
ಗದಗ: ‘ಕೆ.ಎಚ್.ಪಾಟೀಲ ಅವರು ರೈತರ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದರು. ಹಲವು ಖಾತೆಗಳನ್ನು ನಿಭಾಯಿಸಿದ್ದ ಅವರು, ನೇರ ಹಾಗೂ ನಿಷ್ಠುರತೆಯಿಂದ ಗುರುತಿಸಿಕೊಂಡಿದ್ದರು’ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ಹೇಳಿದರು.
ನಗರದ ಕೆ.ಎಚ್. ಪಾಟೀಲ ವೃತ್ತದಲ್ಲಿ ಗದಗ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಸಹಕಾರ ರಂಗದ ಭೀಷ್ಮ ಕೆ.ಎಚ್. ಪಾಟೀಲ ಅವರ ಪುಣ್ಯತಿಥಿಯನ್ನು ಸೋಮವಾರ ಆಚರಿಸಿ, ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.
‘ಪ್ರತಿಯೊಬ್ಬರೂ ಕೆ.ಎಚ್. ಪಾಟೀಲರ ಆದರ್ಶವನ್ನು ಅಳವಡಿಸಿಕೊಂಡು ಮುನ್ನಡೆದರೆ ಯಶಸ್ವಿ ಹಾಗೂ ಮಾದರಿ ರಾಜಕಾರಣಿಯಾಗಲು ಸಾಧ್ಯ’ ಎಂದರು.
ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಸುಜಾತಾ ದೊಡ್ಡಮನಿ, ನಗರಸಭೆ ಮಾಜಿ ಅಧ್ಯಕ್ಷೆ ರುದ್ರಮ್ಮ ಕೆರಕಲಮಟ್ಟಿ, ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಬಸವರಾಜ ಕಡೆಮನಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ವಿದ್ಯಾಧರ ದೊಡ್ಡಮನಿ, ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಉಮರ್ ಫಾರೂಕ್ ಹುಬ್ಬಳ್ಳಿ, ಗದಗ ಜಿಲ್ಲಾ ಕೆಡಿಪಿ ಸಮಿತಿ ಸಭೆಯ ಸದಸ್ಯರು, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.