ಗದಗ:‘ಕೇಂದ್ರ ಸರ್ಕಾರವು ಎಂಟು ವರ್ಷಗಳ ಹಿಂದೆ ಘೋಷಿಸಿದಂತೆ ವಾರ್ಷಿಕ 2 ಕೋಟಿ ಉದ್ಯೋಗ ಸೃಷ್ಟಿ ಮಾಡುವಲ್ಲಿ ವಿಫಲವಾಗಿದೆ. ಇದೀಗ ಮುಂದಿನ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು, ಅಗ್ನಿ ಪಥ ಯೋಜನೆ ಪ್ರಕಟಿಸಿದೆ’ಎಂದು ಗದಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಮಂದಾಲಿ ಹೇಳಿದರು.
ಕೇಂದ್ರ ಸರ್ಕಾರ ಘೋಷಿಸಿರುವ ಅಗ್ನಿಪಥ ಯೋಜನೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಮಂಗಳವಾರ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
‘ಈ ಯೋಜನೆ ಅಡಿ ಸೇನೆ ಸೇರುವ ಯುವಕರು ನಾಲ್ಕು ವರ್ಷಗಳ ಬಳಿಕ ಮತ್ತೆ ಮನೆಗೆ ಮರಳಬೇಕಾಗುತ್ತದೆ. ಬಳಿಕ ಅವರೆಲ್ಲರಿಗೂ ಉದ್ಯೋಗ ಸಿಗುತ್ತದೆ ಎಂಬ ಭರವಸೆ ಇಲ್ಲ. ಜತೆಗೆ ಪಿಂಚಣಿಯೂ ಇರುವುದಿಲ್ಲ. ಹೀಗಾಗಿ ಈ ಯೋಜನೆ ಮತ್ತೇ ನಿರುದ್ಯೋಗ ಸೃಷ್ಟಿಸುವುದೇ ಆಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಯೋಜನೆ ಅಡಿ ಖಾಸಗಿ ತರಬೇತಿ ಸಹ ಸಿಗುವುದರಿಂದ ದೇಶದ ಭದ್ರತೆ ದೃಷ್ಟಿಯಿಂದಲೂ ಇದು ಅಪಾಯಕಾರಿ. ಹೀಗಾಗಿ ಕೇಂದ್ರ ಸರ್ಕಾರ ಕೂಡಲೇ ಈ ಯೋಜನೆಯನ್ನು ಹಿಂಪಡೆಯಬೇಕು’ ಎಂದು ಒತ್ತಾಯಿಸಿದರು.
ಗದಗ-ಬೆಟಗೇರಿ ನಗರಸಭೆ ಸದಸಸ್ಯರಾದ ಚಂದ್ರು ಕರಿಸೋಮನಗೌಡ್ರ, ಚಿಮ್ಮಿ ನದಾಫ, ಇಮ್ತಿಯಾಜ್ ಶಿರಹಟ್ಟಿ, ಗದಗ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಉಮರಫಾರೂಕ್ ಹುಬ್ಬಳ್ಳಿ, ಕೆಪಿಸಿಸಿ ಸಾಮಾಜಿಕ ಜಾಲತಾಣದ ಪ್ರಧಾನ ಕಾರ್ಯದರ್ಶಿ ಶ್ರೇಯಸ್ ಮೂಲಿಮನಿ, ಗದಗ ಜಿಲ್ಲಾ ಸಾಮಾಜಿಕ ಜಾಲತಾಣದ ಅಧ್ಯಕ್ಷ ರಮೇಶ ಹೊನ್ನಿನಾಯ್ಕರ, ಉಪಾಧ್ಯಕ್ಷ ಶಿವರಾಜ ಕೋಟಿ, ಮುಳಗುಂದ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಭೀಮಪ್ಪ ಹುಗ್ಗೆಣ್ಣವರ, ಪ್ರಧಾನ ಕಾರ್ಯದರ್ಶಿ ಸಿದ್ದನಗೌಡ ಪಾಟೀಲ, ಗದಗ-ಬೆಟಗೇರಿ ಯುವ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಅನ್ವರ ನದಾಫ, ಪ್ರಧಾನ ಕಾರ್ಯದರ್ಶಿ ಮಹ್ಮದಸಾಬ ಬೆಟಗೇರಿ ಭಾಗವಹಿಸಿದ್ದರು.
ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.