ಗದಗ: ಉತ್ತರ ಕರ್ನಾಟಕದವರೇ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಚೊಚ್ಚಲ ಬಜೆಟ್ನಲ್ಲಿ ಗದಗ ಜಿಲ್ಲೆಗೆ ಬಂಪರ್ ಕೊಡುಗೆ ನೀಡುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದ ಜಿಲ್ಲೆಯ ಜನತೆಗೆ ನಿರಾಸೆಯಾಗಿದೆ ಎಂದು ಗದಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ ಮಂದಾಲಿ ಹೇಳಿದ್ದಾರೆ.
ಗದಗ ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿಗೆ ಪೂರಕ ಯಾವುದೇ ಯೋಜನೆ ಘೋಷಿಸಿಲ್ಲ. ಗದಗ-ಯಲವಿಗಿ ರೈಲು ಮಾರ್ಗ ಪ್ರಸ್ತಾಪಿಸಿರುವುದು ಸ್ವಾಗತಾರ್ಹ. ಆದರೆ, ಅದನ್ನು ಪೂರ್ಣಗೊಳಿಸಲು ಕಾಲಮಿತಿ ನಿಗದಿ ಮಾಡಿಲ್ಲ ಎಂದು ಹೇಳಿದ್ದಾರೆ.
ಗದಗ ಜಿಲ್ಲೆಯಲ್ಲಿ ಕೃಷಿ ಆಧಾರಿತ ಕೈಗಾರಿಕೆ, ಜವಳಿ ಪಾರ್ಕ್ ಯಾವುದನ್ನೂ ಘೋಷಣೆ ಮಾಡದಿರುವುದು ವಿಷಾದನೀಯ.
ಕೊರೊನಾದಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿ, ಉದ್ಯೋಗ ಕಳೆದುಕೊಂಡಿದ್ದ ಯುವಕರಿಗೆ ಈ ಬಜೆಟ್ ಯಾವುದೇ ಭರವಸೆ ಮೂಡಿಸಲಿಲ್ಲ. ಜಿಲ್ಲೆಯಿಂದ ಮತ್ತೆ ದೂರದ ಊರುಗಳಿಗೆ ಉದ್ಯೋಗ ಅರಸಿ ಅಲೆಯುವಂತೆ ಮಾಡಿದೆ ಎಂದು ಹೇಳಿದ್ದಾರೆ.
ಇನ್ನು ಸ್ವತಃ ಮುಖ್ಯಮಂತ್ರಿಗಳು ಈ ಹಿಂದೆ ಕಳಸಾ-ಬಂಡೂರಿ ಹೋರಾಟದ ಮುಂಚೂಣಿಯಲ್ಲಿದ್ದವರು. ಈ ಬಾರಿ ಅದಕ್ಕೆ ₹1 ಸಾವಿರ ಕೋಟಿ ಮೀಸಲಿಟ್ಟಿರುವುದು ಸ್ವಾಗತಾರ್ಹ. ಆದರೆ, ಈ ಯೋಜನೆ ಪೂರ್ಣಗೊಳಿಸುವ ಬಗ್ಗೆ ಪ್ರಸ್ತಾಪಿಸಿಲ್ಲ. ಇದೆಲ್ಲವೂ ಕೇವಲ ಮೂಗಿಗೆ ತುಪ್ಪ ಒರೆಸುವ ಕೆಲಸವಾಗಿದೆ. ಬಡ ಹಾಗೂ ಮಧ್ಯಮ ವರ್ಗದ ಜನತೆ ಮತ್ತೆ ಸಂಕಷ್ಟದಲ್ಲಿಯೇ ಬದುಕುವಂತೆ ಈ ಬಜೆಟ್ ರೂಪಿಸಿದಂತಿದೆ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.