
ಗದಗ: ರಸ್ತೆ ಅಪಘಾತ ಪ್ರಮಾಣವನ್ನು ಕಡಿಮೆ ಮಾಡುವುದು ಅಥವಾ ಅಪಘಾತವಾಗದಂತೆ ಎಚ್ಚರ ವಹಿಸುವ ನಿಟ್ಟಿನಲ್ಲಿ ರಸ್ತೆ ಸುರಕ್ಷತೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅತ್ಯಗತ್ಯ ಎಂದು ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶಶಿಧರ ಶೆಟ್ಟಿ ಹೇಳಿದರು.
ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸಭಾಂಗಣದಿಂದ ವಿಡಿಯೊ ಕಾನ್ಫರೆನ್ಸ್ ಮೂಲಕ ನಡೆಸಿದ ಕಾರ್ಯಕ್ರಮದಲ್ಲಿ ಮಾತನಾಡಿದರು.
‘2026ರ ಜನವರಿ 1ರಿಂದ 31ರವರೆಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಹಮ್ಮಿಕೊಳ್ಳಲಾಗಿದೆ. ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಲೋಕೋಪಯೋಗಿ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಸ್ಥಳೀಯ ವಕೀಲರ ಸಂಘ, ವಿಮಾ ಕಂಪನಿಗಳ ಪ್ರತಿನಿಧಿಗಳ ಸಹಯೋಗದೊಂದಿಗೆ ರಸ್ತೆ ಸುರಕ್ಷತೆ ಕುರಿತು ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು’ ಎಂದು ಸೂಚಿಸಿದರು.
‘ರಸ್ತೆ ಸುರಕ್ಷತಾ ಕಾರ್ಯಕ್ರಮದ ಅಂಗವಾಗಿ, ಸುಪ್ರೀಂ ಕೋರ್ಟ್ನ ರಸ್ತೆ ಸುರಕ್ಷತಾ ಸಮಿತಿ ನಿರ್ದೇಶನದಂತೆ ಯೋಜನೆ ಜಾರಿ ಹಾಗೂ ಅನುಷ್ಟಾನದ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು. ವಾಹನ ಅಪಘಾತವಾದ ಸಂದರ್ಭಗಳಲ್ಲಿ ನಗದು ರಹಿತ ಚಿಕಿತ್ಸೆ, ವಿಮಾ ಮೊತ್ತ ಪಾವತಿಗೆ ಸಂಬಂಧಿಸಿದಂತೆ ನಮೂನೆಗಳ ಭರ್ತಿ ಇನ್ನಿತರೆ ಅಂಶಗಳ ಕುರಿತು ತರಬೇತಿ, ಕಾರ್ಯಾಗಾರ, ಸೆಮಿನಾರ್, ಪ್ಯಾನಲ್ ಚರ್ಚೆ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಮೂಲಕ ಅರಿವು ಮತ್ತು ಮಾಸ್ಟರ್ ಟ್ರೈನರ್ಗಳಿಗೆ ಉನ್ನತ ಮಟ್ಟದ ತರಬೇತಿ ಕಾರ್ಯಕ್ರಮಗಳನ್ನು ಪಾಲುದಾರ ಇಲಾಖೆಗಳಾದ ಸಾರಿಗೆ, ಪೊಲೀಸ್ ಸಿಬ್ಬಂದಿಯವರಿಗೆ ನೀಡಲಾಗುವುದು’ ಎಂದರು.
ಸಾರಿಗೆ ಇಲಾಖೆ ಆಯುಕ್ತ ಯೋಗೇಶ್ ಗೌಡ, ಹೆಚ್ಚುವರಿ ಆಯುಕ್ತ ಮಲ್ಲಿಕಾರ್ಜುನ, ಬೆಂಗಳೂರಿನ ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾ ರೆಡ್ಡಿ ಇದ್ದರು.
ಗದಗ ಜಿಲ್ಲೆಯಿಂದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್.ಶಿವನಗೌಡರ ಹಾಜರಿದ್ದರು.
ಸರ್ಕಾರಿ ಹಾಗೂ ಖಾಸಗಿ ಬಸ್ಗಳ ಚಾಲಕರು ಹಾಗೂ ನಿರ್ವಾಹಕರಿಗೆ ಬಸ್ ಚಾಲನೆ ಹಾಗೂ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸಲು ಪರಿಣಾಮಕಾರಿ ಚಟುವಟಿಕೆಗಳನ್ನು ಕೈಗೊಳ್ಳಬೇಕು.–ಶಶಿಧರ ಶೆಟ್ಟಿ, ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.