
ಮುಂಡರಗಿ: ‘ಗದಗ-ಹರಪನಹಳ್ಳಿ ರೈಲು ಮಾರ್ಗ ಮಂಜೂರಾತಿಗೆ ಇಲ್ಲಿಯ ವಿವಿಧ ಸಂಘಟನೆಗಳು ನಡೆಸುತ್ತಿರುವ ಹೋರಾಟ ಶ್ಲಾಘನೀಯ. ರೈಲು ಮಂಜೂರಾತಿಗೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಅನ್ನದಾನೀಶ್ವರ ಸ್ವಾಮೀಜಿ ಒತ್ತಾಯಿಸಿದರು.
ಗದಗ, ಮುಂಡರಗಿ, ಹೂವಿನಹಡಗಲಿ, ಹರಪನಹಳ್ಳಿ ಮಾರ್ಗವಾಗಿ ನೂತನ ರೈಲು ಮಾರ್ಗ ಮಂಜೂರಾತಿಗೆ ಆಗ್ರಹಿಸಿ ತಾಲ್ಲೂಕು ಸಾರ್ವಜನಿಕ ಹೋರಾಟ ವೇದಿಕೆ, ತಾಲ್ಲೂಕು ರೇಲ್ವೆ ಹೋರಾಟ ಸಮಿತಿ ಹಾಗೂ ವಿವಿಧ ಸಂಘಟನೆ ಕಾರ್ಯಕರ್ತರು ಮಂಗಳವಾರ ಹಮ್ಮಿಕೊಂಡಿದ್ದ ದೆಹಲಿ ಚಲೋ ಪ್ರತಿಭಟನೆಗೆ ಚಾಲನೆ ನೀಡಿ ಅವರು ಮಾತನಾಡಿದರು.
‘ರೈಲು ಮಾರ್ಗ ಮಂಜೂರಾತಿಗೆ ಆಗ್ರಹಿಸಿ ರೈಲ್ವೆ ಸಚಿವ ಸೋಮಣ್ಣ ಅವರಿಗೆ ಮನವಿ ಪತ್ರ ಸಲ್ಲಿಸಬೇಕು. ವಿದ್ಯಾ ಸಮಿತಿ ಶತಮಾನೋತ್ಸವ ಸಮಾರಂಭದಲ್ಲಿ ಸೋಮಣ್ಣ ಸೇರಿದಂತೆ ಹಲವು ಸಚಿವರು ಆಗಮಿಸಲಿದ್ದಾರೆ. ಈ ಕುರಿತು ಅವರೊಂದಿಗೆ ಚರ್ಚಿಸಲಾಗುವುದು’ ಎಂದು ತಿಳಿಸಿದರು.
ನೂತನ ರೈಲು ಮಾರ್ಗ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಬಸವರಾಜ ನವಲಗುಂದ ಮಾತನಾಡಿ, ‘ರೈಲು ಮಾರ್ಗ ಮಂಜೂರಾತಿಗೆ ಒತ್ತಾಯಿಸಿ 17 ವರ್ಷಗಳಿಂದ ವಿವಿಧ ರೀತಿಯ ಹೋರಾಟ ಕೈಗೊಳ್ಳಲಾಗಿದೆ. ಆದರೂ ರಾಜ್ಯ ಹಾಗೂ ಕೇಂದ್ರ ಸರ್ಕಾರ ಈ ಕುರಿತು ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ವಿಷಾದಿಸಿದರು.
ದ್ರುವಕುಮಾರ ಹುಗಾರ, ಸಚಿನ್ ಸೇಸಾಯಿ, ರವಿಗೌಡ ಪಾಟಿಲ, ವೀರಭದ್ರಪ್ಪ ಕಬ್ಬಿಣದ, ಮಾಬುಸಾಬ್ ಎಲಿಗಾರ, ಹನುಮಂತಪ್ಪ ಚಾಕಲಬ್ಬಿ, ರಾಜಾಭಕ್ಷಿ ಬೆಟಗೇರಿ, ಜಗದೀಶ, ಸುರೇಶ ಕುಂಬಾರ, ಮೈನುದ್ದೀನ ಗರಡಿಮನಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.