ಗದಗ: ‘ಬಿಲ್ ಕಲೆಕ್ಟರ್ ಸಿಬ್ಬಂದಿಯನ್ನು ಅಕ್ರಮವಾಗಿ ನೇಮಕ ಮಾಡಿಕೊಂಡ ತಾಲ್ಲೂಕಿನ ಕಳಸಾಪೂರ ಗ್ರಾಮ ಪಂಚಾಯ್ತಿ ಅಧಿಕಾರಿಗಳ ಮೇಲೆ ಜಿಲ್ಲಾ ಪಂಚಾಯ್ತಿ ಸಿಇಒ ಸೂಕ್ತ ಕ್ರಮ ಜರುಗಿಸಬೇಕು’ ಎಂದು ಸಾಮಾಜಿಕ ಕಾರ್ಯಕರ್ತ ನಜೀರ್ ಅಹ್ಮದ ಅಂಗಡಿ ಒತ್ತಾಯಿಸಿದರು.
‘ಗ್ರಾಮ ಪಂಚಾಯ್ತಿಗೆ ನೌಕರರನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ಆದೇಶ ಮಾಡಿದ ಮೇಲೆ ಜಿಲ್ಲಾ ಪಂಚಾಯ್ತಿ ಸಿಇಒ ಅವರ ಪೂರ್ವಾನುಮತಿ ಪಡೆದು, ಸಾರ್ವಜನಿಕ ಪ್ರಕಟಣೆ ನೀಡಿ ಅರ್ಹತೆ ಆಧಾರದ ಮೇಲೆ ಆಯ್ಕೆ ಮಾಡಬೇಕು. ಆದರೆ, ಕಳಸಾಪೂರ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಕಾನೂನು ಗಾಳಿಗೆ ತೂರಿ ಸಿಬ್ಬಂದಿಯನ್ನು ಅಕ್ರಮವಾಗಿ ನೇಮಕ ಮಾಡಿಕೊಂಡಿದ್ದಾರೆ’ ಎಂದು ಆರೋಪ ಮಾಡಿದರು.
‘ರಾಜಕಾರಣಿಗಳ ಒತ್ತಡಕ್ಕೆ ಮಣಿದು ಅಧಿಕಾರಿಗಳು ಅಕ್ರಮವಾಗಿ ಸಿಬ್ಬಂದಿ ನೇಮಕ ಮಾಡಿಕೊಂಡು ಗ್ರಾಮ ಪಂಚಾಯ್ತಿ ಅವನತಿಗೆ ಕಾರಣವಾಗಿದ್ದಾರೆ. ಈ ವಿಚಾರವಾಗಿ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಕೋರ್ಟ್ ಮೆಟ್ಟಿಲೇರಬೇಕಾಗುತ್ತದೆ’ ಎಂದು ಅವರು ಎಚ್ಚರಿಸಿದರು.
‘ಈ ವಿಚಾರವಾಗಿ ಮಾಹಿತಿ ಹಕ್ಕು ಕಾಯ್ದೆ ಅಡಿ ಮಾಹಿತಿ ಕೇಳಿದ್ದರೂಎರಡು ವರ್ಷಗಳಿಂದ ಈವರೆಗೂ ನೀಡಿಲ್ಲ. ಕಳಸಾಪೂರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಅನುದಾನ ಸಾಕಷ್ಟು ಪ್ರಮಾಣದಲ್ಲಿ ದುರ್ಬಳಕೆ ಆಗಿದೆ’ ಎಂದು ಅವರು ಆರೋಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.