ಗದಗ: ಪ್ರಸಕ್ತ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ, ಗದುಗಿನ ಎಪಿಎಂಸಿ ಆವರಣದಲ್ಲಿ ಆರಂಭಿಸಿರುವ ಕಡಲೆ ಕಾಳು ಖರೀದಿ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಮಂಗಳವಾರ ಸಂಜೆ ಪರಿಶೀಲಿಸಿದರು.
ಖರೀದಿ ಕೇಂದ್ರ ಪ್ರಾರಂಭಿಸಿದ್ದರೂ, ಖರೀದಿ ಪ್ರಕ್ರಿಯೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳದ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧಿಕಾರಿಗಳ ವಿರುದ್ಧ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ‘ಮೊದಲು ರೈತರ ಹೆಸರು ನೋಂದಣಿ ಮಾಡಿಕೊಳ್ಳುತ್ತೇವೆ, ನಂತರ ಖರೀದಿ ಪ್ರಕ್ರಿಯೆ ಪ್ರಾರಂಭಿಸುತ್ತೇವೆ’ ಎಂಬ ಅಧಿಕಾರಿಗಳ ಸಮಜಾಯಿಸಿಗೆ ಸಿಟ್ಟಾದ ಅವರು, ಜ. 31ರಿಂದ ನೋಂದಣಿಯನ್ನೂ ಆರಂಭಿಸಿ, ಕಡಲೆ ಖರೀದಿ ಪ್ರಕ್ರಿಯೆನ್ನೂ ಪ್ರಾರಂಭಿಸಿ ಎಂದು ಖಡಕ್ ಎಚ್ಚರಿಕೆ ನೀಡಿದರು.
ಗದಗ, ನರಗುಂದ, ಗಜೇಂದ್ರಗಡ, ಲಕ್ಷ್ಮೇಶ್ವರ ಹಾಗೂ ಮುಂಡರಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಪ್ರತಿ ದಿನ ಸರಾಸರಿ 300ರಿಂದ 400 ಕ್ವಿಂಟಲ್ನಷ್ಟು ಕಡಲೆ ಆವಕವಾಗುತ್ತಿದೆ. ಮಾರುಕಟ್ಟೆಯಲ್ಲಿ ದರ ತೀವ್ರವಾಗಿ ಕುಸಿದು ಕ್ವಿಂಟಲ್ಗೆ ಸರಾಸರಿ ₹ 3,300ರಿಂದ ₹ 3,600 ದರ ಇದ್ದಿದ್ದರಿಂದ, ಸರ್ಕಾರದ ವತಿಯಿಂದ ಖರೀದಿ ಕೇಂದ್ರ ಪ್ರಾರಂಭಿಸುವಂತೆ ರೈತರು ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಅನುಮತಿ ನೀಡುವಂತೆ ಜಿಲ್ಲಾಡಳಿತ ಸರ್ಕಾರಕ್ಕೆ ಮನವಿ ಮಾಡಿತ್ತು.
ಬೆಂಬಲ ಬೆಲೆಯಡಿ ಪ್ರತಿ ಕ್ವಿಂಟಲ್ಗೆ ಕಡಲೆಗೆ ₹ 4,400 ದರ ನಿಗದಿಪಡಿಸಲಾಗಿದೆ. ಖರೀದಿ ಪ್ರಕ್ರಿಯೆ 45 ದಿನಗಳ ಕಾಲ ನಡೆಯಲಿದೆ. ರೈತರು ಬೆಂಬಲ ಬೆಲೆ ಯೋಜನೆಯಡಿ ಕಡಲೆ ಮಾರಾಟ ಮಾಡಲು ಹೆಸರು ನೋಂದಣಿ ಮಾಡಿಕೊಳ್ಳಲು 1 ತಿಂಗಳು ಅವಕಾಶ ನೀಡಲಾಗಿದೆ. ಈ ಯೋಜನೆಯಡಿ ರೈತರೊಬ್ಬರು ಗರಿಷ್ಠ 10 ಕ್ವಿಂಟಲ್ ಕಡಲೆಯನ್ನು ಮಾರಾಟ ಮಾಡಬಹುದು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.