ADVERTISEMENT

ವ್ಯವಸ್ಥೆಗಳು ಅಚ್ಚುಕಟ್ಟಾಗಿರಲಿ: ಡಿ.ಸಿ ಸೂಚನೆ

ಸ್ವಾತಂತ್ರ್ಯ ದಿನಾಚರಣೆ ಕುರಿತಾದ ಪೂರ್ವಭಾವಿ ಸಭೆ

​ಪ್ರಜಾವಾಣಿ ವಾರ್ತೆ
Published 25 ಜುಲೈ 2023, 15:31 IST
Last Updated 25 ಜುಲೈ 2023, 15:31 IST
ಗದಗ ಜಿಲ್ಲಾಧಿಕಾರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್‌. ಮಾತನಾಡಿದರು. ಎಡಿಸಿ ಅನ್ನಪೂರ್ಣ ಎಂ. ಇದ್ದಾರೆ
ಗದಗ ಜಿಲ್ಲಾಧಿಕಾರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್‌. ಮಾತನಾಡಿದರು. ಎಡಿಸಿ ಅನ್ನಪೂರ್ಣ ಎಂ. ಇದ್ದಾರೆ   

ಗದಗ: ‘ಆಗಸ್ಟ್‌ 15ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆಯನ್ನು ಲೋಪದೋಷಗಳಿಲ್ಲದಂತೆ ಆಚರಿಸಲು ವಿವಿಧ ಇಲಾಖೆಗಳ ಅಧಿಕಾರಿಗಳು ಕ್ರಮ ವಹಿಸಬೇಕು’ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ಕುರಿತಾದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

‘ಸ್ವಾತಂತ್ರ್ಯೋತ್ಸವದ ಮುನ್ನಾ ದಿನವಾದ ಆ.14 ಹಾಗೂ 15ರಂದು ಎರಡು ದಿನಗಳ ಕಾಲ ಜಿಲ್ಲಾಡಳಿತ ಭವನ ಸೇರಿದಂತೆ ವಿವಿಧ ಸರ್ಕಾರಿ ಕಟ್ಟಡಗಳು, ನಗರದ ಪ್ರಮುಖ ವೃತ್ತಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಬೇಕು. ಅಂಗಡಿಗಳು, ಮಳಿಗೆಗಳ ಮುಂದೆ ಸ್ವಾತಂತ್ರ್ಯ ದಿನಾಚರಣೆಯ ಬ್ಯಾನರ್ ಅಳವಡಿಕೆಗೆ ಕ್ರಮ ವಹಿಸಬೇಕು’ ಎಂದು ಸೂಚಿಸಿದರು.

ADVERTISEMENT

ಆಗಸ್ಟ್‌ 15ರಂದು ಬೆಳಗ್ಗೆ 7.30ಕ್ಕೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ ನಡೆಯಲಿದೆ. ನಂತರ ಬೆಳಗ್ಗೆ 9ಕ್ಕೆ ನಗರದ ಕೆ.ಎಚ್.ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ.ಪಾಟೀಲ ಧ್ವಜಾರೋಹಣ ನೆರವೇರಿಸಲಿದ್ದಾರೆ. ಅಂದು ಶಾಲಾ ಕಾಲೇಜು ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಎಲ್ಲ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಕಡ್ಡಾಯವಾಗಿ ಹಾಜರಿರಬೇಕು’ ಎಂದು ತಿಳಿಸಿದರು.

‘ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದ್ದು, ಗಣ್ಯ ವ್ಯಕ್ತಿಗಳಿಗೆ ಶಿಷ್ಟಾಚಾರದನ್ವಯ ಆಸನದ ವ್ಯವಸ್ಥೆಗೆ ಕ್ರಮ ವಹಿಸಬೇಕು. ನಗರದ ಜಿಲ್ಲಾ ಕ್ರೀಡಾಂಗಣ ಸೇರಿದಂತೆ ಪ್ರಮುಖ ಬೀದಿ ಹಾಗೂ ವೃತ್ತಗಳ ಸ್ವಚ್ಛತೆಗೆ ನಗರಸಭೆ ಪೌರಾಯುಕ್ತರು ನಿಗಾ ವಹಿಸಬೇಕು. ತುರ್ತು ಸೇವೆಗಾಗಿ ಆಂಬ್ಯುಲೆನ್ಸ್‌ ಸಿದ್ಧವಾಗಿಡಬೇಕು’ ಎಂದು ತಿಳಿಸಿದರು.

ಶಿಷ್ಟಾಚಾರದ ಅನುಸಾರವಾಗಿ ಆಮಂತ್ರಣ ಪತ್ರಿಕೆ ಮುದ್ರಣ, ಉಪಾಹಾರದ ವ್ಯವಸ್ಥೆ, ಪರೇಡ್ ವ್ಯವಸ್ಥೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ, ಧ್ವನಿವರ್ಧಕ ಸೇರಿದಂತೆ ಕಾರ್ಯಕ್ರಮದ ವೇದಿಕೆ ವ್ಯವಸ್ಥೆ, ಕುರಿತು ಚರ್ಚಿಸಲಾಯಿತು.

ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರವಿ ಗುಂಜೀಕರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ.ಶೆಟ್ಟೆಪ್ಪನವರ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕರಿಸಿದ್ಧಪ್ಪ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವಲಿಂಗಪ್ಪ ಜಿ.ಎಂ., ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ಜಿ.ಬಿ.ಶಿರೋಳ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

- ಸ್ವಾತಂತ್ರ್ಯೋತ್ಸವದಂದು ವಿವಿಧ ರಂಗಗಳಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನಕ್ಕೆ ಆಯಾ ಇಲಾಖಾಧಿಕಾರಿಗಳು ಕ್ರಮ ವಹಿಸಬೇಕು ಅನ್ನಪೂರ್ಣ ಎಂ. ಹೆಚ್ಚುವರಿ ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.