
ರೋಣ: ‘ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಭಾನುವಾರ ಮಂಡಿಸಿದ ಬಜೆಟ್ ಶ್ರೀಮಂತ ಬಂಡವಾಳಗಾರರ ಬಜೆಟ್ ಆಗಿದೆ. ದೇಶದ ರೈತರು, ಕಾರ್ಮಿಕರು, ಸೇರಿದಂತೆ ಶಿಕ್ಷಣ ಕ್ಷೇತ್ರಕ್ಕೆ ಇದೊಂದು ನಿರಾಶಾದಾಯಕ ಬಜೆಟ್ ಆಗಿದೆ’ ಎಂದು ಸಿಐಟಿಯು ಜಿಲ್ಲಾ ಮುಖಂಡ ಬಾಲು ರಾಠೋಡ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದಲ್ಲಿ ಜಿಸಿಟಿಯು ನೇತೃತ್ವದಲ್ಲಿ ಸೋಮವಾರ ಸಂಯುಕ್ತ ಹೋರಾಟ ಕರ್ನಾಟಕ ಸಮಿತಿ ಕರೆಯ ಮೇರೆಗೆ ಫೆಬ್ರವರಿ 12 ರಂದು ಉತ್ಪಾದನೆ ಸೇವೆ ಸ್ಥಗಿತಗೊಳಿಸಿ ರೈತರು, ಕೃಷಿ ಕಾರ್ಮಿಕರು, ಗ್ರಾಮ ಪಂಚಾಯಿತಿ, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಅಖಿಲ ಭಾರತ ಮುಷ್ಕರದ ಅಂಗವಾಗಿ ಕರಪತ್ರ ವಿತರಣೆ ಮಾಡಿ ಅವರು ಮಾತನಾಡಿದರು.
‘ಫೆ.12 ರಂದು ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಮುಷ್ಕರವನ್ನು ಯಶಸ್ವಿಗೊಳಿಸಲು ಸಾರ್ವಜನಿಕರು ಸಹಕರಿಸಬೇಕು’ ಎಂದರು.
‘ಕೇಂದ್ರ ಸರ್ಕಾರವು ಕಾರ್ಮಿಕರನ್ನು ಸಂಪೂರ್ಣವಾಗಿ ಗುಲಾಮರನ್ನಾಗಿಸಲು ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ ಹೊಸದಾದ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೆ ತರಲು ಈಗಾಗಲೇ ಅಂತಿಮ ಪ್ರಕಟಣೆ ಹೊರಡಿಸಿದ್ದು, ಇದು ಕಾರ್ಮಿಕರಿಗೆ ಮರಣ ಶಾಸನವಾಗಿದೆ. ಕಾರ್ಪೊರೇಟ್ ಕಂಪನಿಗಳು ಮತ್ತು ಬಂಡವಾಳಗಾರರ ಪರವಾಗಿ ಕೇಂದ್ರ ಸರ್ಕಾರ ವರ್ತಿಸುತ್ತಿರುವುದು ನಾಚಿಕೆಗೇಡಿನ ಸಂಗತಿ’ ಎಂದರು.
‘ಈಗಾಗಲೇ ಸಾರ್ವಜನಿಕ ಸ್ವತ್ತುಗಳಾದ ವಿದ್ಯುತ್, ದೂರಸಂಪರ್ಕ, ಕಲ್ಲಿದ್ದಲು, ಗಣಿಗಾರಿಕೆ, ರೈಲ್ವೆ, ಹೆದ್ದಾರಿಗಳು, ಬಂದರುಗಳು, ಹಡಗುಕಟ್ಟೆಗಳು, ನಗರಾಭಿವೃದ್ಧಿ, ತೈಲ ಮುಂತಾದವುಗಳನ್ನು ಖಾಸಗಿ ಕಂಪನಿಗಳಿಗೆ ವರ್ಗಾಯಿಸಲಾಗಿದೆ. ಇದು ಸಾಲದು ಎಂಬಂತೆ 2026ರಿಂದ 30ರ ತನಕ ₹10 ಲಕ್ಷ ಕೋಟಿ ಹಣಗಳಿಕೆಗಾಗಿ ಖಾಸಗಿ ಕಂಪನಿಗಳಿಗೆ ಎಂಎಂಪಿಯನ್ನು ನವೀಕರಿಸಲಾಗಿದೆ’ ಎಂದು ಕಿಡಿ ಕಾರಿದರು.
ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಮಂತೂರು ಮಾತನಾಡಿ, ‘ದೇಶದ ಸೇವಾ ವಲಯಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕನಿಷ್ಠ ವೇತನ ಖಾತರಿ ಪಡಿಸುವ ಕಾಯ್ದೆ ಜಾರಿಗೆ ಬರಬೇಕಿದೆ, ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ತರುವ ಮುಖಾಂತರ ರೈತರಿಗೆ ಅನ್ಯಾಯ ಎಸಗಲಾಗುತ್ತಿದ್ದು ಮೇಕ್ ಇನ್ ಇಂಡಿಯಾ ಹೆಸರಿನಲ್ಲಿ ಕಾರ್ಮಿಕರನ್ನು ಸಂಘಟಿತಗೊಳ್ಳದಂತೆ ಹುನ್ನಾರ ಮಾಡುತ್ತಿರುವ ಕೇಂದ್ರ ಸರ್ಕಾರ ಸರ್ವಾಧಿಕಾರಿ ಧೋರಣೆಯನ್ನು ತಾಳುತ್ತಿದೆ’ ಎಂದು ಆಕ್ರೋಶ ಹೊರಹಾಕಿದರು.
ಶ್ರೀದೇವಿ ಜಕ್ಕಣ್ಣವರ, ಚಂದ್ರಕಲಾ ಸೊಬರಟ್ಟಿ, ಎಸ್ಎಫ್ಐ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರು ರಾಠೋಡ, ಅಂಗನವಾಡಿ ಸಿಬ್ಬಂದಿ ಶಾರದಾ ಸುಂಕದ, ರಂಗಮ್ಮ ರಾಯಣಗೌಡ್ರ, ಶೃತಿ ಭಜಂತ್ರಿ, ಶೋಭಾ ಭಜಂತ್ರಿ, ಭಾರತ ಗಂಟಿ, ಮಂಜುನಾಥ, ಸಂಗಮೇಶ ಹಡಪದ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.