
ನರಗುಂದ: ಬೆಂಬಲ ಯೋಜನೆಯಡಿ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭ ಹಾಗೂ ಬೆಳೆ ಹಾನಿ ಪರಿಹಾರ ವಿತರಣೆಗೆ ಆಗ್ರಹಿಸಿ ಭಾರತೀಯ ಕಿಸಾನ್ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಶನಿವಾರ ತಾಲ್ಲೂಕಿನ ಕೊಣ್ಣೂರು ಗ್ರಾಮದ ಬಸ್ ನಿಲ್ದಾಣದ ಬಳಿಯ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ತಹಶೀಲ್ದಾರ್ ಬರುವವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ರೈತರು ಪಟ್ಟು ಹಿಡಿದ ಕಾರಣ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತು.
ಭಾರತೀಯ ಕಿಸಾನ ಸಂಘದ ಜಿಲ್ಲಾ ಘಟಕ ಅಧ್ಯಕ್ಷ ಎಸ್.ಎಸ್. ಪಾಟೀಲ ಮಾತನಾಡಿ, ‘ಅತಿವೃಷ್ಠಿಯಿಂದ ಆಗಿರುವ ಬೆಳೆಹಾನಿಗೆ ರಾಜ್ಯ ಸರ್ಕಾರ ಪರಿಹಾರ ನೀಡುವ ಆಸೆ ತೋರಿಸುತ್ತಿದೆ ಹೊರತು ಪರಿಹಾರ ನೀಡುತ್ತಿಲ್ಲ. ಮೆಕ್ಕೆಜೋಳ ಖರೀದಿ ಕೇಂದ್ರ ಪ್ರಾರಂಭಿಸುತ್ತಿಲ್ಲ’ ಎಂದು ಆರೋಪಿಸಿದರು.
ಪ್ರತಿಭಟನಾ ಸ್ಥಳಕ್ಕೆ ತಹಶೀಲ್ದಾರ್ ಶ್ರೀಶೈಲ ತಳವಾರ ಆಗಮಿಸಿದ ನಂತರ ರೈತರು ಮನವಿ ಸಲ್ಲಿಸಿದರು.
ಎಪಿಎಂಸಿ ಮಾಜಿ ಅಧ್ಯಕ್ಷ ಶಂಕರಗೌಡ ಯಲ್ಲಪ್ಪಗೌಡ್ರ ಮಾತನಾಡಿ, ‘ಕೇಂದ್ರ ಸರ್ಕಾರ ಬೆಳೆ ಹಾನಿ ಪರಿಹಾರ ನೀಡಿದ್ದು, ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ಪ್ರತಿ ಹೆಕ್ಟರ್ಗೆ ₹25 ಸಾವಿರ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು.
ತಾಲ್ಲೂಕು ಅಧ್ಯಕ್ಷ ನಾಗೇಶ ಅಪ್ಪೋಜಿ, ವಿಠ್ಠಲ ಮುಧೋಳೆ, ಮುತ್ತು ಯಲಿಗಾರ, ಎನ್.ಕೆ. ಸೋಮಾಪೂರ, ಎಸ್.ಆರ್. ಸಾಲಿಗೌಡ್ರ, ನೇತಾಜಿಗೌಡ ಕೆಂಪನಗೌಡ್ರ, ಉಮೇಶ ಮರ್ಚಪ್ಪನವರ, ಟಿ.ಬಿ. ಶಿರಿಯಪ್ಪಗೌಡ್ರ, ಬಿ.ಎಂ. ಕೊರೆಗನ್ನವರ, ಟಿ.ಟಿ. ವಾಸನ, ಟಿ.ಬಿ. ವಾಸನ, ಎಸ್.ಎ. ವಾಲಿ ಇದ್ದರು.
ಸ್ವಾಮೀಜಿ ಬೆಂಬಲ: ಪ್ರತಿಭಟನೆ ವೇಳೆ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಮಾರ್ಗದಲ್ಲಿ ತೆರಳುವಾಗ ರೈತರ ಹೋರಾಟಕ್ಕೆ ಬೆಂಬಲಿಸಿ ಮಾತನಾಡಿ, ‘ಕಬ್ಬಿನ ದರ ಹೆಚ್ಚಳಕ್ಕೆ ರೈತರು ದೊಡ್ಡ ಪ್ರಮಾಣದಲ್ಲಿ ಹೋರಾಟ ಮಾಡುತ್ತಿದ್ದಾರೆ. ರೈತರ ಹೋರಾಟಗಳು ಉಗ್ರ ಸ್ವರೂಪ ತಾಳುವ ಮುಂಚೆ ಸರ್ಕಾರ ಎಚ್ಚೆತ್ತು ಕೊಳ್ಳಬೇಕು’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.