
ಗದಗ: ‘ಜಾತಿ ಮತ್ತು ಧರ್ಮದ ಹೆಸರಿನಲ್ಲಿ ನಡೆಯುವ ಮರ್ಯಾದೆಗೇಡು ಹತ್ಯೆ ಪ್ರಕರಣಗಳು ಸಮಾಜಕ್ಕೆ ಕಪ್ಪುಚುಕ್ಕೆ ಇದ್ದಂತೆ. ಮರ್ಯಾದೆ ಹೆಸರಿನಲ್ಲಿ ಮನುಷ್ಯತ್ವ ಕೊಲೆ ಮಾಡುವುದು ಅತ್ಯಂತ ಅಮಾನವೀಯ’ ಎಂದು ತೋಂಟದ ಸಿದ್ಧರಾಮ ಸ್ವಾಮೀಜಿ ಹೇಳಿದರು.
ಹುಬ್ಬಳ್ಳಿ ತಾಲ್ಲೂಕಿನ ಇನಾಂವೀರಾಪುರದಲ್ಲಿ ನಡೆದ ಮರ್ಯಾದೆಗೇಡು ಹತ್ಯೆ ಖಂಡಿಸಿ ವಿವಿಧ ಸಂಘಟನೆಗಳ ಆಶ್ರಯದಲ್ಲಿ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಶುಕ್ರವಾರ ನಡೆದ ಪ್ರಾಯಶ್ಚಿತ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳುವುದು ಸರ್ಕಾರದ ಹೊಣೆಯಾಗಿದೆ. ಈ ನಿಟ್ಟಿನಲ್ಲಿ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.
ಮರ್ಯಾದೆಗೇಡು ಹತ್ಯೆ ನಿರ್ಬಂಧಿಸಲು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕಠಿಣವಾದ ವಿಶೇಷ ಕಾನೂನು ಜಾರಿಗೆ ತರಬೇಕು. ಅಂತರ್ಜಾತೀಯ ಮತ್ತು ಅಂತರಧರ್ಮೀಯ ವಿವಾಹಿತರಿಗೆ ಸರ್ಕಾರವು ಪೊಲೀಸ್ ಇಲಾಖೆಯ ಮೂಲಕ ರಕ್ಷಣೆ ನೀಡಬೇಕು. ಅವರ ಸುರಕ್ಷತೆಯ ಬಗ್ಗೆ ಮಾಸಿಕ ಪ್ರಗತಿ ಪರಿಶೀಲನಾ ಸಭೆಗಳಲ್ಲಿ ಚರ್ಚಿಸಬೇಕು. ಶಾಲಾ ಪಠ್ಯಗಳಲ್ಲಿ ಜಾತಿ ವಿನಾಶಕಾರಿ ಮತ್ತು ಸಾಮರಸ್ಯದ ಚಿಂತನೆಗಳನ್ನು ಅಳವಡಿಸಬೇಕು. ವ್ಯಕ್ತಿ ಘನತೆ ಮತ್ತು ಬದುಕುವ ಹಕ್ಕಿನ ಕುರಿತು ಜಾಗೃತಿ ಮೂಡಿಸಬೇಕು, ಮಾನ್ಯಾ ಪಾಟೀಲ ಕೊಲೆ ಪ್ರಕರಣದ ಆರೋಪಿಗಳಿಗೆ ಮತ್ತು ಪ್ರಚೋದನೆ ನೀಡಿದವರಿಗೆ ವಿಳಂಬವಿಲ್ಲದೆ ಗರಿಷ್ಠ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿಪತ್ರ ಸಲ್ಲಿಸಲಾಯಿತು.
ಬುದ್ಧ, ಬಸವ, ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಪ್ರಗತಿಪರ ಸಂಘಟನೆಗಳ ಸದಸ್ಯರು ಕ್ರಾಂತಿ ಗೀತೆಗಳನ್ನು ಹಾಡುವ ಮೂಲಕ ಮರ್ಯಾದೆಗೇಡು ಹತ್ಯೆ ಖಂಡಿಸಿದರು.
ಪ್ರಾಯಶ್ಚಿತ ದಿನ ಆಚರಣೆಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ, ಬಸವ ದಳ, ಲಿಂಗಾಯತ ಪ್ರಗತಿಶೀಲ ಸಂಘ, ದಲಿತ ಸಂಘಟನೆಗಳು ಹಾಗೂ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು, ಬೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು ಭಾಗವಹಿಸಿದ್ದರು.
ಮಾಜಿ ಶಾಸಕ ಡಿ.ಆರ್. ಪಾಟೀಲ, ಸಾಹಿತಿ ಬಸವರಾಜ ಸೂಳಿಭಾವಿ, ಶರೀಫ ಬೆಳೆಯಲಿ, ಮುತ್ತು ಬಿಳೆಯಲಿ, ಕಾಂಗ್ರೆಸ್ ಮುಖಂಡ ಅಶೋಕ ಮಂದಾಲಿ, ಮುತ್ತಣ್ಣ ಭರಡಿ, ನಗರಸಭೆ ಸದಸ್ಯ ಚಂದ್ರು ತಡಸದ, ಶೇಖಣ್ಣ ಕವಳಿಕಾಯಿ, ಕೆ.ಎಸ್.ಚಿಟ್ಟಿ, ವಾಸಣ್ಣ ಕುರುಡಗಿ, ಮಂಜುನಾಥ ಮುಳಗುಂದ, ಎಸ್.ಎನ್.ಬಳ್ಳಾರಿ, ವಿದ್ಯಾಧರ ದೊಡ್ಡಮನಿ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಇದ್ದರು.
ಮಾನ್ಯಾ ಪಾಟೀಲ ಬರ್ಬರ ಹತ್ಯೆಯು ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ. ಮರ್ಯಾದೆ ಹೆಸರಿನಲ್ಲಿ ನಡೆಯುವ ಇಂತಹ ಸಂವಿಧಾನ ವಿರೋಧಿ ಕೃತ್ಯಗಳನ್ನು ತಡೆಯಲು ಸರ್ಕಾರ ಕೂಡಲೇ ಕಠಿಣ ಕಾನೂನು ರೂಪಿಸಬೇಕು-ಅಶೋಕ ಬರಗುಂಡಿ, ಜಾಗತಿಕ ಲಿಂಗಾಯತ ಮಹಾಸಭಾ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.