ನರಗುಂದ: ಅತಿವೃಷ್ಟಿಯಿಂದ ರೈತರ ಬೆಳೆಗಳಿಗೆ ಹಾನಿಯಾಗಿದ್ದು, ರಾಜ್ಯ ಸರ್ಕಾರ ಇದುವರೆಗೂ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಸೋಮವಾರ ತಾಲ್ಲೂಕಿನ ಕೊಣ್ಣೂರ ಗ್ರಾಮದಲ್ಲಿ ಹುಬ್ಬಳ್ಳಿ–ವಿಜಯಪುರ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಶಾಸಕ ಸಿ.ಸಿ. ಪಾಟೀಲ, ‘ಆಗಸ್ಟ್ ತಿಂಗಳಲ್ಲಿ ಸುರಿದ ಮಳೆಗೆ ರೈತರು ಬೆಳೆದ ಹೆಸರು, ಗೋವಿನ ಜೋಳ, ಹತ್ತಿ ಬೆಳೆಗಳು ಸಂಪೂರ್ಣ ಹಾನಿಯಾಗಿದ್ದು, ರೈತರಿಗೆ ಕೂಡಲೇ ಬೆಳೆ ಪರಿಹಾರ ನೀಡಬೇಕು.
ಕೊಣ್ಣೂರ ಗ್ರಾಮದಲ್ಲಿ ಬೆಳೆಹಾನಿ ಪರಿಶೀಲಿಸಿದ ಅಧಿಕಾರಿಗಳು ಹೊಳೆ ಪಾತ್ರದಲ್ಲಿನ ಜಮೀನುಗಳಿಗೆ ಮಾತ್ರ ಹಾನಿಯಾಗಿದೆ ಎಂದು ವರದಿ ಸಲ್ಲಿಸಿದ್ದಾರೆ. ಈ ಕುರಿತು ರೈತರು ತಹಶೀಲ್ದಾರರು, ಸಹಾಯಕ ಕೃಷಿ ನಿರ್ದೇಶಕರು ಸಮೀಕ್ಷೆ ವಿವರ ನೀಡುತ್ತಿಲ್ಲ ಎಂದು ರೈತರು ಆರೋಪಿಸಿದರು.
ರೈತರ ಸಂಕಷ್ಟ ಅರಿತು ಸರ್ಕಾರ ಪರಿಹಾರ ನೀಡಬೇಕು. ಬೆಳೆ ಪರಿಹಾರ ನೀಡುವ ವಿಷಯವಾಗಿ ಅಧಿಕಾರಿಗಳಿಂದ ಹಾರಿಕೆ ಉತ್ತರ ಕೇಳಿ ಬರುತ್ತಿದ್ದು, ಬೆಳೆ ಹಾನಿಯಾಗಿರುವ ಜಮೀನುಗಳನ್ನು ಸಮೀಕ್ಷೆ ಮಾಡಲು ಅಧಿಕಾರಿಗಳಿಗೆ ಸೂಚಿಸಬೇಕು’ ಶಾಸಕ ಸಿ.ಸಿ. ಪಾಟೀಲ ಒತ್ತಾಯಿಸಿದರು.
ಈ ವೇಳೆ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ನಾಗನಗೌಡ ತಿಮ್ಮನಗೌಡ್ರ, ಎನ್.ಕೆ. ಸೋಮಾಪುರ, ಪ್ರಕಾಶಗೌಡ ತಿರಕನಗೌಡ್ರ, ಶೇಖರಗೌಡ ಸಾಲಿಗೌಡ್ರ, ಶಂಕರಗೌಡ ಯಲ್ಲಪ್ಪಗೌಡ್ರ, ಹೇಮರಡ್ಡಿ ಚೌಡರಡ್ಡಿ, ಕೃಷ್ಟಪ್ಪ ಚವ್ಹಾಣ, ಕೊಟ್ರೇಶ ಕೊಟ್ರಶೆಟ್ಟಿ, ಚಂದ್ರು ದಂಡಿನ, ಪರಪ್ಪ ಸಾಹುಕಾರ, ಬಿ.ಬಿ. ಐನಾಪುರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.