ಶಿರಹಟ್ಟಿ: ತಾಲ್ಲೂಕು ಕೇಂದ್ರವಾಗಿ ದಶಕಗಳೇ ಕಳೆದರೂ ಸರ್ಕಾರಿ ಕಚೇರಿಗಳು ಬಾಡಿಗೆ ಕಟ್ಟಡಗಳಲ್ಲೇ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರಿಗೆ ಸಾಕಷ್ಟು ತೊಂದರೆಯಾಗಿದೆ. ಜತೆಗೆ ಸರ್ಕಾರದ ಹಣವೂ ಅನವಶ್ಯಕವಾಗಿ ಖರ್ಚಾಗುತ್ತಿದೆ. ಎಂಟು ತಿಂಗಳ ಹಿಂದೆ ಪಟ್ಟಣದಲ್ಲಿ ನಿರ್ಮಾಣವಾಗಿರುವ ಅರಸು ಭವನ ಈವರೆಗೂ ಉದ್ಘಾಟನೆ ಭಾಗ್ಯ ಕಂಡಿಲ್ಲ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ₹1 ಕೋಟಿ ವೆಚ್ಚದಲ್ಲಿ ಪಟ್ಟಣದ ಛಬ್ಬಿ ಮುಖ್ಯರಸ್ತೆಗೆ ಹೊಂದಿಕೊಂಡಂತೆ ಈ ಕಟ್ಟಡ ನಿರ್ಮಿಸಲಾಗಿದೆ. ಕಚೇರಿ ಮತ್ತು ಸಭಾಭವನ ಬಳಕೆಗಾಗಿ ಸುಂದರವಾಗಿ ನಿರ್ಮಿಸಿರುವ ಕಟ್ಟಡ, ಈವರೆಗೆ ಉದ್ಘಾಟನೆ ಭಾಗ್ಯ ಕಾಣದೆ ನಿರುಪಯುಕ್ತವಾಗಿ ನಿಂತಿದೆ.
ಸದ್ಯ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸೆಪ್ಟೆಂಬರ್ 2019ರಿಂದ ಈವರೆಗೂ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಸರ್ಕಾರದಿಂದ ಪ್ರತಿ ತಿಂಗಳು ₹12 ಸಾವಿರ ಬಾಡಿಗೆ ನೀಡಲಾಗುತ್ತಿದೆ. ಸುಸಜ್ಜಿತ ಕಟ್ಟಡ ನಿರ್ಮಾಣವಾಗಿದ್ದರೂ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.
‘ರಾತ್ರಿಯಾಗುತ್ತಿದ್ದಂತೆ ಈ ಕಟ್ಟಡ ಕುಡುಕರು ಮತ್ತು ಪುಂಡ ಪೋಕರಿಗಳು ತಾಣವಾಗಿ ಬದಲಾಗುತ್ತಿದೆ. ಸ್ವಂತ ಕಟ್ಟಡ ನಿರ್ಮಾಣವಾಗಿ ಹಲವು ತಿಂಗಳಾದರೂ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವುದು ಸರಿಯಲ್ಲ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಶಾಸಕರು ಪರಿಶೀಲಿಸಬೇಕು’ ಎನ್ನುವುದು ಸ್ಥಳೀಯರ ಆಗ್ರಹವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.