ADVERTISEMENT

ಅತಿವೃಷ್ಟಿ ವೇಳೆ ಜನರ ಸುರಕ್ಷತೆಗೆ ಕ್ರಮ ವಹಿಸಿ: ಡಿಸಿ ಸೂಚನೆ

​ಪ್ರಜಾವಾಣಿ ವಾರ್ತೆ
Published 20 ಜೂನ್ 2025, 14:38 IST
Last Updated 20 ಜೂನ್ 2025, 14:38 IST
ಗದಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್‌.ಶ್ರೀಧರ್‌ ಮಾತನಾಡಿದರು
ಗದಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್‌.ಶ್ರೀಧರ್‌ ಮಾತನಾಡಿದರು   

ಗದಗ: ‘ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮಳೆಯಿಂದ ಹಾನಿಗೊಳಗಾಗುವ ಗ್ರಾಮಗಳ ಸಾರ್ವಜನಿಕರ ಸುರಕ್ಷತೆಗೆ ಸ್ಥಳೀಯ ಅಧಿಕಾರಿಗಳು ಕ್ರಮವಹಿಸಬೇಕು. ಬೆಣ್ಣೆಹಳ್ಳ ಹಾಗೂ ಮಲಪ್ರಭಾ ನದಿಯ ಪ್ರವಾಹದಿಂದ ತೊಂದರೆಗೊಳಗಾಗುವ ಗ್ರಾಮಗಳ ಸುರಕ್ಷತೆ ಹೆಚ್ಚಿನ ಗಮನಹರಿಸಬೇಕು’ ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಎಲ್ಲರೂ ಕೇಂದ್ರ ಸ್ಥಾನದಲ್ಲೇ ಇರಬೇಕು. ಅತಿವೃಷ್ಟಿ ಅಥವಾ ಪ್ರವಾಹ ಪರಿಸ್ಥಿತಿ ಎದುರಾದಲ್ಲಿ ಸಮರ್ಪಕವಾಗಿ ಎದುರಿಸಬೇಕು. ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವ ಮೂಲಕ ಜನ ಜಾನುವಾರುಗಳ ಜೀವಹಾನಿ ತಡೆಯಬೇಕು. ಜತೆಗೆ ಆಸ್ತಿ ರಕ್ಷಣೆ ಮಾಡಬೇಕು’ ಎಂದು ಹೇಳಿದರು.

ADVERTISEMENT

ಉಪವಿಭಾಗಾಧಿಕಾರಿ ಗಂಗಪ್ಪ ಎಂ. ಮಾತನಾಡಿ, ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಈಗಾಗಲೇ ಪೂರ್ವಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯಿಂದ ಮನೆ, ಶಾಲೆಗಳಿಗೆ ಆಗಿರುವ ಹಾನಿ ಹಾಗೂ ಬೆಳೆ ಹಾನಿ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎಂ.ಬಿ.ಸಂಕದ, ಹೆಚ್ಚುವರಿ ಜಿಲ್ಲಾಧಿಕಾರಿ ಅನ್ನಪೂರ್ಣಾ ಎಂ., ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್ ಕುಮಾರ್‌, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟ್ಟೂರ, ಜಂಟಿ ಕೃಷಿ ನಿರ್ದೇಶಕಿ ಜಿ.ಎಚ್‌.ತಾರಾಮಣಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ನೀಲಗುಂದ, ತಹಶೀಲ್ದಾರ್‌ಗಳು, ಕಾರ್ಯನಿರ್ವಾಹಕ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಇದ್ದರು.

ಪ್ರವಾಹ ಪರಿಸ್ಥಿತಿ ಸಮರ್ಥವಾಗಿ ನಿಭಾಯಿಸಲು ಎಲ್ಲ ಅಧಿಕಾರಿಗಳು ಸನ್ನದ್ಧರಾಗಿರಬೇಕು. ಅಗತ್ಯವಿದ್ದಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಬೇಕು.
ಭರತ್‌ ಎಸ್‌. ಜಿಲ್ಲಾ ಪಂಚಾಯಿತಿ ಸಿಇಒ
ಚರಂಡಿಗಳ ಸ್ವಚ್ಛತೆಗೆ ಗಮನ ಹರಿಸಿ
‘ಮಳೆಗಾಲದಲ್ಲಿ ಚರಂಡಿಗಳ ಸ್ವಚ್ಛತೆಗೆ ಗಮನ ಹರಿಸಬೇಕು. ಮಳೆನೀರು ಚರಂಡಿ ಹಾಗೂ ಪ್ರಮುಖ ಕಾಲುವೆಗಳ ಮೂಲಕ ಸರಾಗವಾಗಿ ಮುಂದೆ ಸಾಗಲು ಅನುವಾಗುವಂತೆ ಚರಂಡಿಗಳಲ್ಲಿ ಗಿಡ ಪ್ಲಾಸ್ಟಿಕ್‌ವಸ್ತುಗಳನ್ನು ತೆರವುಗೊಳಿಸಬೇಕು’ ಎಂದು ಜಿಲ್ಲಾಧಿಕಾರಿ ಸಿ.ಎನ್‌.ಶ್ರೀಧರ್‌ ಸೂಚಿಸಿದರು. ತಗ್ಗುಪ್ರದೇಶಗಳಲ್ಲಿ ಹಾಗೂ ಶಿಥಿಲಾವಸ್ಥೆಯಲ್ಲಿರುವ ಮಣ್ಣಿನ ಮನೆಗಳಲ್ಲಿ ವಾಸಿಸುವವರನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಬೇಕು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.