ADVERTISEMENT

ಮರ್ಯಾದೆಗೇಡು ಹತ್ಯೆ ಕೃತ್ಯಕ್ಕೆ ‘ಪ್ರಾಯಶ್ಚಿತ್ತ’

ಮಾನ್ಯಾ ಹತ್ಯೆ ಆರೋಪಿಗಳಿಗೆ ಗರಿಷ್ಠ ಶಿಕ್ಷೆಗೆ ವಿವಿಧ ಸಂಘಟನೆಗಳ ಸಭೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 2 ಜನವರಿ 2026, 19:54 IST
Last Updated 2 ಜನವರಿ 2026, 19:54 IST
ಗದಗ ನಗರದ ಗಾಂಧಿ ವೃತ್ತದಲ್ಲಿ ನಡೆದ ಪ್ರಾಯಶ್ಚಿತ ದಿನ ಆಚರಣೆಯಲ್ಲಿ ಮಾಜಿ ಶಾಸಕ ಡಿ.ಆರ್‌.ಪಾಟೀಲ ಮಾತನಾಡಿದರು
ಗದಗ ನಗರದ ಗಾಂಧಿ ವೃತ್ತದಲ್ಲಿ ನಡೆದ ಪ್ರಾಯಶ್ಚಿತ ದಿನ ಆಚರಣೆಯಲ್ಲಿ ಮಾಜಿ ಶಾಸಕ ಡಿ.ಆರ್‌.ಪಾಟೀಲ ಮಾತನಾಡಿದರು   

ಗದಗ: ಹುಬ್ಬಳ್ಳಿ ತಾಲ್ಲೂಕಿನ ಇನಾಂ ವೀರಾಪುರದಲ್ಲಿ ನಡೆದ ಮರ್ಯಾದೆಗೇಡು ಹತ್ಯೆ ಖಂಡಿಸಿ ಹಾಗೂ ಹತ್ಯೆಯ ಹೊಣೆಗಾರಿಕೆ ಹೊತ್ತು ನಗರದ ಗಾಂಧಿ ವೃತ್ತದಲ್ಲಿ ಶುಕ್ರವಾರ ಪ್ರಾಯಶ್ಚಿತ್ತ ದಿನ ಆಚರಿಸಲಾಯಿತು.

ಜಾಗತಿಕ ಲಿಂಗಾಯತ ಮಹಾಸಭಾ, ಬಸವ ದಳ, ಲಿಂಗಾಯತ ಪ್ರಗತಿಶೀಲ ಸಂಘ, ದಲಿತ ಸಂಘಟನೆ ಮತ್ತು ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.

‘ಮರ್ಯಾದೆ ಹೆಸರಿನಲ್ಲಿ ಮನುಷ್ಯರ ಕೊಲೆ ಮಾಡುವುದು ಅತ್ಯಂತ ಅಮಾನವೀಯ. ಇಂತಹ ಘಟನೆಗಳನ್ನು ತಡೆಯಲು ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು’ ಎಂಬ ಆಗ್ರಹ ಸಭೆಯಲ್ಲಿ ವ್ಯಕ್ತವಾಯಿತು.

ADVERTISEMENT

‘ಮಾನ್ಯಾ ಪಾಟೀಲ ಕೊಲೆ ಪ್ರಕರಣದ ಆರೋಪಿಗಳಿಗೆ ಮತ್ತು ಪ್ರಚೋದನೆ ನೀಡಿದವರಿಗೆ ಗರಿಷ್ಠ ಶಿಕ್ಷೆ ವಿಧಿಸಬೇಕು, ಮರ್ಯಾದೆಗೇಡು ಹತ್ಯೆಗಳ ಪ್ರಾಬಲ್ಯ ತೊಡೆದು ಹಾಕಲು ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಫಲಕಗಳ ಅಳವಡಿಸಬೇಕು. ಜಾತೀಯತೆ ಮೀರಿ ನಿಲ್ಲುವ, ಬದುಕಲು ಪ್ರೇರೇಪಿಸುವ ಸಾಮರಸ್ಯದ ಪಠ್ಯಗಳನ್ನು ಶಾಲಾ ಪಠ್ಯಕ್ರಮದಲ್ಲಿ ಸೇರಿಸಬೇಕು‘ ಎಂದು ಸಭೆಯು ಆಗ್ರಹಪಡಿಸಿತು.

‘ಅಂತರ್ಜಾತಿ–ಅಂತರಧರ್ಮೀಯ ವಿವಾಹಿತರಿಗೆ ಸಾಮಾಜಿಕ ಭದ್ರತೆ ನೀಡಬೇಕು. ಸಂಗಾತಿ ಆಯ್ಕೆಯ ಹಕ್ಕು ವೈಯಕ್ತಿಕವಾಗಿದ್ದು ಮೂರನೆಯವರು ಅವಕಾಶ ಇಲ್ಲ. ಹೀಗಾಗಿ ಈ ವಿಷಯದಲ್ಲಿ ಬೆದರಿಕೆ, ಬಹಿಷ್ಕಾರದಂತಹ ಕ್ರಿಯೆಗಳ ಮೂಲಕ ಪ್ರಚೋದಿಸುವವರ ಮೇಲೆ ಕಾನೂನು ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿ ವಿವಿಧ ಸಂಘಟನೆಗಳವರು ಗದಗ ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿಯವರಿಗೆ ಮನವಿಪತ್ರ ಸಲ್ಲಿಸಲಾಯಿತು. 

ಪ್ರಾಯಶ್ಚಿತ ದಿನದ ಕಾರ್ಯಕ್ರಮದಲ್ಲಿ ತೋಂಟದ ಸಿದ್ಧರಾಮ ಸ್ವಾಮೀಜಿ, ಬೈರನಹಟ್ಟಿಯ ದೊರೆಸ್ವಾಮಿ ವಿರಕ್ತಮಠದ ಶಾಂತಲಿಂಗ ಸ್ವಾಮೀಜಿ, ಮಾಜಿ ಶಾಸಕ ಡಿ.ಆರ್.ಪಾಟೀಲ, ಸಾಹಿತಿ ಬಸವರಾಜ ಸೂಳಿಭಾವಿ,  ಜಾಗತಿಕ ಲಿಂಗಾಯತ ಮಹಾಸಭಾ ಅಧ್ಯಕ್ಷ ಕೆ.ಎಸ್‌.ಚೆಟ್ಟಿ, ಕಾರ್ಯದರ್ಶಿ ಶೇಖಣ್ಣ ಕವಳಿಕಾಯಿ ಇದ್ದರು.

ದಲಿತ ಸಂಘಟನೆಗಳ ಯುವಕರು ಕ್ರಾಂತಿ ಗೀತೆ ಹಾಡಿ, ಮರ್ಯಾದೆಗೇಡು ಹತ್ಯೆ ಖಂಡಿಸಿದರು. ಶುಕ್ರವಾರ ರಾತ್ರಿ ದಲಿತ ಸಂಘಟನೆಗಳಿಂದ ಗಾಂಧಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಮೊಂಬತ್ತಿ ಬೆಳಗಿಸಿ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಮರ್ಯಾದೆಗೇಡು ಹತ್ಯೆ ಖಂಡಿಸಿ ಕರ್ನಾಟಕ ದಲಿತ ವಿದ್ಯಾರ್ಥಿ ಒಕ್ಕೂಟದಿಂದ ಶುಕ್ರವಾರ ರಾತ್ರಿ ಶ್ರದ್ಧಾಂಜಲಿ ಸಭೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ತಹಶೀಲ್ದಾರ್‌ ಶ್ರೀನಿವಾಸಮೂರ್ತಿ ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಲಾಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.