ಮುಂಡರಗಿ: ಎಸ್ಸಿಪಿ– ಟಿಎಸ್ಪಿ ಯೋಜನೆಯ ಅನುದಾನವನ್ನು ಸರಿಯಾಗಿ ಬಳಕೆ ಮಾಡುವುದರ ಜೊತೆಗೆ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಬೇಕು. ತಾಲ್ಲೂಕಿನ ಡೋಣಿ, ಜಂತ್ಲಿಶಿರೂರ ಮೊದಲಾದ ಭಾಗಗಳಲ್ಲಿ ಎಸ್ಸಿ, ಎಸ್ಟಿ ಕಾಲೊನಿಗಳ ರಸ್ತೆಗಳು ಹದಗೆಟ್ಟಿದ್ದು ದುರಸ್ತಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಶಕುಂತಲಾ ಚವಾಣ ಸೂಚಿಸಿದರು.
ಪಟ್ಟಣದ ತಾಲ್ಲೂಕು ಪಂಚಾಯ್ತಿ ಸಾಮರ್ಥ್ಯ ಸೌಧದಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ತಾಲ್ಲೂಕು ಪಂಚಾಯ್ತಿ ಇಒ ಎಸ್.ಎಸ್.ಕಲ್ಮನಿ ಮಾತನಾಡಿ, ಎಸ್ಸಿಪಿ, ಟಿಎಸ್ಪಿ ಯೋಜನೆ ಅಡಿಯಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳುವಲ್ಲಿ ಹಿನ್ನೆಡೆಯಾದರೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ನೀಡಲಾಗುವುದು ಎಂದು ಎಚ್ಚರಿಸಿದರು. ಶೇ40ರಷ್ಟು ಎಸ್ಸಿ ಹಾಗೂ ಎಸ್ಟಿ ಜನಾಂಗ ಇರುವ ಭಾಗದಲ್ಲಿ ಎಸ್ಸಿಪಿ– ಟಿಎಸ್ಪಿ ಯೋಜನೆಯ ಕಾಮಗಾರಿಯನ್ನು ಕೈಗೊಳ್ಳಬೇಕು. ಕಾಮಗಾರಿಯನ್ನು ಬೇರೆಡೆಗೆ ವರ್ಗಾಯಿಸಿದರೆ ಅಥವಾ ಯೋಜನೆಯನ್ನು ದುರುಪಯೋಗ ಮಾಡಿಕೊಂಡರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕಾಗುತ್ತದೆ ಎಂದು ತಿಳಿಸಿದರು.
ಪ್ರತಿ ತಿಂಗಳು ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆ ಸಭೆ ನಡೆಸಲಾಗುವುದು. ಎಲ್ಲ ಅಧಿಕಾರಿಗಳು ನಿಗಧಿತ ಅವಧಿಯಲ್ಲಿ ಪ್ರಗತಿ ವರದಿಯನ್ನು ಸಭೆಗೆ ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಉದಯಕುಮಾರ ಯಲಿವಾಳ ತಿಳಿಸಿದರು. ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಎಸ್ಸಿಪಿ, ಟಿಎಸ್ಪಿ ಯೋಜನೆಯ ಪ್ರಗತಿ ವರದಿ ಕುರಿತು ಮಾಹಿತಿ ನೀಡಿದರು. ತಾಲ್ಲೂಕು ಪಂಚಾಯ್ತಿ ಸದಸ್ಯೆ ಪುಷ್ಪಾವತಿ ಪಾಟೀಲ, ವೈ.ಎಚ್.ಜಾಲವಾಡಗಿ, ಗಂಗಾಧರ ಅಣ್ಣಿಗೇರಿ, ಪ್ರಕಾಶ ವಂದೇ, ಶರಣಯ್ಯ ಕುಲಕರ್ಣಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.