಉತ್ಸವದಂತಹ ವಿಶೇಷ ದಿನಗಳಲ್ಲಿ ವಿವಿಧ ಕ್ರೀಡೆಗಳನ್ನು ಆಯೋಜಿಸುವ ಮೂಲಕ ಪ್ರತಿಭೆಗಳನ್ನು ಗುರುತಿಸಿ ಸೂಕ್ತ ಪ್ರೋತ್ಸಾಹ ನೀಡಲು ಸಂಘ–ಸಂಸ್ಥೆಗಳು ಮುಂದಾಗಬೇಕು’ ಎಂದರು.
ಇತ್ತೀಚಿನ ದಿನಗಳಲ್ಲಿ ಭಾರತೀಯರು ದೇಶಿಯ ಕ್ರೀಡೆಗಳಿಗೆ ಆದ್ಯತೆ ನೀಡುತ್ತಿಲ್ಲ. ಬದಲಾಗಿ ಪಾಶ್ಚಿಮಾತ್ಯ ಕ್ರೀಡೆಗಳತ್ತ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಪರಿಣಾಮ ತಲೆಮಾರುಗಳ ಹಿರಿಮೆಯನ್ನು ಹೊಂದಿರುವ ದೇಶಿಯ ಕ್ರೀಡೆಗಳತ್ತ ಯುವಕರ ಆಸಕ್ತಿ ಕ್ಷೀಣಿಸುತ್ತಿದೆ. ಹೀಗಾಗಿ ದೇಶಿಯ ಕ್ರೀಡೆಗಳಿಗೆ ಅಳಿವು–ಉಳಿವಿನ ಪ್ರಶ್ನೆ ಎದುರಾಗಿದೆ.
ಆದ್ದರಿಂದ ಗ್ರಾಮೀಣ ಕ್ರೀಡಾಪಟುಗಳು ತಮ್ಮತನವನ್ನು ಉಳಿಸಿಕೊಂಡು ಕ್ರೀಡಾ ಕ್ಷೇತ್ರದಲ್ಲಿ ಪ್ರಾಬಲ್ಯ ಮೆರೆಯಬೇಕಿದ್ದರೆ ಯುವಕರು ದೇಶಿಯ ಕ್ರೀಡೆಗಳಲ್ಲಿ ತೊಡಗಬೇಕು ಎಂದರು. ಆರೋಗ್ಯ ನಿರೀಕ್ಷಕ ಎಂ.ಬಿ.ನಿಡಶೇಸಿ, ಕೆ.ಬಿ.ಚಾಗರಿ, ಎಸ್.ಎಸ್.ನರೇಗಲ್, ಇ.ಐ.ಸುಣಗಾರ, ಎಂ.ಎಚ್.ರಂಗಣ್ಣವರ, ಎಂ.ಎನ್.ಕರೆಪುಟ್ಟಣವರ, ಬಿ.ಎಸ್.ಭಜಂತ್ರಿ ಮತ್ತಿತರರು ವೇದಿಕೆಯಲ್ಲಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.