ADVERTISEMENT

ಗದಗ | ಗ್ಯಾರಂಟಿ: ಸೌಲಭ್ಯ ವಿತರಣೆಯ ವಿಳಂಬ ಸಲ್ಲ- ಸಚಿವ ಎಚ್‌.ಕೆ,ಪಾಟೀಲ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2025, 4:49 IST
Last Updated 29 ಅಕ್ಟೋಬರ್ 2025, 4:49 IST
<div class="paragraphs"><p>ಗದಗ ನಗರದ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಮಂಗಳವಾರ ನಡೆದ ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಎಚ್‌.ಕೆ.ಪಾಟೀಲ ಮಾತನಾಡಿದರು</p></div>

ಗದಗ ನಗರದ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಮಂಗಳವಾರ ನಡೆದ ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಎಚ್‌.ಕೆ.ಪಾಟೀಲ ಮಾತನಾಡಿದರು

   

ಗದಗ: ‘ಸರ್ಕಾರದಿಂದ ಜಾರಿಯಾಗಿರುವ ಪಂಚಗ್ಯಾರಂಟಿ ಯೋಜನೆಗಳು ಬಡಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಸದುದ್ದೇಶ ಹೊಂದಿದ್ದು, ಈ ಯೋಜನೆಗಳ ಸೌಲಭ್ಯ ವಿತರಣೆಯಲ್ಲಿ ವಿನಾಕಾರಣ ವಿಳಂಬವಾಗಬಾರದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಮಂಗಳವಾರ ನಡೆದ ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ADVERTISEMENT

‘ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನವು ಆಡಳಿತ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆಯಾಗಿದೆ. ಬಡಜನರ ಸೇವೆ ಮಾಡಲು ಒದಗಿಸಿದ ಬಹುದೊಡ್ಡ ಅವಕಾಶವಾಗಿದೆ. ಪಂಚಗ್ಯಾರಂಟಿ ಯೋಜನೆಯ ಮಹತ್ವವನ್ನು ಅರ್ಥೈಸಿಕೊಳ್ಳುವುದು ಹಾಗೂ ಅವುಗಳ ಪೂರ್ಣ ಪ್ರಮಾಣದ ಅನುಷ್ಟಾನಕ್ಕಾಗಿ ಇಲಾಖಾಧಿಕಾರಿಗಳು ಜವಾಬ್ದಾರಿಯಿಂದ ಹಾಗೂ ಆಸಕ್ತಿಯಿಂದ ಕಾರ್ಯನಿರ್ವಹಿಸುವುದು ಮುಖ್ಯವಾಗಿದೆ’ ಎಂದರು.

‘ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಪ್ರಾಮಾಣಿಕತೆ ಇರಬೇಕು. ಆಡಳಿತದಲ್ಲಿ ಪಾರದರ್ಶಕತೆ ಅವಶ್ಯವಾಗಿದ್ದು, ಈ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಯೋಜನೆಗಳ ಸೌಲಭ್ಯ ಅರ್ಹರಿಗೆ ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸಿ ಶ್ರದ್ಧೆಯಿಂದ ಕೆಲಸ ಮಾಡುವುದರ ಮೂಲಕ ಯೋಜನೆಗಳ ಸೌಲಭ್ಯಗಳು ನಿಗದಿತ ಅವಧಿಯಲ್ಲಿಯೇ ತಲುಪಿಸಿದಾಗ ಕೆಲಸದಲ್ಲಿ ಸಾರ್ಥಕತೆ ಕಾಣಬಹುದಾಗಿದೆ’ ಎಂದರು.

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನಾ ಸಮಿತಿ ಉಪಾಧ್ಕ್ಷೆ ನೀಲಮ್ಮ ಬೋಳನವರ, ಸದಸ್ಯರಾದ ಈರಣ್ಣ ಹುಣಸಿಕಟ್ಟಿ, ಷರೀಫ್ ಬಿಳೆಯಲಿ, ತಾಲ್ಲೂಕು ಗ್ಯಾರಂಟಿ ಸದಸ್ಯರಾದ ದಯಾನಂದ ಪವಾರ, ಶಂಭು ಕಾಳೆ, ಸಾವಿತ್ರಿ ಹೂಗಾರ, ಸಂಗು ಕೆರಕಲಕಟ್ಟಿ, ಎನ್.ಬಿ.ದೇಸಾಯಿ, ಸಂಗಮೇಶ ಹಾದಿಮನಿ, ರಮೇಶ ಹೊನ್ನಿನಾಯ್ಕರ್, ದೇವರೆಡ್ಡಿ ತಿರ್ಲಾಪುರ, ಮಲ್ಲಪ್ಪ ದಂಡಿನ, ಚಿಂಚಲಿ, ಗಣೇಶ ಸಿಂಗ್ ಮಿಟಾಡೆ, ಮಲ್ಲಪ್ಪ ಎಚ್. ಬಾರಕೇರ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಎಸ್.ಎನ್.ಬಳ್ಳಾರಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಯ್ಯ ಕೆ. ಹಾಗೂ ಪಂಚ ಗ್ಯಾರಂಟಿ ಯೋಜನೆಗೆ ಸಂಬಂಧಪಟ್ಟ ಅಧಿಕಾರಿಗಳು ಇದ್ದರು.

ಪಂಚ ಗ್ಯಾರಂಟಿ ಸೌಲಭ್ಯ ವಿತರಣೆ; ಜಿಲ್ಲೆಯ ಸಾಧನೆ

ಗೃಹಲಕ್ಷ್ಮಿ ಯೋಜನೆಯಡಿ ಜೂನ್ 2025ರವರೆಗೆ ಗದಗ ತಾಲ್ಲೂಕಿನಲ್ಲಿ 80,911 ಅರ್ಜಿಗಳು ನೋಂದಣಿಯಾಗಿದ್ದು, ಅದರಲ್ಲಿ 80,447 ಅರ್ಜಿಗಳಿಗೆ ಮಂಜೂರಾತಿ ದೊರೆತಿದೆ. ಶೇ 99.42 ಸಾಧನೆಯಾಗಿದೆ.

ಅನ್ನಭಾಗ್ಯ ಯೋಜನೆಯಡಿ ಗದಗ ಶಹರ (ಐಆರ್‌ಎ) ಸೆಪ್ಟೆಂಬರ್ 2025ರಲ್ಲಿ ರಾಜ್ಯ ಸರ್ಕಾರ ಅನ್ನಭಾಗ್ಯ ಹಂಚಿಕೆ ಯೋಜನೆಯಡಿ ಒಟ್ಟು 33,529 ಪಡಿತರ ಕಾರ್ಡ್‌ಗಳಿದ್ದು 5544.40 ಕ್ವಿಂಟಲ್ ಅಕ್ಕಿ ಹಂಚಿಕೆ ಮಾಡಲಾಗಿದೆ. ಗದಗ ಗ್ರಾಮೀಣದಲ್ಲಿ ಒಟ್ಟು 48,402 ಪಡಿತರ ಕಾರ್ಡ್‌ಗಳಿದ್ದು 7498.05 ಕ್ವಿಂಟಲ್ ಅಕ್ಕಿ ಹಂಚಿಕೆಮಾಡಲಾಗಿದೆ.

ಗೃಹ ಜ್ಯೋತಿ ಯೋಜನೆಯಡಿ ಶೇ 99.55 ರಷ್ಟು ಪ್ರಗತಿಯಾಗಿದೆ. ಯುವನಿಧಿ ಯೋಜನೆಯಡಿ ಜುಲೈ 2025ರಲ್ಲಿ ಅರ್ಹ ಫಲಾನುಭವಿಗಳಿಗೆ ₹53.79 ಲಕ್ಷ ಹಣ ಡಿಬಿಟಿ ಮೂಲಕ ಜಮಾ ಮಾಡಲಾಗಿದೆ. ಗದಗ ತಾಲ್ಲೂಕಿನಲ್ಲಿ ಯುವನಿಧಿ ಯೋಜನೆ ಅಡಿಯಲ್ಲಿ ಜುಲೈ 2025ರವರೆಗೆ 2,159 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. 

ಗದಗ ತಾಲ್ಲೂಕಿನಲ್ಲಿ 3,54,00,000 ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯ ಲಾಭ ಪಡೆದಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. 

‘ಶೇ 100ರಷ್ಟು ಗುರಿ ಸಾಧನೆಗೆ ಶ್ರಮಿಸಿ’

ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯ ವಿತರಣೆಯಲ್ಲಿ ಯಾವುದೇ ಸಮಸ್ಯೆಗಳು ಉಂಟಾದರೆ, ಅದಕ್ಕೆ  ತಕ್ಷಣವೇ ಪರಿಹಾರ ಕಂಡುಕೊಳ್ಳಬೇಕು. ಈ ನಿಟ್ಟಿನಲ್ಲಿ ಪ್ರತಿನಿಧಿಗಳ ಸಹಕಾರ ಸದಾಕಾಲ ಇರುತ್ತದೆ ಎಂದು ಸಭೆಯ ಅಧ್ಯಕ್ಷತೆ ವಹಿಸಿದ್ದ ಗದಗ ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ಹೇಳಿದರು.

‘ಅರ್ಹ ಫಲಾನುಭವಿಗಳು ಯೋಜನೆಗಳ ಸೌಲಭ್ಯದಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಪಂಚ ಗ್ಯಾರಂಟಿ ಯೋಜನೆಗಳ ಗುರಿ ಶೇ 100ರಷ್ಟು ಸಾಧಿಸಲು ಅಧಿಕಾರಿಗಳು ವಿಶೇಷ ಕಾಳಜಿ ವಹಿಸಬೇಕು ಎಂದು ಹೇಳಿದರು.

ಪ್ರಸ್ತುತ ಪಂಚ ಗ್ಯಾರಂಟಿ ಯೋಜನೆಗಳ ಗುರಿ ಶೇ 99.5ರಷ್ಟು ಗುರಿ ತಲುಪಿದ್ದು, ಜಿಲ್ಲೆಯು ಶೇ 100ರಷ್ಟು ಗುರಿ ಸಾಧಿಸಿ ರಾಜ್ಯದಲ್ಲಿ ಅಗ್ರಸ್ಥಾನ ಪಡೆಯಬೇಕು. ಅಧಿಕಾರಿಗಳು ಈ ನಿಟ್ಟಿನಲ್ಲಿ ಕೆಲಸ ನಿರ್ವಹಿಸಬೇಕು
ಬಿ.ಬಿ.ಅಸೂಟಿ, ಗದಗ ಜಿಲ್ಲಾ ಮಟ್ಟದ ಪಂಚಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ
ಅರ್ಹ ಕುಟುಂಬಕ್ಕೆ ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಪ್ರತಿ ಮಾಸಿಕ ₹5 ಸಾವಿರ ದೊರೆಯುತ್ತಿದ್ದು, ವರ್ಷಕ್ಕೆ ₹60 ಸಾವಿರ ದೊರೆಯುತ್ತಿದೆ. ಬಡಜನರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಹಾಯವಾಗಿದೆ
ಎಚ್‌.ಕೆ.ಪಾಟೀಲ, ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.