ಗದಗ: ‘ವಿದ್ಯಾವಂತ, ಬುದ್ಧಿವಂತ ಹಾಗೂ ಸಾಮಾನ್ಯಜ್ಞಾನ ಹೊಂದಿರುವ ವಿದ್ಯಾರ್ಥಿಗಳನ್ನು ರೂಪುಗೊಳಿಸಲು ಶಿಕ್ಷಕರು ಶ್ರಮಿಸಬೇಕು. ಅದಕ್ಕೆ ಪೂರಕವಾಗಿ ಲಭ್ಯವಿರುವ ಶೈಕ್ಷಣಿಕ ತಂತ್ರಜ್ಞಾನ ಮತ್ತು ಬೋಧನಾ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು’ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.
ಎಸ್ಎಸ್ಎಲ್ಸಿ ಫಲಿತಾಂಶ ವೃದ್ಧಿಗೆ ಪ್ರೌಢಶಾಲಾ ಮುಖ್ಯೋಪಾಧ್ಯಾಯರಿಗೆ ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಡಿಡಿಪಿಐ ಆರ್.ಎಸ್.ಬುರುಡಿ ಮಾತನಾಡಿ, ‘ಶಿಕ್ಷಕರು ತರಗತಿಗೆ ಹೋಗುವ ಮುನ್ನ ಪೂರ್ವಸಿದ್ಧತೆ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಸರಳವಾಗಿ ಅರ್ಥವಾಗುವ ರೀತಿಯಲ್ಲಿ ಪಠ್ಯ ಬೋಧಿಸಬೇಕು’ ಎಂದರು.
ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾದ ಎಂ.ಕೆ.ಲಮಾಣಿ ಮಾತನಾಡಿ, ‘ಸಚಿವ ಎಚ್.ಕೆ.ಪಾಟೀಲ ಅವರ ಅಪೇಕ್ಷೆಯಂತೆ ಗದಗ ಜಿಲ್ಲೆ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಉತ್ತಮ ಪ್ರಗತಿ ದಾಖಲಿಸಬೇಕಿದೆ’ ಎಂದರು.
‘ಜಿಲ್ಲೆಯ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ ಶಿಕ್ಷಕರೆಲ್ಲರೂ ಈಗಿನಿಂದಲೇ ಶ್ರಮವಹಿಸಬೇಕು. ವಿದ್ಯಾರ್ಥಿಗಳಿಗೆ ಪಠ್ಯವನ್ನು ಸರಳವಾಗಿ ಅರ್ಥೈಸುವ ಮೂಲಕ ಅವರು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವ ಧೈರ್ಯ ಬೆಳೆಸಬೇಕು. ಈ ನಿಟ್ಟಿನಲ್ಲಿ ಶಿಕ್ಷಕರು ತಮ್ಮ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸಬೇಕು’ ಎಂದರು.
ಕಾರ್ಯಾಗಾರದಲ್ಲಿ ಗದಗ ಜಿಲ್ಲೆಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳ ಮುಖ್ಯೋಪಾಧ್ಯಾಯರು ಭಾಗವಹಿಸಿದ್ದರು.
ಶಿಕ್ಷಣ ಇಲಾಖೆ ಅಧಿಕಾರಿಗಳಾದ ಎಚ್.ಬಿ. ರಡ್ಡೇರ, ಕಂಬಳಿ ಹಾಗೂ ಮಂಗಳ ತಾಪಸ್ಕರ್, ಎಚ್.ಎನ್. ನಾಯಕ್, ಶೆಟ್ಟಪ್ಪನವರ, ವಿ.ವಿ. ನಡುವಿನಮನಿ ಇದ್ದರು. ಯರಗುಡಿ ಕಾರ್ಯಕ್ರಮ ನಿರೂಪಿಸಿದರು. ಬಡಿಗೇರ ವಂದಿಸಿದರು.
ಶಿಕ್ಷಕ ವೃಂದ ಎಲ್ಲಾ ಕಾರ್ಯಗಳಲ್ಲಿ ಭಾಗಿಯಾಗುವುದರೊಂದಿಗೆ ಶೈಕ್ಷಣಿಕ ಗುಣಮಟ್ಟ ಸುಧಾರಿಸುವ ಕಾರ್ಯವನ್ನು ಸಮರ್ಥವಾಗಿ ನಿಭಾಯಿಸಬೇಕುಬಿ.ಎಫ್.ಪೂಜಾರ ಶಿಕ್ಷಕರ ಸಂಘಟನೆ ಅಧ್ಯಕ್ಷ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.