
ರೋಣ: ‘ಬಡ ಜನತೆಯ ಆರೋಗ್ಯ ರಕ್ಷಣೆಯಲ್ಲಿ ಸರ್ಕಾರಿ ಆಸ್ಪತ್ರೆ ಹಾಗೂ ವೈದ್ಯರ ಪಾತ್ರ ಪ್ರಮುಖವಾಗಿದೆ. ಆಧುನಿಕ ದಿನಮಾನಗಳಲ್ಲಿ ಚಿಕಿತ್ಸೆ ದುಬಾರಿಯಾಗುತ್ತಿದ್ದು, ಬಡ ಜನತೆಗೆ ಸರ್ಕಾರಿ ಆಸ್ಪತ್ರೆಗಳೆ ಆಧಾರವಾಗಿವೆ’ ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.
ತಾಲ್ಲೂಕಿನ ಹೊಳೆಆಲೂರು ಗ್ರಾಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ನಿರ್ಮಿಸಲಾದ ನೂತನ ಸಮುದಾಯ ಆರೋಗ್ಯ ಕೇಂದ್ರ ಬುಧವಾರ ಉದ್ಘಾಟಿಸಿ ಮಾತನಾಡಿದರು.
‘ರೋಗಿಗಳು ಉತ್ತಮ ಚಿಕಿತ್ಸೆ ಪಡೆದಾಗ ಮಾತ್ರ ಸುಸಜ್ಜಿತ ಆಸ್ಪತ್ರೆ ನಿರ್ಮಾಣ ಮಾಡಿದ ಸರ್ಕಾರದ ಉದ್ದೇಶ ಸಾರ್ಥಕವಾಗುತ್ತದೆ. ನಾನು ಸಚಿವನಿದ್ದ ಸಂದರ್ಭದಲ್ಲಿ ನರಗುಂದ ಪಟ್ಟಣದ ಸರ್ಕಾರಿ ಆಸ್ಪತ್ರೆಯನ್ನು ನೂರು ಹಾಸಿಗೆಗಳ ಆಸ್ಪತ್ರೆ ಹಾಗೂ ಹೊಳೆಆಲೂರಿನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿದೆ’ ಎಂದರು.
ಹೊಳೆಆಲೂರು ಗ್ರಾಮದಲ್ಲಿ ನಿರ್ಮಾಣಗೊಂಡ ಬಹುತೇಕ ಹೊಸ ಕಟ್ಟಡಗಳು ನನ್ನ ಅವಧಿಯ ಕೊಡುಗೆಗಳಾಗಿವೆ. ಪ್ರವಾಹ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಪ್ರವಾಹ ಪರಿಸ್ಥಿತಿ ಸಮರ್ಥವಾಗಿ ನಿರ್ವಹಿಸಿದ ತೃಪ್ತಿ ನನಗಿದೆ’ ಎಂದರು.
ಡಾ.ಎಚ್.ಎಲ್.ಗಿರಡ್ಡಿ ಮಾತನಾಡಿ, ‘ಹೊಳೆಆಲೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು 2023ರಲ್ಲಿ ಶಾಸಕ ಸಿ.ಸಿ. ಪಾಟೀಲ ಅವರ ಕೋರಿಕೆಯ ಮೇರೆಗೆ 30 ಹಾಸಿಗೆಗಳ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿದೆ. ಸ್ತ್ರೀರೋಗ ತಜ್ಞರು, ಮಕ್ಕಳ ತಜ್ಞರು, ಅರವಳಿಕೆ ತಜ್ಞರು ಸೇರಿದಂತೆ ಆಧುನಿಕ ಶಸ್ತ್ರಚಿಕಿತ್ಸಾ ಕೊಠಡಿಯನ್ನು ನಿರ್ಮಿಸಲಾಗಿದ್ದು, ಗ್ರಾಮಸ್ಥರು ಸದುಪಯೋಗ ಪಡಿಸಿಕೊಳ್ಳಬೇಕು’ ಎಂದರು.
ಯಚ್ಚರೇಶ್ವರ ಮಠದ ಯಚ್ಚರೇಶ್ವರ ಸ್ವಾಮೀಜಿಗಳು ಸಾನ್ನಿಧ್ಯ ವಹಿಸಿದ್ದರು. ಜಿಲ್ಲಾ ಆರೋಗ್ಯ ಅಧಿಕಾರಿ ಎಸ್.ಎಸ್. ನೀಲಗುಂದ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚಂದವ್ವ ಪೂಜಾರ, ತಹಶೀಲ್ದಾರ್ ನಾಗರಾಜ.ಕೆ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಕಂದಕೂರ, ಸಿಪಿಐ ವಿಜಯಕುಮಾರ, ಬಿಜೆಪಿ ಮಂಡಲ ಅಧ್ಯಕ್ಷ ಸೋಮಲಿಂಗಪ್ಪ ಚರೇದ, ಮಾಜಿ ಅಧ್ಯಕ್ಷ ಮುತ್ತಣ್ಣ ಜಂಗಣ್ಣವರ, ಎ.ಎನ್. ಬಡಿಗೇರ, ಶೇಖಣ್ಣ ತೋಟದ, ಶ್ರೀಪತಿ ಉಡುಪಿ, ಶಿವಕುಮಾರ ನೀಲಗುಂದ, ಮೋತಿಲಾಲ ರಾವಳ, ತಾಲ್ಲೂಕು ಆರೋಗ್ಯ ಅಧಿಕಾರಿ ಬಿ.ಎಸ್. ಭಜಂತ್ರಿ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಕೆ.ಎ. ಹಾದಿಮನಿ ಇದ್ದರು.
ಆಮಂತ್ರಣ ಪತ್ರಿಕೆಯಲ್ಲಿ ಹೆಸರು ಹಾಕಿಸಿಕೊಳ್ಳಲು ಪೈಪೋಟಿಗಿಳಿದ ರಾಜಕಾರಣಿಗಳು ಪತ್ರಿಕೆಯಲ್ಲಿ ಹೆಸರು ಹಾಕಿಸಿಕೊಳ್ಳುವ ಬದಲು ಜನರ ಮನಸ್ಸಿನಲ್ಲಿ ಹೆಸರು ಉಳಿಯುವಂತೆ ಕೆಲಸ ಮಾಡಲಿಸಿ.ಸಿ. ಪಾಟೀಲ ಶಾಸಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.