
ಗದಗ: ಹಿಂಗಾರು ಬೆಳೆ ಸಮೀಕ್ಷೆಗೆ ಸರ್ಕಾರ ಹಿಂಗಾರು ರೈತರ ಬೆಳೆ ಸಮೀಕ್ಷೆ-25 ಆ್ಯಪ್ ಬಿಡುಗಡೆ ಮಾಡಿದ್ದು, ಸಮೀಕ್ಷೆಗೆ ರೈತರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಜ.2ರಿಂದ 12ರ ವರೆಗೆ ತಾಲ್ಲೂಕಿನಾದ್ಯಂತ ಶೇ 31ರಷ್ಟು ರೈತರು ಸಮೀಕ್ಷೆ ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ.
2024-25ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ 3.16 ಲಕ್ಷ ತಾಕುಗಳಲ್ಲಿ ಬೆಳೆ ಸಮೀಕ್ಷ ನಡೆಸುವಂತೆ ಸರ್ಕಾರ ಗುರಿ ನೀಡಿತ್ತು, ಈ ಪೈಕಿ 3.15 ಲಕ್ಷ ತಾಕುಗಳಲ್ಲಿ ಸಮೀಕ್ಷೆ ಮಾಡಲಾಗಿ, ಶೇ 99.68 ಸಾಧನೆ ಮಾಡಲಾಗಿತ್ತು. 2025-26ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ 2.53 ಲಕ್ಷ ಹೆ. ಪ್ರದೇಶದಲ್ಲಿ ರೈತರು ವಿವಿಧ ಬೆಳೆಗಳನ್ನು ಬೆಳೆದಿದ್ದಾರೆ. 3.19 ಲಕ್ಷ ತಾಕುಗಳಲ್ಲಿ ಬೆಳೆ ಸಮೀಕ್ಷೆಗೆ ಗುರಿ ನಿಗದಿಪಡಿಸಲಾಗಿದ್ದು, ಜನವರಿ 31ರ ವರೆಗೆ ಸಮೀಕ್ಷೆ ಕೈಗೊಳ್ಳಲು ಅವಕಾಶವಿದೆ.
ರೈತರೇ ಮಾಡಬಹುದು: ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಗಳ ಮಾಹಿತಿಯನ್ನು ಆಪ್ನಲ್ಲಿ ಛಾಯಾಚಿತ್ರ ಸಹಿತವಾಗಿ ಅಪ್ಲೋಡ್ ಮಾಡುವ ಉದ್ದೇಶದಿಂದ ಸಮೀಕ್ಷೆ ಆರಂಭಿಸಿದ್ದೆವೆ. ರೈತರಿಗೆ ನೇರವಾಗಿ ಮಾಹಿತಿ ಅಪ್ಲೋಡ್ ಮಾಡಲು ಸಾಧ್ಯವಾಗದಿದ್ದರೆ, ಖಾಸಗಿ ನೀವಾಸಿಗಳು ಮಾಹಿತಿ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಾಗೃತಿ ಮೂಡಿಸುತ್ತಿದ್ದೇವೆ ಎಂದು ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ ತಿಳಿಸಿದರು.
ಜಿಲ್ಲೆಯ ಎಲ್ಲಾ ರೈತರು ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಕು. ಇದರಿಂದ ಸರ್ಕಾರಕ್ಕೆ ನಿಖರವಾದ ದತ್ತಾಂಶ ಸಿಗುತ್ತದೆ. ಕೃಷಿ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯಿಂದ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಅನುಕೂಲವಾಗುತ್ತದೆ. ಜತೆಗೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಫಲಾನುಭವಿ ನೋಂದಣಿ, ಬೆಳೆ ವಿಮೆ ಯೋಜನೆಯಡಿ ತಾಕುವಾರಿ ಬೆಳೆ ಪರೀಶಿಲನೆ, ಬೆಳೆ ಸಾಲ ಪಡೆಯಲು ಮತ್ತು ಬೆಳೆ ಹಾನಿ ಪರಿಶೀಲನೆಗೆ ಸಹಾಯವಾಗುತ್ತದೆ ಎಂದು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.