ರೋಣ: ‘ರಾಜ್ಯ ಸರ್ಕಾರದ ಜಾತಿ ಗಣತಿಗೆ ಈಗಾಗಲೇ ಚಾಲನೆ ದೊರೆತಿದ್ದು, ಗಣತಿದಾರರು ಪ್ರತಿ ಮನೆ ಮನೆಗಳಿಗೆ ತೆರಳಿ ಸಮರ್ಪಕ ಮಾಹಿತಿ ಪಡೆದು ಜಾತಿ ಗಣತಿ ನಡೆಸಬೇಕು’ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಪಟ್ಟಣದ ಗುರುಭವನದಲ್ಲಿ ಸೋಮವಾರ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಸುವ ಸಿಬ್ಬಂದಿಗಳಿಗೆ ಕಿಟ್ ವಿತರಣೆ ಮಾಡಿ ಮಾತನಾಡಿದ ಅವರು, ‘ಮಕ್ಕಳ ಶಿಕ್ಷಣ, ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳುವ ಉದ್ದೇಶ ಸೇರಿದಂತೆ ಅನೇಕ ಕಡೆಗಳಲ್ಲಿ ಜಾತಿ ಪ್ರಮಾಣ ಪತ್ರದ ಅಗತ್ಯವಿದೆ’ ಎಂದು ತಿಳಿಸಿದರು.
‘ರಾಜ್ಯದಲ್ಲಿ ಜಾತಿಗಣತಿ ಕಾರ್ಯ ಆರಂಭಿಸಲಾಗುತ್ತಿದ್ದು, ಜನರು ಗಣತಿದಾರರಿಗೆ ಸಹಕಾರ ನೀಡಬೇಕು. ಜಾತಿ, ಉಪಜಾತಿಗಳ ಬಗ್ಗೆ ಸಮರ್ಪಕ ಮಾಹಿತಿ ಒದಗಿಸಬೇಕು. ಗಣತಿದಾರರು ಪ್ರತಿ ಮನೆ ಮನೆಗಳಿಗೆ ತೆರಳಿ ಜನರಿಂದ ಸಮಗ್ರ ಮಾಹಿತಿ ಪಡೆದುಕೊಳ್ಳಬೇಕು’ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಗಣತಿ ಕಾರ್ಯಕ್ಕೆ ಚಾಲನೆ ನೀಡಿದ್ದು, ಶೋಷಿತ ಹಿಂದುಳಿದ ವರ್ಗಗಳ ಜನರಿಗೆ ಸರ್ಕಾರದಿಂದ ಸಮರ್ಪಕವಾಗಿ ದೊರೆಯಬೇಕಾದ ಸೌಲಭ್ಯಗಳು ದೊರೆಯಬೇಕು. ಶಿಕ್ಷಣ ಹಾಗೂ ಉದ್ಯೋಗದಲ್ಲಿ ನಿಜವಾದ ಅರ್ಹರಿಗೆ ಸರ್ಕಾರದ ಸೌಲಭ್ಯ ದೊರೆಯಬೇಕು’ ಎಂದರು.
ಈ ವೇಳೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲ್ಲೂಕು ವಿಸ್ತಿರ್ಣಾಧಿಕಾರಿ ಮಲ್ಲಿಕಾರ್ಜುನ, ಹಣಸಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಗೀತಾ ಆಲೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.