ಗದಗ: ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಗ್ರಾಮ ಲೆಕ್ಕಾಧಿಕಾರಿ ಸಾಹೇಬ್ ಪಟೇಲ್ ಅವರ ಕೊಲೆ ಪ್ರಕರಣ ಖಂಡಿಸಿ ಹಾಗೂ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಸದಸ್ಯರು ಜಿಲ್ಲಾಡಳಿತ ಭವನದ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
‘ಗ್ರಾಮ ಲೆಕ್ಕಾಧಿಕಾರಿ ಸಾಹೇಬ್ ಪಟೇಲ್ ಅವರ ಮೇಲೆ ಟಿಪ್ಪರ್ ಹರಿಸಿ ಕೊಲೆ ಮಾಡಿರುವುದು ಅಮಾನವೀಯವಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಿ, ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು’ ಎಂದು ಆಗ್ರಹಿಸಿದರು.
‘ಹಿಂದೆ ಈ ರೀತಿಯ ಹಲವು ಪ್ರಕರಣಗಳು ನಡೆದಿವೆ. ಜತೆಗೆ ನೌಕರರ ಮೇಲೆ ನಡೆದ ಹಲ್ಲೆ ಪ್ರಕರಣಗಳ ಬಗ್ಗೆ ದೂರು ನೀಡಲಾಗಿದೆ. ಆದರೆ, ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ನೌಕರರಿಗೆ ಸೂಕ್ತ ಭದ್ರತೆ ಒದಗಿಸಬೇಕು’ ಎಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು.
ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರವಿ ಗುಂಜೀಕರ, ಕಾರ್ಯದರ್ಶಿ ಕೆ.ಎಫ್. ಹಳ್ಳಾಳ, ಎಸ್.ಎನ್. ಬಳ್ಳಾರಿ, ಎನ್.ಬಿ. ದೊಡ್ಡಮನಿ, ರುದ್ರೇಶ ಕೆ.ಎಸ್, ಮಂಜುನಾಥ, ಕುಮಾರ ಅಣ್ಣಗೇರಿ, ಎಸ್.ಎಲ್. ಪಾಟೀಲ, ಎಂ.ಎಚ್. ಪಾಟೀಲ, ಶ್ಯಾನಬೋಗರ, ಪಿ. ಕಲಾಲ, ಹಿರೇಮಠ, ಎಸ್.ಎಸ್. ಶ್ಯಾನಭೋಗರ, ಎಂ.ಎ. ನದಾಫ, ಡಿ.ಯು. ಇಟಗಿ, ಬಿ.ಎಸ್. ಅಣ್ಣಿಗೇರಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.