ಗದಗ: ನಗರದ ಮಾರುಕಟ್ಟೆ ಪ್ರದೇಶದ ಬಳಿ ನಿರ್ಮಾಣಗೊಳ್ಳುತ್ತಿರುವ ಬಸ್ ನಿಲ್ದಾಣಕ್ಕೆ ಪಂಡಿತ ಪುಟ್ಟರಾಜ ಗವಾಯಿಗಳ ಹೆಸರು ಇಡಲು ಅಗತ್ಯದ ಕ್ರಮ ವಹಿಸುವಂತೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ವಾಯವ್ಯ ಸಾರಿಗೆ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.
‘ಬಸ್ ನಿಲ್ದಾಣಕ್ಕೆ ಪುಟ್ಟರಾಜ ಗವಾಯಿಗಳ ಹೆಸರು ಇಡಬೇಕು ಎಂಬ ಸಾರ್ವಜನಿಕರ, ಸಂಘ ಸಂಸ್ಥೆಗಳ ಬೇಡಿಕೆ ನ್ಯಾಯೋಚಿತವಾಗಿದ್ದು, ನಿಯಮಾನುಸಾರ ಅಗತ್ಯದ ಕ್ರಮ ಕೈಗೊಳ್ಳಿ’ ಎಂದು ಅವರು ತಿಳಿಸಿದ್ದಾರೆ.
ಗದಗ ನಗರದ ಹೃದಯ ಭಾಗದಲ್ಲಿದ್ದ, ಶಿಥಿಲಗೊಂಡಿದ್ದ ಹಳೆ ಬಸ್ ನಿಲ್ದಾಣ ಕಟ್ಟಡವನ್ನು ಮೂರು ವರ್ಷದ ಹಿಂದೆ ನೆಲಸಮಗೊಳಿಸಿ, ಅದೇ ಸ್ಥಳದಲ್ಲಿ ಹೊಸ ಕಟ್ಟಡ ನಿರ್ಮಿಸಲಾಗುತ್ತಿದೆ. ಒಟ್ಟು ₹5 ಕೋಟಿ ವೆಚ್ಛದಲ್ಲಿ ಮೊಟ್ಟೆಯಾಕಾರದಲ್ಲಿ (ಓವಲ್ ಮಾದರಿ) ಈ ಕಟ್ಟಡ ತಲೆ ಎತ್ತುತ್ತಿದೆ.
ಬಸ್ ನಿಲ್ದಾಣದ ಕಟ್ಟಡ ಕಾಮಗಾರಿ ವಿಳಂಬವಾಗಿರುವುದರಿಂದ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಿದೆ. ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಿ, ಬಸ್ ನಿಲ್ದಾಣ ಉದ್ಘಾಟನೆ ಮಾಡಬೇಕು ಮತ್ತು ಈ ನಿಲ್ದಾಣಕ್ಕೆ ಪಂಡಿತ ಪುಟ್ಟರಾಜ ಗವಾಯಿಗಳ ಹೆಸರು ಇಡಬೇಕು ಎಂದು ಆಗ್ರಹಿಸಿ, ನಗರದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದರು.
‘ಕಾಮಗಾರಿ ಅಂತಿಮ ಹಂತದಲ್ಲಿದ್ದು, ಇದೇ ತಿಂಗಳಲ್ಲಿ ಉದ್ಘಾಟನೆ ನಡೆಯಲಿದೆ’ ಎಂದು ಗದಗ ವಿಭಾಗೀಯ ನಿಯಂತ್ರಣಾಧಿಕಾರಿ ಎಫ್.ಸಿ. ಹಿರೇಮಠ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.