
ಪ್ರಜಾವಾಣಿ ವಾರ್ತೆ
ಲಕ್ಷ್ಮೇಶ್ವರ: ಮೆಕ್ಕೆಜೋಳ ಬೆಂಬಲ ಬೆಲೆ ಖರೀದಿ ಕೇಂದ್ರದಲ್ಲಿ ಖರೀದಿ ಪ್ರಕ್ರಿಯೆ ಮಂದಗತಿಯಲ್ಲಿ ಸಾಗಿದೆ. ಇದರಿಂದಾಗಿ ರೈತರಿಗೆ ತೀವ್ರ ಆಗುತ್ತಿದೆ. ಕಾರಣ ಖರೀದಿ ಪ್ರಕ್ರಿಯೆನ್ನು ತ್ವರಿತಗೊಳಿಸಬೇಕು’ ಎಂದು ಆಗ್ರಹಿಸಿ ಗುರುವಾರ ಲಕ್ಷ್ಮೇಶ್ವರದ ಸಮಗ್ರ ರೈತ ಹೋರಾಟ ಸಮಿತಿ ಸದಸ್ಯರು ಜಿಲ್ಲಾಧಿಕಾರಿ ಶ್ರೀಧರ ಅವರಿಗೆ ಮನವಿ ಸಲ್ಲಿಸಿದರು.
ಲಕ್ಷ್ಮೇಶ್ವರದಲ್ಲಿ ಮೆಕ್ಕೆಜೋಳದ ಖರೀದಿ ಕೇಂದ್ರ ಸ್ಥಾಪನೆಗಾಗಿ ರೈತರು 18 ದಿನಗಳವರೆಗೆ ಸುದೀರ್ಘ ಹೋರಾಟ ನಡೆಸಿದ್ದರು. ರೈತರ ಹೋರಾಟಕ್ಕೆ ಸ್ಪಂದಿಸಿದ ಸರ್ಕಾರ ಖರೀದಿ ಕೇಂದ್ರ ಆರಂಭಿಸಿದೆ. ಖರೀದಿ ಕೇಂದ್ರ ಆರಂಭ ಆಗುವಲ್ಲಿ ಜಿಲ್ಲಾಧಿಕಾರಿಗಳ ಪ್ರಯತ್ನ ದೊಡ್ಡದು. ಈ ಹಿನ್ನೆಲೆಯಲ್ಲಿ ರೈತ ಮುಖಂಡರು ಜಿಲ್ಲಾಧಿಕಾರಿಯನ್ನು ಸನ್ಮಾನಿಸಿದರು.
ಸರ್ಕಾರದ ಆದೇಶ ಮೇರೆಗೆ ಪಟ್ಟಣದ ಟಿಎಪಿಸಿಎಂಎಸ್ ಮೂಲಕ ಖರೀದಿ ಪ್ರಕ್ರಿಯೆ ನಡೆಯುತ್ತಿದೆ. ಒಂದೂವರೆ ಸಾವಿರಕ್ಕಿಂತ ಹೆಚ್ಚಿನ ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ. ಆದರೆ ಖರೀದಿ ಕೆಲಸ ಸಾಕಷ್ಟು ಮಂದಗತಿಯಲ್ಲಿ ನಡೆಯುತ್ತಿದೆ. ಇದರಿಂದಾಗಿ ರೈತರು ಮೆಕ್ಕೆಜೋಳ ಮಾರಾಟಕ್ಕಾಗಿ ಮತ್ತೆ ಪರದಾಡುತ್ತಿದ್ದಾರೆ. ನೋಡಲ್ ಕೇಂದ್ರದಲ್ಲಿ ಕೆಲವೊಂದು ನ್ಯೂನತೆಗಳಿದ್ದು ಅವುಗಳನ್ನು ಶೀಘ್ರವೇ ಸರಿಪಡಿಸಬೇಕು’ ಎಂದು ಆಗ್ರಹಿಸಿದರು.
ಕೇವಲ ನೆಪಕ್ಕೆ ಮಾತ್ರ ಖರೀದಿ ಕೇಂದ್ರ ಆಗದೆ ನಿಜವಾಗಿ ರೈತರ ಬಾಳು ಬೆಳಗುವ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಮತ್ತೆ ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ’ ಎಂದು ರೈತ ಮುಖಂಡರಾದ ರವಿಕಾಂತ ಅಂಗಡಿ, ಮಂಜುನಾಥ ಮಾಗಡಿ, ಪೂರ್ಣಾಜಿ ಖರಾಟೆ, ನಾಗರಾಜ ಚಿಂಚಲಿ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಮುತ್ತಣ್ಣ ನೀರಲಗಿ, ಸುರೇಶ, ಬಸಯ್ಯ ಪೂಜಾರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.