ಗಜೇಂದ್ರಗಡ: ಸಮೀಪದ ಗೋಗೇರಿ ಗ್ರಾಮದ ಹಲವು ಕಾಲೊನಿಗಳಲ್ಲಿ ಸಿ.ಸಿ ರಸ್ತೆ, ಚರಂಡಿ ವ್ಯವಸ್ಥೆ, ಸ್ವಚ್ಛತೆ ಇಲ್ಲದ ಪರಿಣಾಮ ಅಲ್ಲಿನ ನಿವಾಸಿಗಳು ಪರದಾಡುತ್ತಿದ್ದಾರೆ.
ಗಜೇಂದ್ರಗಡ– ಕುಷ್ಟಗಿ ಮುಖ್ಯ ರಸ್ತೆಯಿಂದ ಗ್ರಾಮಕ್ಕೆ ಸಂಪರ್ಕಿಸುವ ಡಾಂಬರ್ ರಸ್ತೆ ಹಾಳಾಗಿದ್ದು, ರಸ್ತೆ ತುಂಬ ಗುಂಡಿಗಳು ಬಿದ್ದಿವೆ. ಈ ರಸ್ತೆಯ ಶರಣ ಬಸವೇಶ್ವರ ದೇವಸ್ಥಾನದ ಹತ್ತಿರ ಜನರು ತ್ಯಾಜ್ಯ ಎಸೆಯುತ್ತಿರುವುದರಿಂದ ಆ ಪ್ರದೇಶದಲ್ಲಿ ದುರ್ವಾಸನೆ ಬರುತ್ತಿದೆ.
ಗ್ರಾಮದಲ್ಲಿ ಹೊರಪೇಟೆ, ಅಂಬಾಭವಾನಿ ಬಡಾವಣೆಗಳಲ್ಲಿ ಸಿ.ಸಿ ರಸ್ತೆ, ಚರಂಡಿ ವ್ಯವಸ್ಥೆ ಇಲ್ಲದ ಪರಿಣಾಮ ಕೊಳಚೆ ನೀರು ಎಲ್ಲೆಂದರಲ್ಲಿ ಹರಿಯುತ್ತಿದೆ. ಗ್ರಾಮದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತಗೊಂಡಿದ್ದು, ಜನರು ಗಜೇಂದ್ರಗಡದಿಂದ ನೀರು ತರಬೇಕಾದ ಅನಿವಾರ್ಯ ಎದುರಾಗಿದೆ.
ಪಾಟೀಲ ಅವರ ಪ್ಲಾಟ್ನಲ್ಲಿ ಕುಡಿಯುವ ನೀರು, ಬೀದಿ ದೀಪದ ವ್ಯವಸ್ಥೆಯಿಲ್ಲ. ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತ ಸ್ವಚ್ಛತೆ ಇಲ್ಲದಂತಾಗಿದೆ. ಜನತಾ ಪ್ಲಾಟ್, ನಿಡಗುಂದಿಯವರ ಪ್ಲಾಟ್, ಪಾಟೀಲ ಪ್ಲಾಟ್ನಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ.
‘ಹೊರಪೇಟೆಯವರ ಓಣಿ, ಸಿ.ಸಿ ರಸ್ತೆ ನಿರ್ಮಾಣಕ್ಕೆ ಸುಮಾರು ಶಾಸಕರ ವಿಶೇಷ ಅನುದಾನದಲ್ಲಿ ₹70 ಲಕ್ಷಕ್ಕೆ ಟೆಂಡರ್ ಆಗಿದ್ದು, ತಾಂತ್ರಿಕ ತೊಂದರೆಯಿಂದ ವಿಳಂಬವಾಗಿದೆ. ಶೀಘ್ರದಲ್ಲಿಯೇ ಸಿ.ಸಿ ರಸ್ತೆ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ. ಅಲ್ಲದೆ 15-20 ದಿನಗಳಲ್ಲಿ ಗ್ರಾಮದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕದಿಂದ ಜನರಿಗೆ ನೀರು ಪೂರೈಸಲಾಗುವುದು’ ಎಂದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಅನಿತಾ ಕೊಡತಗೇರಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.