ADVERTISEMENT

ಮೊದಲು ವೃದ್ಧಾಪ್ಯ ವೇತನ ಆರಂಭಿಸಿದ್ದು ಇಂದಿರಾ ಗಾಂಧಿ: ಸಚಿವ ಎಚ್.ಕೆ. ಪಾಟೀಲ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2024, 15:55 IST
Last Updated 29 ಏಪ್ರಿಲ್ 2024, 15:55 IST
ಗದಗ ನಗರದ 17ನೇ ವಾರ್ಡ್‌ನಲ್ಲಿ ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಪ್ರಚಾರಾರ್ಥವಾಗಿ ನಡೆದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ.ಪಾಟೀಲ ಮಾತನಾಡಿದರು
ಗದಗ ನಗರದ 17ನೇ ವಾರ್ಡ್‌ನಲ್ಲಿ ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಪ್ರಚಾರಾರ್ಥವಾಗಿ ನಡೆದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ.ಪಾಟೀಲ ಮಾತನಾಡಿದರು   

ಗದಗ: ‘ದಿ. ಪ್ರಧಾನಿ ಇಂದಿರಾ ಗಾಂಧಿ ಮೊಟ್ಟಮೊದಲ ಬಾರಿಗೆ ವೃದ್ಧಾಪ್ಯ ವೇತನ ಆರಂಭಿಸಿದರು. ಅಂದಿನಿಂದ ಇಂದಿಗೂ ವೃದ್ಧಾಪ್ಯ ವೇತನ ಮುಂದುವರಿದಿದ್ದು ಬಡವರಿಗೆ ಆಧಾರವಾಗಿದೆ. ಇಂದಿರಾ ಗಾಂಧಿ ಅವರ ಮಾರ್ಗದರ್ಶನದಲ್ಲಿ ನಾವು ಮುಂದುವರಿಯುತ್ತಿದ್ದೇವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.

ನಗರದ 17ನೇ ವಾರ್ಡ್‌ನಲ್ಲಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಪ್ರಚಾರಾರ್ಥವಾಗಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಮೇಲೆ ಭರವಸೆ ಇಟ್ಟು ಬಹಳ ಪ್ರೀತಿ, ವಿಶ್ವಾಸ ಹಾಗೂ ಗೌರವದಿಂದ ಗ್ಯಾರಂಟಿ ಕಾರ್ಡ್ ಸ್ವೀಕರಿಸಿ, 554 ಮತಗಳನ್ನು ಲೀಡ್ ಕೊಟ್ಟು ನಮ್ಮನ್ನು ಹರಸಿದ್ದೀರಿ. ನಾವು ಕೂಡ ಕೊಟ್ಟ ವಚನದಂತೆ ನಡೆದಿಕೊಂಡಿದ್ದೇವೆ. ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ ಬಡವರ ಬದುಕು ಗಟ್ಟಿಗೊಳ್ಳಿಸಲು ಪ್ರಯತ್ನ ಮಾಡಿದ್ದೇವೆ’ ಎಂದು ಹೇಳಿದರು.

‘ಕೇಂದ್ರ ಕಾಂಗ್ರೆಸ್ ಸರ್ಕಾರ ಬಂದರೆ ಮಹಿಳೆಯರಿಗೆ ವಾರ್ಷಿಕ ₹1 ಲಕ್ಷ, ರೈತರ ಸಾಲಮನ್ನಾ, ನಿರುದ್ಯೋಗಿ ಯುವಕರಿಗೆ 2 ವರ್ಷದವರೆಗೆ ₹1 ಲಕ್ಷ ಹಾಗೂ ಜಾತಿಗಣತಿ ಮಾಡುವ ಮೂಲಕ ಹಿಂದೆ ಉಳಿದ ಜಾತಿಗಳನ್ನು ಮೇಲಕ್ಕೆತ್ತುವ ಕೆಲಸ ಮಾಡುತ್ತೇವೆ. ಆದ್ದರಿಂದ ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರಿಗೆ ಆಶೀರ್ವದಿಸಬೇಕು’ ಎಂದು ಮನವಿ ಮಾಡಿದರು.

ADVERTISEMENT

ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಮಾತನಾಡಿ, ‘ಎಚ್.ಕೆ.ಪಾಟೀಲ ಅವರ ನೇತೃತ್ವದಲ್ಲಿ ಈ ಭಾಗದಲ್ಲಿ ಮತಯಾಚನೆ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಆರ್ಥಿಕ ಸ್ಥಿತಿಯನ್ನು ಮೇಲೆತ್ತುವ ಕಾರ್ಯ ಮಾಡಲಾಗುತ್ತಿದೆ. ಕಾಂಗ್ರೆಸ್‌ನ ಮಹಾಲಕ್ಷ್ಮಿ ಯೋಜನೆಯು ಮಹಿಳೆಯರಿಗೆ ವಾರ್ಷಿಕ ₹1 ಲಕ್ಷ ಹಾಗೂ ರೈತರ ಸಂಪೂರ್ಣ ಸಾಲಮನ್ನಾ ಮಾಡುವುದು ನಮ್ಮ ಗ್ಯಾರಂಟಿ ಆಗಿದ್ದು, ತಾವೆಲ್ಲರೂ ನನಗೆ ಆಶೀರ್ವದಿಸಬೇಕು’ ಎಂದು ಮನವಿ ಮಾಡಿದರು.

17ನೇ ವಾರ್ಡ್‌ನ ಸದಸ್ಯ ಮುನ್ನಾ ರೇಷ್ಮಿ ಮಾತನಾಡಿ, ‘ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 700ಕ್ಕೂ ಹೆಚ್ಚು ಮತಗಳನ್ನು ಲೀಡ್ ಕೊಡುತ್ತೇವೆ’ ಎಂದು ಭರವಸೆ ನೀಡಿದರು.

ಮುಖಂಡರಾದ ಶಿವಮೂರ್ತಪ್ಪ ಅಗಸಿಮನಿ, ರಾಜು ಬದಿ, ರುಸ್ತುಂಸಾಬ್ ಪಠಾಣ, ಪ್ರೇಮನಾಥ ಗರಗ, ಮಲ್ಲೇಶ ಆದೋನಿ, ಮಂಜುನಾಥ ಅಗಸಿಮನಿ, ರಾಘವೇಂದ್ರ ರಾಂಪೂರ, ಗಂಗಾಧರ ನೆಳಗಾವಮಠ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.