ನರಗುಂದ: ಅತಿವೃಷ್ಟಿಯಿಂದ ಹಾನಿಗೊಂಡ ತಾಲ್ಲೂಕಿನ ವಿವಿಧ ಗ್ರಾಮಗಳ ಜಮೀನುಗಳಿಗೆ ಸೋಮವಾರ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಭೇಟಿ ನೀಡಿ ಬೆಳೆಹಾನಿ ಪರಿಶೀಲಿಸಿದರು.
ಕಲಕೇರಿ ಗ್ರಾಮಕ್ಕೆ ಭೇಟಿ ನೀಡಿದ ಅವರು ಹೆಸರು ಬೆಳೆ ಪರಿಶೀಲಿಸಿದರು. ಪಟ್ಟಣದ ಹೊರವಲಯದ ಸೋಮಾಪುರ ವ್ಯಾಪ್ತಿಯ ಜಮೀನುಗಳಿಗೆ ಭೇಟಿ ನೀಡಿ ಹೆಸರು ಹಾಗೂ ಈರುಳ್ಳಿ ಬೆಳೆಗಳ ಹಾನಿ ಕುರಿತು ರೈತರಿಂದ ಮಾಹಿತಿ ಪಡೆದರು. ಕೊಣ್ಣೂರ ಗ್ರಾಮಕ್ಕೆ ಭೇಟಿ ನೀಡಿ ಅತಿವೃಷ್ಟಿ ಹಾಗೂ ಮಲಪ್ರಭಾ ಪ್ರವಾಹಕ್ಕೆ ಹಾನಿಗೊಂಡ ಪೇರಲ, ಈರುಳ್ಳಿ ಬೆಳೆಗಳನ್ನು ಜಿಲ್ಲಾಧಿಕಾರಿ ಪರಿಶೀಲಿಸಿದರು.
ರೈತರ ಆಗ್ರಹ: ಹೆಸರು ಬೆಳೆ ಸಂಪೂರ್ಣ ಹಾನಿಯಾಗಿದ್ದು, ತೋಟಗಾರಿಕೆ ಬೆಳೆಗಳಾದ ಈರುಳ್ಳಿ, ಪೇರಲ ಬೆಳೆಗಳಿಗೂ ಹಾನಿಯಾಗಿದೆ. ಆದ್ದರಿಂದ ಬೆಳೆಹಾನಿ ಪರಿಹಾರ ನೀಡುವಂತೆ ಕಲಕೇರಿ, ನರಗುಂದ, ಕೊಣ್ಣೂರಿನ ರೈತರು ಜಿಲ್ಲಾಧಿಕಾರಿಗಳಿಗೆ ಆಗ್ರಹಿಸಿದರು.
ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಮಾತನಾಡಿ, ‘ಹಾನಿಯಾದ ಬೆಳೆಗಳ ವಾಸ್ತವಾಂಶವನ್ನು ಪರಿಶೀಲಿಸಲು ತಾಲ್ಲೂಕಿನ ಜಮೀನುಗಳಿಗೆ ಭೇಟಿ ನೀಡಲಾಗಿದೆ. ಇದನ್ನು ಸರ್ಕಾರಕ್ಕೆ ಮಾಹಿತಿ ನೀಡಲಾಗುವುದು. ರೈತರ ಮನವಿಯನ್ನು ಸರ್ಕಾರಕ್ಕೆ ತಿಳಿಸಲಾಗುವುದು’ ಎಂದರು.
ಈ ವೇಳೆ ಉಪವಿಭಾಗಾಧಿಕಾರಿ ಗಂಗಪ್ಪ, ತಹಶೀಲ್ದಾರ್ ಶ್ರೀಶೈಲ ತಳವಾರ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಂ.ಎಸ್. ಕುಲಕರ್ಣಿ, ಕಂದಾಯ ನಿರೀಕ್ಷಕ ಐ.ವೈ. ಕಳಸನ್ನವರ, ತೋಟಗಾರಿಕೆ ಇಲಾಖೆ ಅಧಿಕಾರಿಗಳು, ಗ್ರಾಮ ಆಡಳಿತಾಧಿಕಾರಿಗಳು, ಕೃಷಿ, ಕಂದಾಯ ಇಲಾಖೆ ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.