ADVERTISEMENT

ಬಸ್‌ ನಿಲ್ದಾಣಕ್ಕೆ ಹೊಸ ರೂಪ ನೀಡುವಂತೆ ಸೂಚನೆ

ಬಸ್ ನಿಲ್ದಾಣಕ್ಕೆ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ, ಸದಸ್ಯರ ದಿಢೀರ್ ಭೇಟಿ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2025, 16:13 IST
Last Updated 15 ಫೆಬ್ರುವರಿ 2025, 16:13 IST
ಗದಗ ಹೊಸ ಬಸ್ ನಿಲ್ದಾಣಕ್ಕೆ ಗದಗ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯರು ಭೇಟಿ ನೀಡಿ ವ್ಯವಸ್ಥೆಗಳ ಕುರಿತು ಪರಿಶೀಲನೆ ಮಾಡಿದರು
ಗದಗ ಹೊಸ ಬಸ್ ನಿಲ್ದಾಣಕ್ಕೆ ಗದಗ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯರು ಭೇಟಿ ನೀಡಿ ವ್ಯವಸ್ಥೆಗಳ ಕುರಿತು ಪರಿಶೀಲನೆ ಮಾಡಿದರು   

ಪ್ರಜಾವಾಣಿ ವಾರ್ತೆ

ಗದಗ: ಇಲ್ಲಿನ ಹೊಸ ಬಸ್ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿದ ಗದಗ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಹಾಗೂ ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ ಮಂದಾಲಿ ಮತ್ತು ಸದಸ್ಯರು, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳ ಕುರಿತಾಗಿ ಮಾಹಿತಿ ಪಡೆದರು. ಅವ್ಯವಸ್ಥೆಯಿಂದ ಕೂಡಿರುವ ಬಸ್‌ ನಿಲ್ದಾಣದಲ್ಲಿ ಸ್ವಚ್ಛತೆಗೆ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಬಸ್ ನಿಲ್ದಾಣದ ಚಾವಣಿ ತುಂಬೆಲ್ಲ ಜೇಡ ಕಟ್ಟಿರುವುದು, ಎಲ್ಲೆಂದರಲ್ಲಿ ಕಸ ಬಿಸಾಡಿರುವುದು, ಶುದ್ಧ ಕುಡಿಯುವ ನೀರು ವ್ಯವಸ್ಥೆ ಇಲ್ಲದಿರುವುದು, ಪ್ರಯಾಣಿಕರಿಗೆ ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ ಇಲ್ಲದಿರುವುದು ಹಾಗೂ ಶೌಚಾಲಯಗಳಲ್ಲಿ ಶುಚಿತ್ವ ಕಾಪಾಡಿಕೊಳ್ಳದಿರುವ ಕುರಿತು ಪರಿಶೀಲನೆ ನಡೆಸಿದ ಅವರು, 15 ದಿನದೊಳಗಾಗಿ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ADVERTISEMENT

ಗದಗ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಮಾತನಾಡಿ, ‘ಗದಗ ಹೊಸ ಬಸ್ ನಿಲ್ದಾಣದಲ್ಲಿ ಸ್ಚಚ್ಛತೆ ಮಾಯವಾಗಿದೆ. ಮೊದಲು ಸ್ವಚ್ಛತೆಗೆ ಗಮನ ಹರಿಸಬೇಕು. ಕಸ ತೆಗೆಸಬೇಕು. ಮಳಿಗೆಯ ಬಾಡಿಗೆದಾರರು ಕಸವನ್ನು ನಗರಸಭೆಯ ಕಸ ತುಂಬುವ ವಾಹನದಲ್ಲೇ ಹಾಕಲು ಕ್ರಮ ಕೈಗೊಳ್ಳಬೇಕು. ಬಸ್‌ಗಳಲ್ಲಿ ಹಾಗೂ ಬಸ್ ನಿಲ್ದಾಣದಲ್ಲಿ ಅಂಟಿಸಿರುವ ಅನಧಿಕೃತ ಪೋಸ್ಟರ್‌ಗಳನ್ನು ತೆರವುಗೊಳಿಸಬೇಕು. ಮುಂದಿನ 15 ದಿನದೊಳಗಾಗಿ ಗದಗ ಬಸ್ ನಿಲ್ದಾಣವನ್ನು ಹೊಸ ರೂಪಕ್ಕೆ ತರಬೇಕು’ ಎಂದು ಸೂಚನೆ ನೀಡಿದರು.

ಗದಗ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಮಾತನಾಡಿ, ‘ಗದಗ ಹೊಸ ಬಸ್ ನಿಲ್ದಾಣವು ಅವ್ಯವಸ್ಥೆಯ ಆಗರವಾಗಿದೆ. ಚಾಲಕ, ನಿರ್ವಾಹಕರ ವಿಶ್ರಾಂತಿ ಗೃಹಗಳು ಕಸದಿಂದ ತುಂಬಿಕೊಂಡಿವೆ. ಶೌಚಾಲಯಗಳು ಸ್ವಚ್ಛತೆ ಇಲ್ಲದ ಕಾರಣ ಪ್ರಯಾಣಿಕರು ಬಳಸದಂತಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

‘ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ ಗದಗ ವಿಭಾಗೀಯ ನಿಯಂತ್ರಣಾಧಿಕಾರಿಗಳು ಬಸ್ ನಿಲ್ದಾಣಕ್ಕೆ ಅಗತ್ಯವಾಗಿ ಬೇಕಿರುವ ಪರಿಕರಗಳನ್ನು ಪಟ್ಟಿ ಮಾಡಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಬೇಡಿಕೆ ಸಲ್ಲಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಅವರೊಂದಿಗೆ ಮಾತನಾಡಿ ಗದಗ ಬಸ್ ನಿಲ್ದಾಣಕ್ಕೆ ವಿಶೇಷ ಸೌಲಭ್ಯ ಕಲ್ಪಿಸಲಾಗುವುದು’ ಎಂದು ಹೇಳಿದರು.

‘ಗದಗ ಹೊಸ ಬಸ್ ನಿಲ್ದಾಣದ ಆವರಣದಲ್ಲಿನ ಶುದ್ಧ ಕುಡಿಯುವ ನೀರಿನ ಘಟಕ ಬಂದ್ ಇಟ್ಟಿರುವುದನ್ನು ಗಮನಿಸಿ, ಬೇಸಿಗೆ ಕಾಲ ಆರಂಭವಾಗುತ್ತಿರುವುದರಿಂದ 24 ಗಂಟೆಯೂ ಪ್ರಯಾಣಿಕರಿಗೆ ಶುದ್ಧ ಕುಡಿಯುವ ನೀರು ಪೂರೈಕೆಯಾಗುವಂತೆ ಕ್ರಮ ವಹಿಸಬೇಕು’ ಎಂದು ಸೂಚನೆ ನೀಡಿದರು.

ಗದಗ ವಿಭಾಗೀಯ ನಿಯಂತ್ರಣಾಧಿಕಾರಿ ಡಿ. ದೇವರಾಜ್, ಗದಗ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ನೀಲಮ್ಮ ಬೋಳನವರ, ಈಶ್ವರ ಹುಣಶೀಕಟ್ಟಿ, ಸದಸ್ಯರಾದ ಶರೀಫ್ ಬಿಳೆಯಲಿ, ಮುಖಂಡರಾದ ಶಾಂತಣ್ಣ ಮುಳವಾಡ, ಚಾಂದಸಾಬ್ ಕೊಟ್ಟೂರ, ಅನಿಲ ಗರಗ, ಮೋಹನ ದೊಡ್ಡಕುಂಡಿ ಇದ್ದರು.

Cut-off box - ಕುಂದುಕೊರತೆ ಆಲಿಕೆ ಗದಗ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ತಾಲ್ಲೂಕು ಅಧ್ಯಕ್ಷ ಅಶೋಕ ಮಂದಾಲಿ ಸೇರಿದಂತೆ ಪ್ರಾಧಿಕಾರದ ಸದಸ್ಯರು ಗದಗ ಹೊಸ ಬಸ್ ನಿಲ್ದಾಣದಲ್ಲಿ ಸಂಚರಿಸಿ ಪ್ರಯಾಣಿಕರ ಕುಂದುಕೊರತೆಗಳನ್ನು ಆಲಿಸಿದರು. ಜತೆಗೆ ಪಂಚ ಗ್ಯಾರಂಟಿಗಳು ಪ್ರತಿಯೊಬ್ಬರಿಗೂ ತುಲುಪುತ್ತಿರುವ ಬಗ್ಗೆ ಮಾಹಿತಿ ಪಡೆದರು. ಈ ವೇಳೆ ಮಹಿಳೆಯರು ಎರಡು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲ ಎಂದರು. ಮುಂದಿನ ತಿಂಗಳೊಳಗಾಗಿ ಬಾಕಿ ಕಂತಿನ ಹಣವನ್ನು ಪಾವತಿಸಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು. ಇದೇ ವೇಳೆ ನರಗುಂದ ಭಾಗದ ಮಹಿಳೆಯೊಬ್ಬರು ‘ಗೃಹ ಜ್ಯೋತಿ’ ಯೋಜನೆಯಡಿ ಉಚಿತ ವಿದ್ಯುತ್‌ ಸಿಗುತ್ತಿಲ್ಲ ಎಂದು ಅಲವತ್ತುಕೊಂಡರು. ಆಗ ಬಿ.ಬಿ.ಅಸೂಟಿ ಅವರು ಅವರ ಸಂಪೂರ್ಣ ಮಾಹಿತಿ ಪಡೆದುಕೊಂಡು ಒಂದು ವಾರದೊಳಗೆ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.