ನರೇಗಲ್: ‘ಯಾವುದು ಹೌದು; ಅದು ಅಲ್ಲ. ಯಾವುದು ಅಲ್ಲ; ಅದು ಹೌದು’ ಎಂಬ ವಾಣಿಯ ಮೂಲಕ ಜನಮಾನಸದಲ್ಲಿ ನೆಲೆ ನಿಂತಿರುವ ಇಲ್ಲಿನ ಕೋಡಿಕೊಪ್ಪದ ಹುಚ್ಚೀರಪ್ಪಜ್ಜನ ರಥೋತ್ಸವವು ಮಂಗಳವಾರ ಸಂಜೆ ಭಕ್ತ ಸಾಗರದ ನಡುವೆ ಸಂಭ್ರಮದಿಂದ ನೆರವೇರಿತು.
ಮಂಗಳವಾರ ಬೆಳಿಗ್ಗೆ 6 ಗಂಟೆಯಿಂದಲೇ ಜಾತ್ರೆಯ ಅಂಗವಾಗಿ ವಿಶೇಷ ಪೂಜಾ ಕಾರ್ಯಗಳು ನಡೆದವು. ಪಟ್ಟಣದ ಸಂಕನಗೌಡ್ರ ಮನೆಯಿಂದ ತೇರಿನ ಕಳಸ ಹಾಗೂ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲ್ಲೂಕಿನ ಸಿದ್ನೇಕೊಪ್ಪ ಗ್ರಾಮದಿಂದ ತೇರಿನ ಹಗ್ಗ ತರಲಾಯಿತು. ಸಂಜೆ 6 ಗಂಟೆಗೆ ಮಹಾರಥವನ್ನು ಭಕ್ತರು ಮಠದಿಂದ ಪಾದಗಟ್ಟಿಯವರೆಗೆ ಎಳೆದು ಭಕ್ತಿ ಸಮರ್ಪಿಸಿದರು. ಮೆರವಣಿಯುದ್ದಕ್ಕೂ ಹಠಯೋಗಿ ವೀರಪ್ಪಜ್ಜನವರಿಗೆ ಜೈ, ತ್ರಿಲೋಕಜ್ಞಾನಿ ಹುಚ್ಚೀರಪ್ಪಜ್ಜಗೆ ಜೈ ಎಂಬ ಘೋಷಣೆಗಳು ಮೊಳಗಿದವು.
ಭಜನೆ, ಜಾಂಜ್ ಮೇಳ, ಡೊಳ್ಳು ಕುಣಿತ, ಕರಡಿ ಮಜಲು, ನಂದಿಕೋಲು ಜಾತ್ರೆಯ ಮೆರುಗು ಹೆಚ್ಚಿಸಿದವು. ಭಕ್ತರು ಭಕ್ತಿ ಭಾವದಿಂದ ಉತ್ತತ್ತಿ, ಬಾಳೆಹಣ್ಣು ಎಸೆದು ನಮನ ಸಲ್ಲಿಸಿದರು. ರಥವು ಯಶಸ್ವಿಯಾಗಿ ಮರಳಿ ಸ್ವ ಸ್ಥಳಕ್ಕೆ ಬಂದು ನಿಂತಾಗ ಭಕ್ತರು ಚಪ್ಪಾಳೆ ತಟ್ಟಿ ಸಂಭ್ರಮಿಸಿದರು. ಬಳಿಕ ದೇವಸ್ಥಾನದಲ್ಲಿ ದೇವರ ದರ್ಶನ ಪಡೆದು ಕಾಯಿ ಒಡೆದು, ನೈವೇದ್ಯ ಮಾಡಿದರು.
ಜಾತ್ರೆಯ ಪ್ರಯುಕ್ತ ನರೇಗಲ್ ಹಾಗೂ ಕೋಡಿಕೊಪ್ಪ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಮನೆ, ರಸ್ತೆಗಳು ರಂಗೋಲಿಯಿಂದ ಸಿಂಗಾರಗೊಂಡಿದ್ದವು. ಜಾತ್ರೆಗೆ ಗಜೇಂದ್ರಗಡ, ಗದಗ, ರೋಣ, ಗುಜಮಾಗಡಿ, ಜಕ್ಕಲಿ, ಮಾರನಬಸರಿ, ಹಾಲಕೆರೆ, ತೋಟಗಂಟಿ, ಡ.ಸ.ಹಡಗಲಿ, ಯರೆಬೇಲೇರಿ, ನಿಡಗುಂದಿಕೊಪ್ಪದ, ರೋಣ, ಕೊತಬಾಳ, ಅಣ್ಣಿಗೇರಿ, ಯಲಬುರ್ಗಾದ ವಿವಿಧ ಭಾಗಗಳಿಂದ ಜನರು ಟ್ರಾಕ್ಟರ್, ಎತ್ತಿನ ಬಂಡಿ ಮತ್ತು ಪಾದಯಾತ್ರೆ ಮೂಲಕ ಬಂದು ವೀರಪ್ಪಜ್ಜನ ದರ್ಶನವನ್ನು ಪಡೆದು ಹರಕೆ ತೀರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.