
ಗದಗ: ಇಲ್ಲಿನ ಗದಗ ಬೆಟಗೇರಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಈ ವಿಷಯ ಈಗ ಸುಪ್ರೀಂ ಕೋರ್ಟ್ ಅಂಗಳ ತಲುಪಿದೆ. ಶತಾಯಗತಾಯ ಅಧಿಕಾರ ಪಡೆಯಲೇಬೇಕು ಎಂಬ ಜಿದ್ದಿಗೆ ಬಿದ್ದಿದ್ದ ಬಿಜೆಪಿ ಸದಸ್ಯರು ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆಗೆ ತಡೆ ಆದೇಶ ತರುವಲ್ಲಿ ಯಶಸ್ವಿಯಾಗಿರುವುದರಿಂದ ಚುನಾವಣಾ ಕಣ ಮತ್ತೆ ರಂಗೇರಿದೆ.
ಪ್ರಕರಣದ ಹಿನ್ನೆಲೆ: ನಕಲಿ ಠರಾವು ಸೃಷ್ಟಿಸಿದ ಆರೋಪದ ಮೇಲೆ ಗದಗ ಬೆಟಗೇರಿ ನಗರಸಭೆಯ ಮೂವರು ಬಿಜೆಪಿ ಸದಸ್ಯರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪ್ರಾದೇಶಿಕ ಆಯುಕ್ತರು ನೀಡಿದ್ದ ಆದೇಶವನ್ನು ಬೆಂಗಳೂರಿನ ಹೈಕೋರ್ಟ್ ಏಕಸದಸ್ಯ ಪೀಠ ಎತ್ತಿ ಹಿಡಿದಿತ್ತು. ಮುಂದುವರಿದು, ಮುಂದಿನ 45 ದಿನಗಳ ಒಳಗಾಗಿ ಚುನಾವಣೆ ನಡೆಸುವಂತೆ ಆದೇಶಿಸಿತ್ತು. ಅದರಂತೆ ಚುನಾವಣಾಧಿಕಾರಿ ಗಂಗಪ್ಪ ಎಂ. ಮಾರ್ಚ್ 3ಕ್ಕೆ ಚುನಾವಣೆ ನಡೆಸುವುದಾಗಿ ತಿಳಿಸಿದ್ದರು.
ಇದರಿಂದ ಭ್ರಮನಿರಸನಗೊಂಡಿದ್ದ ಬಿಜೆಪಿ ಸದಸ್ಯರು, ‘ಹೈಕೋರ್ಟ್ ಆದೇಶಕ್ಕೆ ತಡೆ ನೀಡಬೇಕು’ ಎಂದು ಸುಪ್ರೀಂ ಕೋರ್ಟ್ನ ಮೆಟ್ಟಿಲೇರಿದ್ದರು.
‘ನಗರಸಭೆ ಸದಸ್ಯರ ಸದಸ್ಯತ್ವ ರದ್ದು ಮಾಡುವ ಅಧಿಕಾರ ಅಧಿಕಾರಿಗಳಿಗೆ ಇಲ್ಲ. ಹೀಗಾಗಿ, ಬಿಜೆಪಿಯ ಮೂವರು ಸದಸ್ಯರಿಗೆ ಚುನಾವಣೆಯಲ್ಲಿ ಭಾಗವಹಿಸಲು ಮತ ಹಕ್ಕು ನೀಡಬೇಕು, ಇಲ್ಲವಾದರೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯನ್ನು ಮುಂದೂಡಬೇಕು’ ಎಂದು ಬಿಜೆಪಿ ಸದಸ್ಯರು ಫೆ.26ರಂದು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಫೆ.27ಕ್ಕೆ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ನ ದ್ವಿ ಸದಸ್ಯ ಪೀಠ, ವಾದ ಪ್ರತಿವಾದ ಆಲಿಸಿ, ಚುನಾವಣೆಗೆ ತಡೆ ನೀಡಿದೆ.
‘ಗದಗ ಬೆಟಗೇರಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಚುನಾವಣೆಗೆ ಸಂಬಂಧಿಸಿದಂತೆ ನಮ್ಮ ಕಾನೂನು ಹೋರಾಟಕ್ಕೆ ಸುಪ್ರೀಂ ಕೋರ್ಟ್ನಲ್ಲಿ ಜಯ ಸಿಕ್ಕಿದೆ. ನ್ಯಾಯಾಂಗ ನಿಂದನೆ ಮತ್ತು ಸದಸ್ಯತ್ವ ಮರಳಿಸಬೇಕು ಎಂದು ಧಾರವಾಡ ಹೈಕೋರ್ಟ್ ಪೀಠಕ್ಕೆ ಸಲ್ಲಿಸಿರುವ ಅರ್ಜಿ ಮಾರ್ಚ್ 2ರಂದು ವಿಚಾರಣೆಗೆ ಬರಲಿದ್ದು, ಅಲ್ಲೂ ನಮಗೆ ಗೆಲುವಾಗುವ ಭರವಸೆ ಇದೆ. ಹೀಗಾಗಿ ಯಾವುದೇ ಪರಿಸ್ಥಿತಿಯಲ್ಲೂ ಮಾರ್ಚ್ 3ರಂದು ಚುನಾವಣೆ ನಡೆಯುವುದಿಲ್ಲ’ ಎಂದು ನಗರಸಭೆಯ ಬಿಜೆಪಿ ಸದಸ್ಯ ಚಂದ್ರು ತಡಸದ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.
Quote - ಸದ್ಯದ ಪರಿಸ್ಥಿತಿ ಅವಲೋಕಿಸಿದರೆ ನಮ್ಮ ಸದಸ್ಯತ್ವ ಮರಳಿ ಸಿಗಲಿದೆ. ಕಾಂಗ್ರೆಸ್ನ ಷಡ್ಯಂತ್ರ ಫಲ ನೀಡಲಿಲ್ಲ. ಮತ್ತೆ ನಾವೇ ಗದ್ದುಗೆ ಏರುವುದು ನಿಶ್ಚಿತ ಚಂದ್ರು ತಡಸದ ನಗರಸಭೆ ಬಿಜೆಪಿ ಸದಸ್ಯ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.