ಗದಗ: ‘ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರಗಳನ್ನು ಅಪಮಾನಿಸುತ್ತಿರುವ ಸಮಾಜವಿರೋಧಿ ಶಕ್ತಿಗಳನ್ನು ಪತ್ತೆ ಹಚ್ಚಿ, ಅವರನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು’ ಎಂದು ಬಿಜೆಪಿ ಗದಗ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಕುರಡಗಿ ಆಗ್ರಹಿಸಿದರು.
ಧರ್ಮಸ್ಥಳದ ಹೆಸರಿಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪಕ್ಷದ ಗದಗ ನಗರ ಮಂಡಲ ಹಾಗೂ ಗ್ರಾಮೀಣ ಮಂಡಲದ ವತಿಯಿಂದ ನಗರದ ಗಾಂಧಿ ವೃತ್ತದಲ್ಲಿ ಶುಕ್ರವಾರ ನಡೆದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದರು.
‘ಧರ್ಮಸ್ಥಳ ಕ್ಷೇತ್ರಕ್ಕೆ ಕರ್ನಾಟಕವಷ್ಟೇ ಅಲ್ಲದೇ ದೇಶದಾದ್ಯಂತ ಕೋಟ್ಯಂತರ ಭಕ್ತರು ನಡೆದುಕೊಳ್ಳುತ್ತಾರೆ. ಇದು ಹಿಂದೂಗಳ ಪ್ರಮುಖ ಧಾರ್ಮಿಕ ಶ್ರದ್ಧಾ ಕೇಂದ್ರ. ಈ ಕಾರಣಕ್ಕೆ ಹಿಂದೂಗಳ ಧಾರ್ಮಿಕ ಭಾವನೆಯನ್ನು ಅಪಮಾನಿಸುವ ದುರುದ್ದೇಶದಿಂದ ಕೆಲವು ಕಿಡಿಗೇಡಿಗಳು ಹಾಗೂ ಎಡಪಂಥೀಯರು ಅಪಪ್ರಚಾರ ಮಾಡುತ್ತಿದ್ದಾರೆ. ಧರ್ಮಸ್ಥಳವನ್ನು ಅತ್ಯಂತ ನಿಕೃಷ್ಟವಾಗಿ ಬಿಂಬಿಸುವ ಹುನ್ನಾರ ನಡೆಸಿದ್ದಾರೆ’ ಎಂದು ಕಿಡಿಕಾರಿದರು.
‘ಅನಾಮಿಕ ವ್ಯಕ್ತಿಯೊಬ್ಬ ಯಾವುದೇ ಆಧಾರಗಳಿಲ್ಲದೇ ಮಾಡಿದ ಆರೋಪಕ್ಕೆ ರಾಜ್ಯ ಸರ್ಕಾರ ಲಕ್ಷಾಂತರ ರೂಪಾಯಿಗಳನ್ನು ವ್ಯಯಿಸಿ, ಆತ ಹೇಳಿದ ಕಡೆಗಳೆಲ್ಲೆಲ್ಲ ಗುಂಡಿಗಳನ್ನು ತೋಡಿದೆ. ಆದರೂ ಏನೂ ಸಿಗಲಿಲ್ಲ. ಈ ಅನಾಮಿಕ ವ್ಯಕ್ತಿಯ ಹಿಂದಿರುವವರು ಯಾರು? ಅವರು ಮಾಡುತ್ತಿರುವ ಸಂಚುಗಳೇನು ಎಂಬುದನ್ನು ಸರ್ಕಾರ ಬಹಿರಂಗಪಡಿಸಬೇಕು’ ಎಂದು ಒತ್ತಾಯಿಸಿದರು.
ಗದಗ ನಗರ ಮಂಡಲ ಅಧ್ಯಕ್ಷ ಸುರೇಶ ಮರಳಪ್ಪನವರ, ಗ್ರಾಮೀಣ ಮಂಡಲ ಅಧ್ಯಕ್ಷ ಬೂದಪ್ಪ ಹಳ್ಳಿ, ಹಿರಿಯರಾದ ಜಗನ್ನಾಥಸಾ ಭಾಂಡಗೆ, ಜಿಲ್ಲಾ ವಕ್ತಾರ ಎಂ.ಎಂ. ಹಿರೇಮಠ, ಬಿ.ಎಸ್. ಚಿಂಚಲಿ, ಪ್ರಮುಖರಾದ ನಾಗರಾಜ ಕುಲಕರ್ಣಿ, ಭೀಮಸಿಂಗ್ ರಾಠೋಡ, ಬಸವರಾಜ ಕೊರ್ಲಹಳ್ಳಿ, ಅಶೋಕ ಸಂಕಣ್ಣವರ, ಸಿದ್ದು ಪಲ್ಲೇದ, ಶಿವು ಹಿರೇಮನಿಪಾಟೀಲ, ರಮೇಶ ಸಜ್ಜಗಾರ, ಸಂತೋಷ ಅಕ್ಕಿ, ನಿರ್ಮಲಾ ಕೊಳ್ಳಿ, ಉಷಾ ದಾಸರ, ವಿಜಯಲಕ್ಷ್ಮೀ ಮಾನ್ವಿ, ಪ್ರಕಾಶ ಅಂಗಡಿ, ಮುತ್ತಣ್ಣ ಮುಶಿಗೇರಿ, ಚನ್ನಮ್ಮ ಹುಳಕಣ್ಣವರ, ಲಕ್ಷ್ಮೀಕಾಕಿ, ವಿದ್ಯಾವತಿ ಗಡಗಿ ಭಾಗವಹಿಸಿದ್ದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂದೂಗಳ ಭಾವನೆಗೆ ಧಕ್ಕೆ ತರುವ ಹುನ್ನಾರವನ್ನು ನಿರಂತರವಾಗಿ ಮಾಡುತ್ತ ಬಂದಿದೆ. ಇದು ಖಂಡನೀಯಲಿಂಗರಾಜ ಪಾಟೀಲ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ
ಧರ್ಮಸ್ಥಳದ ವಿರುದ್ಧದ ಷಡ್ಯಂತ್ರ ತಡೆಯುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹಸಚಿವರು ರಾಜ್ಯದ ಜನತೆಯ ಕ್ಷಮೆ ಕೇಳಬೇಕುರಾಘವೇಂದ್ರ ಯಳವತ್ತಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.