
ಗದಗ: ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಮೊದಲ ದಿನದ ಪರೀಕ್ಷೆ ಸುಗಮವಾಗಿ ನಡೆಯಿತು.
ಜಿಲ್ಲೆಯ 24 ಪರೀಕ್ಷಾ ಕೇಂದ್ರಗಳಲ್ಲಿ ಶನಿವಾರ ನಡೆದ ಕನ್ನಡ ವಿಷಯ ಪರೀಕ್ಷೆಗೆ 9,361 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಪೈಕಿ 9,288 ವಿದ್ಯಾರ್ಥಿಗಳು ಹಾಜರಾಗಿದ್ದು, 343 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಕನ್ನಡ ಪರೀಕ್ಷೆಯಲ್ಲಿ ಯಾವುದೇ ವಿದ್ಯಾರ್ಥಿ ಡಿಬಾರ್ ಆಗಿಲ್ಲ ಎಂದು ಡಿಡಿಪಿಯು ಎಸ್.ಬಿ. ಮಸನಾಯಕ ತಿಳಿಸಿದ್ದಾರೆ.
ಶನಿವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಕನ್ನಡ ವಿಷಯ ಪರೀಕ್ಷೆ ನಡೆಯಿತು. ದ್ವಿತೀಯ ಪಿಯುಸಿ ಪರೀಕ್ಷೆ ಸುಗಮವಾಗಿ ನಡೆಸಲು ಮತ್ತು ಶಿಸ್ತು, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಜಿಲ್ಲೆಯ 24 ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪರಿಮಿತಿಯೊಳಗೆ ಪರೀಕ್ಷಾ ಸಮಯದಲ್ಲಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿತ್ತು.
ಸಚಿವ ಎಚ್.ಕೆ. ಪಾಟೀಲ ವಿದ್ಯಾಥಿಗಳಿಗೆ ಶುಭ ಹಾರೈಕೆ: ರಾಜ್ಯದಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿರುವ ಹಿನ್ನೆಲೆಯಲ್ಲಿ ವಿದ್ಯಾಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆಯುವ ಮೂಲಕ ರಾಜ್ಯ ಮಟ್ಟದಲ್ಲಿ ಜಿಲ್ಲೆಯು ಒಂದಂಕಿ ರ್ಯಾಂಕ್ ಪಡೆಯುವಂತೆ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಪರೀಕ್ಷೆಗೂ ಮುನ್ನ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದ ಅಧಿಕಾರಿಗಳು ಪರೀಕ್ಷಾ ನಿಯಮಗಳನ್ನು ಹಾಗೂ ಮಾಹಿತಿಯನ್ನು ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.