ಗದಗ: 'ರಾಷ್ಟ್ರಧ್ವಜ ಮತ್ತು ರಾಷ್ಟ್ರ ಲಾಂಛನವನ್ನು ಪಕ್ಷದ ಚುನಾವಣಾ ಪ್ರಚಾರಕ್ಕೆ ಬಳಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಚುನಾವಣಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕ್ರಮ ಜರುಗಿಸಬೇಕು’ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ ಪಾಟೀಲ ಒತ್ತಾಯಿಸಿದರು.
ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ಮಾಧ್ಯಮಗಳಿಗೆ ನೀಡಿರುವ ಪಕ್ಷದ ಜಾಹೀರಾತುಗಳಲ್ಲಿ ರಾಷ್ಟ್ರಧ್ವಜವನ್ನು ಪ್ರಚಾರಕ್ಕೆ ಬಳಸಿಕೊಂಡಿದೆ. ಇದು ಸಂವಿಧಾನಕ್ಕೆ ಮಾಡಿರುವ ಅಪಚಾರ, ಕಾನೂನು ಬಾಹೀರ, ನೀತಿಸಂಹಿತೆ ಹಾಗೂ ರಾಷ್ಟ್ರೀಯ ಧ್ವಜನೀತಿ ಸಂಹಿತೆಯ ಉಲ್ಲಂಘನೆಯಾಗಿದೆ’ ಎಂದರು.
‘ರಾಷ್ಟ್ರಧ್ವಜ ಮತ್ತು ಲಾಂಛನವನ್ನು ಎಲ್ಲಿ ಮತ್ತು ಹೇಗೆ ಬಳಸಬೇಕು ಎಂದು ಸಂವಿಧಾನದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಆದರೆ, ಇದೆಲ್ಲವೂ ತಿಳಿದಿದ್ದರೂ ಬಿಜೆಪಿ ಧ್ವಜವನ್ನು ಪಕ್ಷದ ಪ್ರಚಾರ ಜಾಹೀರಾತಿನಲ್ಲಿ ಬಳಸಿಕೊಂಡು ಜನರನ್ನು ಭಾವನಾತ್ಮಕವಾಗಿ ಕೆರಳಿಸುತ್ತಿದೆ’ ಎಂದು ದೂರಿದರು.
‘ಈ ಕುರಿತು ಚುನಾವಣಾ ಆಯೋಗಕ್ಕೆ ಲಿಖಿತ ದೂರು ನೀಡಲಾಗುವುದು’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
‘ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ಗೆ ನಿರೀಕ್ಷೆಗೂ ಮೀರಿ ಸ್ಪಂದನೆ ಸಿಗುತ್ತಿದ್ದು, ಅಭ್ಯರ್ಥಿ ಡಿ.ಆರ್. ಪಾಟೀಲ ಅವರ ಗೆಲುವು ನಿಶ್ಚಿತ’ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಗುರಣ್ಣ ಬಳಗಾನೂರ,ಎಫ್.ಎಚ್. ಜಕ್ಕಪ್ಪನವರ, ಬಸವರಾಜ ಕಡೇಮನಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.