ADVERTISEMENT

ಭಗತ್‌ಸಿಂಗ್‌ 114ನೇ ಜಯಂತ್ಯುತ್ಸವ: ಸೈನಿಕ ತರಬೇತಿ ಕೇಂದ್ರಕ್ಕೆ ಚಾಲನೆ 1ರಂದು

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2021, 4:05 IST
Last Updated 23 ಅಕ್ಟೋಬರ್ 2021, 4:05 IST

ಗದಗ: ಭಗತ್‌ಸಿಂಗ್‌ ಅವರ 114ನೇ ಜಯಂತ್ಯುತ್ಸವದ ಅಂಗವಾಗಿ ನಗರದ ಭಗತ್‌ ಸಿಂಗ್‌ ಅಭಿಮಾನಿ ಬಳಗವು ನೆವೆಂಬರ್‌ 1ರಂದು ಸ್ವಾತಂತ್ರ್ಯೋತ್ಸವ ಸಂಭ್ರಮ, ಕನ್ನಡ ರಾಜ್ಯೋತ್ಸವ, ಸೈನಿಕ ತರಬೇತಿ ಕೇಂದ್ರಕ್ಕೆ ಚಾಲನೆ ಹಾಗೂ ಆಂಬುಲೆನ್ಸ್‌ ಸೇವೆಯ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಬಳಗದ ಅಧ್ಯಕ್ಷ ಶಿವಕುಮಾರ ತಡಕೋಡ ತಿಳಿಸಿದರು.

ನಗರದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ಭಗತ್‌ ಸಿಂಗ್‌ ಅಭಿಮಾನಿ ಬಳಗವು ಸಾರ್ವಜನಿಕರಿಗೆ ಅನುಕೂಲವಾಗುವಂತಹ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ. ಬಲಿಷ್ಠ ದೇಶ ನಿರ್ಮಾಣಕ್ಕಾಗಿ ಯುವಕರನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಸೈನಿಕ ತರಬೇತಿ ಕೇಂದ್ರ ಆರಂಭಿಸಲಾಗುತ್ತಿದ್ದು, ಸೈನ್ಯ ಸೇರುವ ಕನಸು ಹೊತ್ತ ಯುವಕರಿಗೆ ದೈಹಿಕ ಸದೃಢತೆಯ ತರಬೇತಿ ನೀಡಲಾಗುವುದು’ ಎಂದು ಹೇಳಿದರು.

‘ಬಡ ರೋಗಿಗಳಿಗೆ ನೆರವಾಗುವ ಉದ್ದೇಶದಿಂದ ನಗರದ 10 ಕಿ.ಮೀ. ವ್ಯಾಪ್ತಿಯೊಳಗೆ ಇಂಧನ ದರ ಮಾತ್ರ ಪಡೆದುಕೊಂಡು ಆಂಬುಲೆನ್ಸ್‌ ಸೇವೆ ಒದಗಿಸುವ ಗುರಿ ಹೊಂದಲಾಗಿದೆ’ ಎಂದು ತಿಳಿಸಿದರು.

ADVERTISEMENT

ಜಿಲ್ಲಾ ಕಾರ್ಯದರ್ಶಿ ಸೋಮು ಮುಳಗುಂದ ಮಾತನಾಡಿ, ‘ನ.1ರಂದು ಬೆಳಿಗ್ಗೆ 10ಕ್ಕೆ ಒಕ್ಕಲಗೇರಿ ಓಣಿಯ ರಾಚೋಟೇಶ್ವರ ದೇವಸ್ಥಾನದಿಂದ ವಿಡಿಎಸ್‌ಟಿಸಿ ಮೈದಾನದವರೆಗೆ ಮೆರವಣಿಗೆ ನಡೆಯಲಿದೆ. ಸಂಜೆ 5ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಆಂಬುಲೆನ್ಸ್‌ ಸೇವೆಗೆ ಚಾಲನೆ ಹಾಗೂ ಬಡ ವಿದ್ಯಾರ್ಥಿಗಳಿಗೆ 10 ಸಾವಿರ ನೋಟ್‌ ಪುಸ್ತರ ವಿತರಣೆ ಮಾಡಲಾಗುವುದು’ ಎಂದರು.

‘ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಹೋರಾಟಗಾರರು, ಭಗತ್‌ ಸಿಂಗ್‌, ರಾಜಗುರು, ಸುಖದೇವ, ಸಾವರ್‌ಕರ್‌, ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ ಅವರ ವಂಶಸ್ಥರು ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.

ಕೊಪ್ಪಳ ಗವಿಮಠದ ಗವಿಸಿದ್ಧೇಶ್ವರ ಸ್ವಾಮೀಜಿ, ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ, ಶಿವಾನಂದ ಬೃಹನ್ಮಠದ ಸದಾಶಿವಾನಂದ ಸ್ವಾಮೀಜಿ, ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜನವರು ಸಾನ್ನಿಧ್ಯ ವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ಭಗತ್‌ ಸಿಂಗ್‌ ಅಭಿಮಾನಿ ಬಳಗದ ಮಂಜುನಾಥ ಶೆಟ್ಟಿಕೇರಿ, ರವಿ ಹುಡೇದ, ಬಸವರಾಜ ಗುಡದೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.