ಗದಗ: ‘ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಸಭೆಯನ್ನು (ಪಿಎಸಿ) ಜುಲೈ 28ರಂದು ಆನ್ಲೈನ್ ಮೂಲಕ ನಡೆಸಲು ಮತ್ತು ಇ-ತಪಾಸಣೆಗೆ ಅವಕಾಶ ನೀಡಬೇಕು’ ಎಂದು ಸಮಿತಿ ಅಧ್ಯಕ್ಷ ಎಚ್.ಕೆ ಪಾಟೀಲ ಅವರು ಆಗ್ರಹಿಸಿದ್ದಾರೆ.
ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಪತ್ರ ಬರೆದಿರುವ ಅವರು, ‘ಕೊರೊನಾ ನಿರ್ವಹಣೆಯಲ್ಲಿ ಪ್ರತಿಯೊಂದು ಪರಿಕರದ ಖರೀದಿಯಲ್ಲೂ ಭ್ರಷ್ಟಾಚಾರದ ದೂರುಗಳು ವ್ಯಾಪಕವಾಗಿವೆ. ಇಂತಹ ಸಂದರ್ಭದಲ್ಲಿ ಸಮಿತಿ ತನ್ನ ಕರ್ತವ್ಯದಿಂದ ವಿಮುಖವಾಗಲು ಸಾಧ್ಯವಿಲ್ಲ. ಸಭೆ ನಡೆಸಬೇಕು, ಅಧಿಕಾರಿಗಳಿಂದ ವಿವರಣೆ ಪಡೆಯಬೇಕು, ತಪ್ಪಿತಸ್ಥರ ಮೇಲೆ ಕ್ರಮ ಆಗಬೇಕು’ ಎಂದು ಒತ್ತಾಯಿಸಿದ್ದಾರೆ.
‘ರಾಜ್ಯ ಸರ್ಕಾರದ ಇ-ಆಡಳಿತ ವ್ಯವಸ್ಥೆಯಲ್ಲಿ ವಿದ್ಯುನ್ಮಾನಚಾಲಿತ ವ್ಯವಸ್ಥೆ ಹೊಂದಿರುವ ವಾಹನದ ಮೂಲಕ ತಪಾಸಣೆ ಕೈಗೊಳ್ಳುವ ವ್ಯವಸ್ಥೆಯನ್ನು ಜಾರಿಗೆ ತಂದು ದಶಕ ಕಳೆದಿದೆ. ಈ ಸೌಲಭ್ಯವನ್ನು ಉಪಯೋಗಿಸಿಕೊಂಡು ಸಮಿತಿಯ ಕರ್ತವ್ಯ ನಿರ್ವಹಣೆಗೆ ಅವಕಾಶ ನೀಡಬೇಕು’ ಎಂದೂ ಎಚ್ಕೆ ಮನವಿ ಮಾಡಿದ್ದಾರೆ.
‘ಕೊರೊನಾ ಸೋಂಕಿತರಿಗೆ ಉತ್ತಮ ಚಿಕಿತ್ಸೆ, ಅಂಬುಲೆನ್ಸ್ ಸೇವೆ ಮತ್ತು ಗೌರವಯುತ ಅಂತ್ಯಸಂಸ್ಕಾರ ಅತ್ಯಂತ ಪ್ರಮುಖವಾದ ಅವಶ್ಯಕತೆಗಳು. ಈ ಸೇವೆಗಳನ್ನು ಒದಗಿಸುವಲ್ಲಿ ಆಗುತ್ತಿರುವ ಪ್ರಮಾದ ಮತ್ತು ಹೀನಾಯವಾದ ಪರಿಸ್ಥಿತಿಯನ್ನು ತಕ್ಷಣವೇ ಸರಿಪಡಿಸುವ ಅವಶ್ಯಕತೆ ಇದೆ’ ಎಂದೂ ಅವರು ಪತ್ರದಲ್ಲಿ ಗಮನ ಸೆಳೆದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.