ಶಿರಹಟ್ಟಿ: ಕಳೆದ ಮೂರು-ನಾಲ್ಕು ದಿನಗಳಿಂದ ಜಿಲ್ಲೆಯಾದ್ಯಂತ ಸಂಚಾರ ಕೈಗೊಂಡಿರುವ ಜಿಲ್ಲಾ ಪಂಚಾಯಿತಿ ಸಿಇಒ ಭರತ್ ಎಸ್ ಅವರು ಸರ್ಕಾರದ ವಿವಿಧ ಕಾಮಗಾರಿಗಳು, ಯೋಜನೆಗಳ ಅನುಷ್ಠಾನ ಹಾಗೂ ಮೂಲ ಸೌಕರ್ಯಗಳಿಗೆ ಸಂಬಂಧಿಸಿದಂತೆ ಗುರುವಾರ ಪರಿಶೀಲನೆ ನಡೆಸಿದರು.
ಶಿರಹಟ್ಟಿ ತಾಲ್ಲೂಕು ಮಜ್ಜೂರು ಹಾಗೂ ಮಾಚೇನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಪೂರ್ಣಗೊಂಡ ಕಾಮಗಾರಿಗಳನ್ನು ಪರಿಶೀಲಿಸಿದರು. ಮಜ್ಜುರ, ಶಿವಾಜಿನಗರ, ಮಾಚೇನಹಳ್ಳಿ, ತೆಗ್ಗಿನ ಭಾವನೂರ, ನವೇ ಭಾವನೂರ ಗ್ರಾಮಗಳಿಗೆ ಅನಿರೀಕ್ಷಿತ ಭೇಟಿ ನೀಡಿ, ಜೆಜೆಎಂ ಕಾಮಗಾರಿಗಳು, ಮೀಟರ್ ಅಳವಡಿಕೆ, ರಸ್ತೆ ಪುನಶ್ಚೇತನ, ನೀರಿನ ಗುಣಮಟ್ಟ, ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಗಳ ಕಾರ್ಯ ನಿರ್ವಹಣೆ ಕುರಿತು ಮಾಹಿತಿ ಪಡೆದರು. ಇದೇ ಸಂದರ್ಭದಲ್ಲಿ ಮನೆಗಳಿಗೆ ಅಳವಡಿಸಲಾಗಿರುವ ನಳಗಳ ಸಂರ್ಪಕ ಬಗ್ಗೆ ಫಲಾನುಭವಿಗಳೊಂದಿಗೆ ಚರ್ಚಿಸಿದರು.
ಗುಣಮಟ್ಟದ ಕಾಮಗಾರಿ ಕೈಗೊಳ್ಳುವಲ್ಲಿ ಅಧಿಕಾರಿಗಳು ಮತ್ತು ಗುತ್ತಿಗೆದಾರರ ಜವಾಬ್ದಾರಿ ಎಷ್ಟಿದೆಯೋ ಕಾಮಗಾರಿ ಗುಣಮಟ್ಟ ಕಾಪಾಡಿಕೊಳ್ಳುವುದು, ಸದುಪಯೋಗ ಪಡೆದುಕೊಳ್ಳುವ ಜವಾಬ್ದಾರಿ ಸಾರ್ವಜನಿಕರ ಮೇಲೂ ಇದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ರಾಮಣ್ಣ ದೊಡ್ಡಮನಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ರಾಘವೇಂದ್ರ ದೊಡ್ಡಮನಿ, ಸಹಾಯಕ ಎಂಜಿನಿಯರ್ ಮಲ್ಲಿಕಾರ್ಜುನ ಪಾಟೀಲ, ವಿಭಾಗೀಯ ಅಧಿಕಾರಿ ಮುನ್ನಿ ಹರಕುನಿ, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.