ಗಜೇಂದ್ರಗಡ: ತಾಲ್ಲೂಕು ಪಂಚಾಯಿತಿಗೆ ನೂತನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕಗೊಂಡಿರುವ ಚಂದ್ರಶೇಖರ್ ಬಿ. ಕಂದಕೂರ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು. ಸ್ಥಳೀಯ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿರ್ಗಮಿತ ಇಒ ಮಂಜುಳಾ ಹಕಾರಿ ಅವರು ಅಧಿಕಾರ ಹಸ್ತಾಂತರಿಸಿದರು.
ಬಳಿಕ ಗೋಗೇರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದ ಚಂದ್ರಶೇಖರ್ ಅವರು, ಶಾಲೆಯ ಕೊಠಡಿಗಳ ಸ್ಥಿತಿಗತಿ ಪರಿಶೀಲನೆ ನಡೆಸಿ, ಶಿಕ್ಷಕರೊಂದಿಗೆ ಚರ್ಚಿಸಿದರು. ದುರಸ್ತಿ ಅಗತ್ಯವಿರುವ ಕೊಠಡಿಗಳ ಕುರಿತು, ಮುಂದಿನ ಆರ್ಥಿಕ ವರ್ಷದಲ್ಲಿ ಆದ್ಯತೆಯ ಮೇರೆಗೆ ಅನುದಾನ ಮಂಜೂರಾತಿ ಮಾಡುವ ಭರವಸೆ ನೀಡಿದರು.
ಈ ಹಿಂದೆ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ ಚಂದ್ರಶೇಖರ್ ಕಂದಕೂರ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಬಳಿಕ ವಿದ್ಯಾರ್ಥಿಗಳೊಂದಿಗೆ ಬಿಸಿಯೂಟ ಸೇವಿಸಿ, ಆಹಾರದ ಗುಣಮಟ್ಟ ಮತ್ತು ಅಡುಗೆಯ ರುಚಿಯ ಪರಿಶೀಲನೆ ನಡೆಸಿದರು.
ತಾಲ್ಲೂಕು ಪಂಚಾಯಿತಿ ಉದ್ಯೋಗ ಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕ ಬಸವರಾಜ ಬಡಿಗೇರ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕರು, ಮುಖ್ಯ ಶಿಕ್ಷಕರು, ಶಿಕ್ಷಕರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ನರೇಗಾ ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.